ರಾಜ್ಯದ ಪ್ರತಿ ಜಿಲ್ಲೆಯಲ್ಲೂ 50 ಸಾವಿರ ನಿವೇಶನಗಳನ್ನು ಹಂಚಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಚುನಾವಣಾ ಪ್ರಣಾಳಿಕೆಯ ಭರವಸೆಯಂತೆ, ವಸತಿರಹಿತ ಕುಟುಂಬಗಳಿಗೆ ಸೈಟ್ ನೀಡಲು ಖಾಲಿ ಸರ್ಕಾರಿ ಜಮೀನು ಗುರುತಿಸಲು ಕಂದಾಯ ಇಲಾಖೆಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.
ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನಗಳನ್ನು ಸಿದ್ಧಪಡಿಸಿ ಸ್ವಂತ ನಿವೇಶನ ಹಾಗೂ ವಸತಿರಹಿತ ಕುಟುಂಬಗಳಿಗೆ ನೀಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಇದಕ್ಕಾಗಿ ಪ್ರತಿ ಜಿಲ್ಲೆಯಲ್ಲೂ ಲಭ್ಯ ಹಾಗೂ ಖಾಲಿ ಇರುವ ಸರ್ಕಾರಿ ಜಮೀನುಗಳನ್ನು ತಕ್ಷಣವೇ ಗುರುತಿಸಿ ನಿವೇಶನಗಳ ರಚನೆಗೆ ಕ್ರಮ ವಹಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಈ ಸಂಬಂಧ ಕಂದಾಯ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು, ತಮ್ಮ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರಿಗೆ ಟಿಪ್ಪಣಿ ಮೂಲಕ ಸೂಚನೆ ನೀಡಿದ್ದಾರೆ.
ತಲಾ 50 ಸಾವಿರ ನಿವೇಶನ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಎಲ್ಲಾ ನಿವೇಶನ ಹಾಗೂ ವಸತಿರಹಿತ ಕುಟುಂಬಗಳಿಗೆ ನಿವೇಶನ ನೀಡುವ ವಾಗ್ದಾನ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ತಲಾ 50 ಸಾವಿರ ನಿವೇಶನಗಳನ್ನು ಸಿದ್ಧಪಡಿಸಿ ಹಂಚಿಕೆ ಮಾಡಲು ಸರ್ಕಾರವು ಉದ್ದೇಶಿಸಿದೆ.
ಇದನ್ನೂ ಓದಿ: Bengaluru: ಮತ್ತೊಂದು ಟೋಲ್ ಶುಲ್ಕದ 18.50 km ಉದ್ದದ ಫ್ಲೈಓವರ್: ಕನಕಪುರ ರಸ್ತೆಗೆ ಪರ್ಯಾಯ ಮಾರ್ಗ
ಈ ಪೈಕಿ ಗ್ರಾಮೀಣ ಭಾಗದಲ್ಲಿ 30*40 ಅಡಿ, ನಗರ ಪ್ರದೇಶದಲ್ಲಿ 20*30 ಅಡಿ ವಿಸ್ತೀರ್ಣದ ನಿವೇಶನಗಳನ್ನು ಸಿದ್ಧಪಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಲಭ್ಯವಿರುವ ಹಾಗೂ ಖಾಲಿ ಇರುವ ಸರ್ಕಾರಿ ಜಮೀನುಗಳನ್ನು ತಕ್ಷಣವೇ ಗುರುತಿಸಿ ನಿವೇಶನಗಳ ರಚನೆಗೆ ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳನ್ನು ಯಾವುದೇ ವಿಳಂಬಕ್ಕೆ ಆಸ್ಪದ ನೀಡದಂತೆ ತುರ್ತಾಗಿ ಕೈಗೊಳ್ಳಲು ಕೂಡಲೇ ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಟಿಪ್ಪಣಿಯಲ್ಲಿ ಸೂಚಿಸಿದ್ದಾರೆ.
ಇದನ್ನೂ ಓದಿ: Bengaluru: ಸೋಂಕು ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಕ್ಲಾರೆನ್ಸ್ ಶಾಲೆಗೆ ನೋಟಿಸ್


