ಯಲಹಂಕದ ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಜಾಗದಲ್ಲಿದ್ದ 167 ಅಕ್ರಮ ಶೆಡ್‌ಗಳನ್ನು ತೆರವುಗೊಳಿಸಲಾಗಿದೆ. ಈ ಕಾರ್ಯಾಚರಣೆಯಿಂದ ನಿರಾಶ್ರಿತರಾದ ನೈಜ ಸಂತ್ರಸ್ತರಿಗೆ ಪರ್ಯಾಯ ವಸತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರು (ಡಿ.29): ಯಲಹಂಕದ ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಜಾಗ ತೆರವು ಕಾರ್ಯಾಚರಣೆಯಿಂದ ನಿರಾಶ್ರಿತರಾದ ನೈಜ ವ್ಯಕ್ತಿಗಳಿಗೆ ಸರ್ಕಾರವು ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದ್ದಾರೆ.

ಅಕ್ರಮ ತಡೆಯುವುದೇ ಸರ್ಕಾರದ ಉದ್ದೇಶ

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, 'ಕೋಗಿಲು ಬಡಾವಣೆಯಲ್ಲಿ ಸುಮಾರು 15 ಎಕರೆ ಸರ್ಕಾರಿ ಜಾಗವನ್ನು ಕಸ ವಿಲೇವಾರಿ ಘಟಕಕ್ಕಾಗಿ ನಗರ ಪಾಲಿಕೆಗೆ ಹಸ್ತಾಂತರಿಸಲಾಗಿತ್ತು. ಆದರೆ, 2020-21ರಿಂದ ಅಲ್ಲಿ ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸ ಮಾಡಲಾಗುತ್ತಿತ್ತು. ಸರ್ಕಾರಿ ಜಾಗವನ್ನು ಅಕ್ರಮವಾಗಿ ಆಕ್ರಮಿಸಿಕೊಳ್ಳಲು ಅವಕಾಶ ನೀಡಲಾಗದು. ಹೀಗಾಗಿ 167 ಶೆಡ್‌ಗಳನ್ನು ಕಾನೂನುಬದ್ಧವಾಗಿ ತೆರವುಗೊಳಿಸಲಾಗಿದೆ' ಎಂದು ಸ್ಪಷ್ಟಪಡಿಸಿದರು.

ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ

ತೆರವು ಕಾರ್ಯಾಚರಣೆಯಿಂದ ಸಂಕಷ್ಟಕ್ಕೀಡಾದವರ ಬಗ್ಗೆ ದೆಹಲಿಯಲ್ಲಿ ಕೆ.ಸಿ. ವೇಣುಗೋಪಾಲ್ ಅವರು ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದ ಸಿಎಂ, 'ಅದೇ ಜಾಗದಲ್ಲಿ ಮತ್ತೆ ವಾಸಿಸಲು ಅವಕಾಶ ನೀಡಲು ಸಾಧ್ಯವಿಲ್ಲ. ಆದರೆ, ಅಲ್ಲಿ ವಾಸವಿದ್ದ ನೈಜ ವ್ಯಕ್ತಿಗಳ ಪಟ್ಟಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಕಾರ್ಪೊರೇಷನ್ ಕಮಿಷನರ್ ಅವರಿಗೆ ಸೂಚಿಸಿದ್ದೇನೆ. ಅವರ ವರದಿ ಬಂದ ತಕ್ಷಣ ಅರ್ಹರಿಗೆ ಪರ್ಯಾಯವಾಗಿ ವಸತಿ ವ್ಯವಸ್ಥೆ ಕಲ್ಪಿಸಲು ಸರ್ಕಾರ ತೀರ್ಮಾನಿಸಿದೆ' ಎಂದರು.

ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಎಚ್ಚರಿಕೆ

ಇದೇ ವೇಳೆ ಅಕ್ರಮ ಕಟ್ಟಡಗಳಿಗೆ ಸಾಥ್ ನೀಡಿದ ಅಧಿಕಾರಿಗಳ ವಿರುದ್ಧ ಸಿಎಂ ಕೆಂಡಾಮಂಡಲವಾದರು. 'ತಹಶೀಲ್ದಾರ್ ಹಾಗೂ ಪಾಲಿಕೆ ಅಧಿಕಾರಿಗಳಿಗೆ ತಿಳಿಯದೆ ಇಷ್ಟು ದೊಡ್ಡ ಮಟ್ಟದ ಅಕ್ರಮ ನಡೆಯಲು ಸಾಧ್ಯವೇ ಇಲ್ಲ. ಅಕ್ರಮವಾಗಿ ಶೆಡ್ ನಿರ್ಮಿಸಲು ಬಿಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ಇಂತಹ ಅಕ್ರಮ ನಡೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು' ಎಂದು ಎಚ್ಚರಿಸಿದರು.

ಇತ್ತೀಚೆಗಷ್ಟೇ ವಸತಿ ಸಚಿವ ಜಮೀರ್ ಅಹಮದ್ ಹಾಗೂ ಇಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಳೆ ಅಥವಾ ನಾಡಿದ್ದು ಅಧಿಕಾರಿಗಳ ವರದಿ ಬಂದ ನಂತರ ನೈಜ ಬಡವರಿಗೆ ಸೂರು ಕಲ್ಪಿಸುವ ಪ್ರಕ್ರಿಯೆಗೆ ಚಾಲನೆ ಸಿಗಲಿದೆ.