ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂಬ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿ, 18,171 ಕೋಟಿ ರು. ಬರ ಪರಿಹಾರ ಕೇಳಿದ್ದೇವೆ. ಆದರೆ, ಒಂದು ರು.ಗಳನ್ನೂ ನೀಡಿಲ್ಲ. ಬರ ಪರಿಹಾರ ಕೊಡಿ ಅಂದರೆ ಕೊಡಲಿಲ್ಲ. ಈಗ ಮೋದಿ ಅವರು ನಮ್ಮ ಬಳಿ ಹಣ ಇಲ್ಲ ಎಂದು ಆರೋಪಿಸುತ್ತಿದ್ದಾರೆ. ಹೀಗೆ ಆರೋಪ ಮಾಡಲು ಅವರಿಗೆ ಯಾವುದೇ ನೈತಿಕತೆಯಿಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು(ಮಾ.19): ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿ ಐದು ತಿಂಗಳಾಯಿತು. ಆದರೆ, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಒಂದೇ ಒಂದು ಪೈಸೆಯೂ ಹಣ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂಬ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿ, 18,171 ಕೋಟಿ ರು. ಬರ ಪರಿಹಾರ ಕೇಳಿದ್ದೇವೆ. ಆದರೆ, ಒಂದು ರು.ಗಳನ್ನೂ ನೀಡಿಲ್ಲ. ಬರ ಪರಿಹಾರ ಕೊಡಿ ಅಂದರೆ ಕೊಡಲಿಲ್ಲ. ಈಗ ಮೋದಿ ಅವರು ನಮ್ಮ ಬಳಿ ಹಣ ಇಲ್ಲ ಎಂದು ಆರೋಪಿಸುತ್ತಿದ್ದಾರೆ. ಹೀಗೆ ಆರೋಪ ಮಾಡಲು ಅವರಿಗೆ ಯಾವುದೇ ನೈತಿಕತೆಯಿಲ್ಲ ಎಂದರು.

Add Asianetnews Kannada as a Preferred SourcegooglePreferred

ಕೇಂದ್ರ ಸರ್ಕಾರ ನಯಾ ಪೈಸೆ ಬರ ಪರಿಹಾರ ಕೊಡದಿದ್ದರೂ, ರಾಜ್ಯದ ಬೊಕ್ಕಸದಿಂದಲೇ ರೈತರಿಗೆ ಬರ ಪರಿಹಾರ ನೀಡಿದ್ದೇವೆ. ಬರಗಾಲದಲ್ಲಿ ನರೇಗಾ ದಿನಗಳನ್ನು ಹೆಚ್ಚಿಸಿ ಎಂದು ಕೇಳಿದೆವು. ಈವರೆಗೆ ಅದನ್ನೂ ಮಾಡಲಿಲ್ಲ. ಕೇಂದ್ರ ಸರ್ಕಾರ ಕೇವಲ ಜಿಎಸ್‌ಟಿ ಸಂಗ್ರಹಿಸುವುದು, ಅದನ್ನು ರಾಜ್ಯಗಳಿಗೆ ಕೊಡದೆ ತಮ್ಮಲ್ಲೇ ಇಟ್ಟುಕೊಂಡು ಅನ್ಯಾಯ ಮಾಡೋಕೆ ಮಾತ್ರ ಇರುವುದೇ ಎಂದು ಪ್ರಶ್ನಿಸಿದರು.

ಚುನಾವಣಾ ಬಾಂಡ್ ಬಿಜೆಪಿ ಪಾಲಿಗೆ ಸುಲಿಗೆಯ ಬ್ರಹ್ಮಾಸ್ತ್ರ: ಸಿಎಂ ಸಿದ್ದರಾಮಯ್ಯ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಮಾಡಿದ ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಜಯ ಗಳಿಸಿದೆ. ಲೋಕಸಭಾ ಚುನಾವಣೆಯಲ್ಲೂ ಅದು ಮರುಕಳಿಸಲಿದ್ದು, ನರೇಂದ್ರ ಮೋದಿ ಪ್ರಚಾರದಿಂದ ಬಿಜೆಪಿಗೆ ಯಾವುದೇ ಲಾಭವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಮ ಮತ್ತು ಮೋದಿ ಹೆಸರಿನಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಅದಕ್ಕಾಗಿಯೇ ಮೋದಿ ಅವರನ್ನು ಪ್ರಚಾರಕ್ಕೆ ಹೆಚ್ಚಾಗಿ ರಾಜ್ಯಕ್ಕೆ ಕರೆತರುತ್ತಿದ್ದಾರೆ. ಆದರೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೋದಿ ಅವರು ಪ್ರಚಾರ ಮಾಡಿದ ಕ್ಷೇತ್ರಗಳಲ್ಲೆಲ್ಲ ಕಾಂಗ್ರೆಸ್‌ ಜಯ ಗಳಿಸಿದೆ. ನರೇಂದ್ರ ಮೋದಿ ಅವರ ಪ್ರಚಾರದಿಂದ ಬಿಜೆಪಿಗೆ ಸಿಗುವ ಫಲ ಇಷ್ಟೇ ಎಂದು ಲೇವಡಿ ಮಾಡಿದರು.

‘ರಾಜ್ಯದಲ್ಲಿ ಕಾಂಗ್ರೆಸ್‌ನ ಟಿಕೆಟ್‌ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಅದೇ ಬಿಜೆಪಿಯಲ್ಲಿ ಅಭ್ಯರ್ಥಿಗಳ ಕೊರತೆಯಿದೆ. ಆದರೂ, ನಮ್ಮ ಮೇಲೆ ಆರೋಪಿಸುತ್ತಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ, ಜನರ ಕೆಲಸ ಮಾಡಿದ್ದೇವೆ. ಜನರ ಭಾವನೆ ಕೆರಳಿಸಿ ಅವರಿಗೆ ದ್ರೋಹ ಮಾಡಿಲ್ಲ. ಹೀಗಾಗಿ ನಾವು ರಾಜ್ಯದಲ್ಲಿ ಕನಿಷ್ಠ 20 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.