ರಾಜಭವನದಿಂದ ಡಿಕೆ ಶಿವಕುಮಾರ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಆಪ್ತ ಮೂಲಗಳು ಮಾಹಿತಿ ನೀಡಿದೆ. ಇದೇ ವೇಳೆ ಕುಟುಂಬಸ್ಥರ ಜೊತೆ ವಿಶೇಷ ಹೋಮದಲ್ಲಿ ಭಾಗಿಯಾಗಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.
ಬೆಂಗಳೂರು (ಮೇ.30) ಕರ್ನಾಟಕ ಮುಂದಿನ ಮುಖ್ಯಮಂತ್ರಿಯಾಗಿ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಈ ಆಯ್ಕೆ ಬಳಿಕ ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇರವಾಗಿ ರಾಜ್ಯಪಾಲರ ಭೇಟಿಯಾಗಿ ಸರ್ಕಾರ ರಚನೆಗೆ ಅನುಮತಿ ಕೇಳಿದ್ದರು. ರಾಜಭವನದಿಂದ ತೆರಳಿದ ಡಿಕೆ ಶಿವಕುಮಾರ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಆಪ್ತ ಮೂಲಗಳು ಮಾಹಿತಿ ನೀಡಿದೆ. ಮೂಲಗಳ ಪ್ರಕಾರ ಡಿಕೆ ಶಿವಕುಮಾರ್ ಹಾಗೂ ಕುಟುಂಬಸ್ಥರು ವಿಶೇಷ ಹೋಮದಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗುತ್ತಿದೆ.
ರಾತ್ರಿ 11 ಗಂಟೆ ಬಳಿಕ ಸದಾಶಿವನಗರ ನಿವಾಸಕ್ಕೆ ಡಿಕೆ ಶಿವಕುಮಾರ್ ಆಗಮನ
ಕುಟುಂಬಸ್ಥರ ಜೊತೆ ವಿಶೇಷ ಹೋಮದಲ್ಲಿ ಪಾಲ್ಗೊಂಡಿರುವ ಡಿಕೆ ಶಿವಕುಮಾರ್ ರಾತ್ರಿ 11 ಗಂಟೆ ಬಳಿಕ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಆಗಮಿಸಲಿದ್ದಾರೆ. ಪೂಜೆ ಮುಗಿಸಿ ಕುಟುಂಬ ಸಮೇತ ನಿವಾಸಕ್ಕೆ ಮರಳಲಿದ್ದಾರೆ ಎಂದು ಮಾಹಿತಿಗಳು ಲಭ್ಯವಾಗಿದೆ.
ಕಾರ್ಯಕರ್ತರಿಗೆ ಡಿಕೆ ಶಿವಕುಮಾರ್ ಸೂಚನೆ
ಹೋಮ ಹಾಗೂ ವಿಶೇಷ ಪೂಜೆಯಲ್ಲಿ ಪಾಲ್ಗೊಲ್ಳುತ್ತಿರುವ ಕಾರಣದಿಂದ ಕಾರ್ಯಕರ್ತರಿಗೆ ಡಿಕೆ ಶಿವಕುಮಾರ್ ಮಹತ್ವದ ಸಂದೇಶ ರವಾನಿಸಿದ್ದಾರೆ. ಈ ಸಮಯದಲ್ಲಿ ಸದಾಶಿವನಗರ ಮನೆ ಬಳಿ ಯಾರೂ ಆಗಮಿಸದಂತೆ ಸೂಚಿಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಡಿಕೆ ಶಿವಕುಮಾರ್ಗೆ ಶುಭಾಶಯಗಳ ಮಹಾಪೂರ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್ಗೆ ಎಲ್ಲೆಡೆಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಇನ್ನುಳಿದ 2 ವರ್ಷ ಡಿಕೆ ಶಿವಕುಮಾರ್ ಆಡಳಿತದಲ್ಲಿ ಕರ್ನಾಟಕ ಮತ್ತಷ್ಟು ಅಭಿವೃದ್ಧಿಯಾಗಲಿ ಎಂದು ಹಾರೈಸಿದ್ದಾರೆ.
ಇತ್ತ ಸಿದ್ದರಾಮಯ್ಯ ಟ್ವೀಟ್ ಮೂಲಕ ಡಿಕೆ ಶಿವಕುಮಾರ್ ಅಭಿನಂದಿಸಿದ್ದಾರೆ. ಇದೇ ವೇಳೆ ರಾಜ್ಯ ಮತ್ತಷ್ಟು ಅಭಿವೃದ್ಧಿ ಕಾಣಲಿ ಎಂದು ಹಾರೈಸಿದ್ದಾರೆ. ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರೀಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು ಹೃತ್ಪೂರ್ವಕಾಗಿ ಹಾರೈಸುವೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಇಂದು ಕರ್ನಾಟಕ ತಲಾವಾರು ಆಧಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಲ್ಲಿಯೂ ದೇಶಕ್ಕೆ ಮಾದರಿಯಾಗಿದೆ. ನಾವು ಪ್ರಾರಂಭಿಸಿರುವ ಪ್ರತಿಯೊಂದು ಯೋಜನೆಯನ್ನೂ ಉಳಿದ ರಾಜ್ಯಗಳು ಮಾದರಿಯಾಗಿ ಸ್ವೀಕರಿಸಿ ಅನುಷ್ಠಾನಕ್ಕೆ ತರುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ಸಂಗಾತಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


