CJI BR Gavai ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿರುವ ಸಿಎಂ ಸಿದ್ದರಾಮಯ್ಯ, ಇದು ದಲಿತ ಸಮುದಾಯಕ್ಕೆ ಸೇರಿದ ನ್ಯಾಯಮೂರ್ತಿಗಳ ಮೇಲಿನ ಹಲ್ಲೆ ಎಂದು ಬಣ್ಣಿಸಿದ್ದು, ಕಿಡಿಗೇಡಿ ವಕೀಲನ ಬಂಧನಕ್ಕೆ ಆಗ್ರಹಿಸಿದ್ದಾರೆ.
ಬೆಂಗಳೂರು: ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದ್ದಾಗ, ರಾಕೇಶ್ ಎಂಬ ವಕೀಲರು ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಘಟನೆ ನಡೆದಿದೆ. ಈ ಘಟನೆಯನ್ನು ಸಿಎಂ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ. ಸಿಜೆಐ ಬಿಆರ್ ಗವಾಯಿ ನೇತೃತ್ವದ ಪೀಠದ ಮುಂದೆ ಪ್ರಕರಣಗಳ ಚರ್ಚೆ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ. ಇಂತಹ ಘಟನೆಗಳಿಂದ ವಿಚಲಿತರಾಗಬೇಡಿ ಮತ್ತು ತಾವು ವಿಚಲಿತರಾಗುವುದಿಲ್ಲ ಎಂದು ನ್ಯಾಯಮೂರ್ತಿ ಬಿಆರ್ ಗವಾಯಿ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಪಡಿಸುತ್ತೇನೆ.
ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ.
ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಗವಾಯಿ ಅವರ ಬೆಂಬಲಕ್ಕಿವೆ
ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಇಲ್ಲವೇ ಧರ್ಮಕ್ಕೆ ಸೇರಿದವರಲ್ಲ. ಈ ದೃಷ್ಟಿಯಿಂದ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ ಇಂದು ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕೆಂದು ಮನವಿ ಮಾಡುತ್ತೇನೆ.
ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತದಲ್ಲಿ ಮತದಾನ, 14 ನವೆಂಬರ್ಗೆ ರಿಸಲ್ಟ್
ಪುಂಡರಿಂದ ಈ ಕೃತ್ಯದ ಸಂಭ್ರಮ ಎಂದ ಸಿಎಂ
ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆದುಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟುಹಾಕಿರುವ ಕಾರಣಕ್ಕಾಗಿಯೇ ರಾಕೇಶ್ ಕಿಶೋರ್ ನಂತಹ ಮನುವಾದಿ ಮನಸ್ಸುಗಳು ಸಮಾಜದಲ್ಲಿ ಹುಟ್ಟಿಕೊಂಡಿವೆ ಎನ್ನುವುದನ್ನು ನಾವು ಮರೆಯಬಾರದು. ನಾಥೂರಾಮ್ ಗೋಡ್ಸೆಯಂತಹ ಒಬ್ಬ ಕೊಲೆಗಡುಕನನ್ನು ದೇಶಪ್ರೇಮಿ ಎಂದು ಮೆರೆಸಲು ಹೊರಟಿರುವ ರೀತಿಯಲ್ಲಿಯೇ ಕೆಲವು ಪುಂಡರು ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ.
ಇದನ್ನು ಓದಿ: 'ಸನಾತನಕ್ಕೆ ಅವಮಾನ ಸಹಿಸೋದಿಲ್ಲ..' ಸಿಜೆಐ ಬಿಆರ್ ಗವಾಯಿಗೆ ಶೂ ಎಸೆಯಲು ಯತ್ನಿಸಿದ ವಕೀಲ!
