‘ಪಕ್ಷ ದ್ರೋಹದ ಕೆಲಸ ಮಾಡಿ ಬಿಜೆಪಿಗೆ ಹೋಗಿರುವ ಶಾಸಕ ಬೈರತಿ ಬಸರಾಜ್‌ ಗೆ ಟಿಕೆಟ್‌ ಕೊಡುವ ಸಲುವಾಗಿ 2013ರಲ್ಲಿ ಎ.ಕೃಷ್ಣಪ್ಪ ಅವರಿಗೆ ಟಿಕೆಟ್‌ ತಪ್ಪಿಸಲು ನಾನೇ ಕಾರಣ. ಇಂದು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿರುವ ಅವರ ಪುತ್ರಿ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಅವರಿಗೆ ರಾಜಕೀಯವಾಗಿ ಅನ್ಯಾಯವಾಗಲು ಬಿಡಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು (ಅ.21) :  ‘ಪಕ್ಷ ದ್ರೋಹದ ಕೆಲಸ ಮಾಡಿ ಬಿಜೆಪಿಗೆ ಹೋಗಿರುವ ಶಾಸಕ ಬೈರತಿ ಬಸರಾಜ್‌ ಗೆ ಟಿಕೆಟ್‌ ಕೊಡುವ ಸಲುವಾಗಿ 2013ರಲ್ಲಿ ಎ.ಕೃಷ್ಣಪ್ಪ ಅವರಿಗೆ ಟಿಕೆಟ್‌ ತಪ್ಪಿಸಲು ನಾನೇ ಕಾರಣ. ಇಂದು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿರುವ ಅವರ ಪುತ್ರಿ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಅವರಿಗೆ ರಾಜಕೀಯವಾಗಿ ಅನ್ಯಾಯವಾಗಲು ಬಿಡಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಕೆಪಿಸಿಸಿ ಕಚೇರಿಯಲ್ಲಿ ತಮ್ಮ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌, ಬಿಜೆಪಿ ಮುಖಂಡ ಶ್ರೀನಿವಾಸ್‌ ಹಾಗೂ ಮಾಜಿ ಪಾಲಿಕೆ ಸದಸ್ಯ ನರಸಿಂಹ ನಾಯಕ್‌ ಸೇರಿ ನೂರಾರು ಮಂದಿಯನ್ನು ಸ್ವಾಗತಿಸಿ ಅವರು ಮಾತನಾಡಿದರು.

ಕೇಸರಿ ಪಾಳಯಕ್ಕೆ ಬಿಗ್ ಶಾಕ್; ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ ಇಂದು ಕಾಂಗ್ರೆಸ್ ಸೇರ್ಪಡೆ!

ಮಾಜಿ ಸಚಿವ ದಿ. ಎ.ಕೃಷ್ಣಪ್ಪ ಅವರ ಕಾಂಗ್ರೆಸ್‌ ಪಕ್ಷ ಕಟ್ಟಿದವರು. 2013ರಲ್ಲಿ ಈಗ ಪಕ್ಷ ದ್ರೋಹ ಮಾಡಿ ಹೋದ ಬೈರತಿ ಬಸವರಾಜ್‌ಗೆ ಟಿಕೆಟ್ ನೀಡಲು ಕೃಷ್ಣಪ್ಪ ಅವರಿಗೆ ಟಿಕೆಟ್‌ ತಪ್ಪಿಸಲಾಯಿತು. ಅದಕ್ಕೆ ನಾನೇ ಕಾರಣ. ಟಿಕೆಟ್‌ ಸಿಗದಿದ್ದಾಗ ಬಹಳ ನೊಂದುಕೊಂಡಿದ್ದರು. ಪೂರ್ಣಿಮಾ ಶ್ರೀನಿವಾಸ್‌ ಬಿಜೆಪಿಗೆ ಸೇರಿ ಹಿರಿಯೂರಿನಿಂದ ಶಾಸಕರಾಗಿದ್ದರು. ತಂದೆಗೆ ಟಿಕೆಟ್‌ ತಪ್ಪಿಸಲು ಕಾರಣವಾದರೂ ಅವರು ನನ್ನ ಮೇಲೆ ಬೇಸರ ಮಾಡಿಕೊಂಡಿಲ್ಲ. ಅವರು ಬಿಜೆಪಿಗೆ ಸೇರಿದ್ದರೂ ಅವರಲ್ಲಿ ಕಾಂಗ್ರೆಸ್‌ ರಕ್ತವೇ ಹರಿಯುತ್ತಿತ್ತು. ಇದೀಗ ಕಾಂಗ್ರೆಸ್‌ಗೆ ವಾಪಸಾಗಿದ್ದು ಅವರಿಗೆ ಅನ್ಯಾಯವಾಗಲು ಬಿಡಲ್ಲ ಎಂದು ಮಾತು ನೀಡಿದರು.

ಪೂರ್ಣಿಮಾ ಮತ್ತು ಶ್ರೀನಿವಾಸ್ ಸಾಮಾಜಿಕ ನ್ಯಾಯದ ಪರವಾಗಿರುವವರು. ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಧ್ವನಿಯಾಗಿ ಎ.ಕೃಷ್ಣಪ್ಪ, ಪೂರ್ಣಿಮಾ ಮತ್ತು ಶ್ರೀನಿವಾಸ್ ಮೊದಲಿನಿಂದಲೂ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಬಿಜೆಪಿ ಜಾತಿ ತಾರತಮ್ಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಎಲ್ಲಾ ಜಾತಿಯ ಬಡವರು ಮತ್ತು ಶೂದ್ರ ಸಮುದಾಯದವರು ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡು ರಾಜಕೀಯ ನಿಲುವು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.

ಪೂರ್ಣಿಮಾ ಶ್ರೀನಿವಾಸ್‌ ಮಾತನಾಡಿ, ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಬೇಕು. ಹಟ್ಟಿಗಳಲ್ಲಿ ವಾಸ ಮಾಡುವ ಸಮುದಾಯಗಳನ್ನು ಎಸ್‌.ಟಿಗೆ ಸೇರಿಸಬೇಕು. ಅಲೆಮಾರಿ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ಮಾಡಿ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂಬುದು ಯಾದವ ಸಮುದಾಯದ ಬೇಡಿಕೆ. ಈ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ, ಪರಿಷತ್‌ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್‌, ಸಚಿವ ಡಿ.ಸುಧಾಕರ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿ ಹಲವರು ಹಾಜರಿದ್ದರು.

ಕಾಂಗ್ರೆಸ್‌ ಸೇರುವವರ ದೊಡ್ಡ ಲಿಸ್ಟ್ ಇದೆ: ಡಿಕೆಶಿ

\Bಬೆಂಗಳೂರು:\B‘ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಅವರನ್ನು ಪಕ್ಷಕ್ಕೆ ಸೆಳೆಯಲು ಹಿಂದೆಯೇ ಗಾಳ ಹಾಕಿದ್ದೆ. ಅವರು ಪಕ್ಷಕ್ಕೆ ಬಾರದಿದ್ದಾಗ ಅವರ ಪತಿ ಶ್ರೀನಿವಾಸ್ ಅವರಿಗೆ ಗಾಳ ಹಾಕಿದ್ದೆ. ಈಗ ಅಂತಿಮವಾಗಿ ಕಾಂಗ್ರೆಸ್‌ ಸೇರುತ್ತಿದ್ದು, ಹೀಗೆ ಕಾಂಗ್ರೆಸ್‌ ಸೇರುವವರ ದೊಡ್ಡ ಪಟ್ಟಿಯೇ ಇದೆ. ಸಮಯ ಬಂದಾಗ ಬಹಿರಂಗಪಡಿಸುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಪತಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸಲು 'ಕೈ' ಹಿಡಿದ ಬಿಜೆಪಿ ನಾಯಕಿ..!

ನಾವು ಎ.ಕೃಷ್ಣಪ್ಪ ಅವರ ಜತೆಯಲ್ಲಿ ಬೆಂಗಳೂರು ಜಿಲ್ಲೆಯಲ್ಲಿ ಒಟ್ಟಾಗಿ ರಾಜಕಾರಣ ಮಾಡಿದವರು. ವೀರಪ್ಪ ಮೊಯ್ಲಿ ಅವರು ಟಿಕೆಟ್ ನೀಡಿ ಅವರ ಬೆಳವಣಿಗೆಗೆ ಪ್ರೋತ್ಸಾಹ ನೀಡಿದ್ದರು. ನಮ್ಮ ತಪ್ಪುಗಳಿಂದ ಅವರ ಜತೆಗಿನ ಕೊಂಡಿ ಕಳಚಿತ್ತು. ಕೃಷ್ಣಪ್ಪ ಅವರ ಪುತ್ರಿ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಮೂಲಕ ಇಂದು ಮತ್ತೆ ಆ ಕೊಂಡಿ ಬೆಸೆದುಕೊಂಡಿದೆ ಎಂದರು.

ಇಂದು ಕೇವಲ ಪೂರ್ಣಿಮಾ ಮಾತ್ರವಲ್ಲದೆ ಕರ್ನಾಟಕ ರಾಜ್ಯದ ಪ್ರವರ್ಗ 1ರ ಜಾತಿಯ ಒಕ್ಕೂಟ, ಕರ್ನಾಟಕ ರಾಜ್ಯ ಗೊಲ್ಲ ಯಾದವ ಸಂಘ ಸೇರಿದಂತೆ ಅನೇಕ ಸಂಘಟನೆಗಳ 4-5 ಸಾವಿರ ಕಾರ್ಯಕರ್ತರು ಪಕ್ಷ ಸೇರುತ್ತಿದ್ದಾರೆ. ಇದೇ ರೀತಿ ಕಾಂಗ್ರೆಸ್ ಪಕ್ಷ ಸೇರುವವರ ದೊಡ್ಡ ಪಟ್ಟಿ ಇದೆ. ಅದನ್ನು ಈಗ ಬಹಿರಂಗಪಡಿಸುವುದಿಲ್ಲ. ಒಬ್ಬೊಬ್ಬರನ್ನೇ ಪಕ್ಷಕ್ಕೆ ಸೇರಿಸಿಕೊಳ್ಳುವ ಕೆಲಸ ಮಾಡುತ್ತೇವೆ. ಈ ಪ್ರಕ್ರಿಯೆ ಇಲ್ಲಿಗೆ ನಿಲ್ಲಬಾರದು. ಪ್ರತಿ ಬೂತ್ ಹಾಗೂ ಹಳ್ಳಿಗಳಲ್ಲಿ ಇದೇ ರೀತಿ ಕಾರ್ಯಕ್ರಮಗಳನ್ನು ಮಾಡಿ ಅಲ್ಲಿನ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಕರೆ ನೀಡಿದರು.