ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದ್ದರೆ, ಅವರ ಪತ್ನಿ ಪಾರ್ವತಿ ಅವರು ಹೊರನಾಡು, ಶೃಂಗೇರಿಯಂತಹ ಪ್ರಸಿದ್ಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ದೈವ ದರ್ಶನ ಪಡೆಯುತ್ತಿದ್ದಾರೆ.

ಚಿಕ್ಕಮಗಳೂರು (ಏ.13): ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರೆ, ಅವರ ಪತ್ನಿ ಪಾರ್ವತಿ ಅವರು ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರಗಳ ದರ್ಶನ ಪಡೆಯುತ್ತಿದ್ದಾರೆ. ನಿನ್ನೆ ಮಧ್ಯಾಹ್ನವೇ ಜಿಲ್ಲೆಗೆ ಆಗಮಿಸಿರುವ ಸಿಎಂ ಪತ್ನಿ ಪಾರ್ವತಿ ಅವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಭಾನುವಾರ ಮಧ್ಯಾಹ್ನ 3 ಗಂಟೆಗೆ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಆ ಬಳಿಕ ಶೃಂಗೇರಿಗೆ ತೆರಳಿ ಶಾರದಾಂಬೆಯ ದರ್ಶನ ಪಡೆದ ಅವರು, ರಾತ್ರಿ ಶಾರದಾ ಪೀಠದ ಮಠದಲ್ಲೇ ವಾಸ್ತವ್ಯ ಹೂಡಿದ್ದರು. ಸೋಮವಾರ ಮುಂಜಾನೆ ಶೃಂಗೇರಿಯಿಂದ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆಯಲು ಅವರು ತೆರಳಿದ್ದಾರೆ.

Add Asianetnews Kannada as a Preferred SourcegooglePreferred

ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ

ಮತ್ತೊಂದೆಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎನ್.ಆರ್.ಪುರದ ಪ್ರವಾಸಿ ಮಂದಿರದಲ್ಲಿ (IB) ವಾಸ್ತವ್ಯ ಹೂಡಿದ್ದರು. ಇಂದು ಜಿಲ್ಲೆಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಅಂದಾಜು 38 ಕೋಟಿ ರೂಪಾಯಿ ವೆಚ್ಚದ ಸೇತುವೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಸಿಎಂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಎನ್.ಆರ್.ಪುರದಿಂದ ಮುಖ್ಯಮಂತ್ರಿಗಳು ಬೆಂಗಳೂರಿಗೆ ಹಿಂದಿರುಗಲಿದ್ದಾರೆ. ಒಟ್ಟಾರೆಯಾಗಿ, ಒಂದು ಕಡೆ ಸಿಎಂ ಪತ್ನಿಯ ಆಧ್ಯಾತ್ಮಿಕ ಭೇಟಿ ಹಾಗೂ ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರಿ ಕಾರ್ಯಕ್ರಮಗಳಿಂದಾಗಿ ಇಡೀ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.