ಎನ್.ಪಿ.ಎಸ್ ರದ್ದುಪಡಿಸಿರುವ ರಾಜ್ಯಗಳಲ್ಲಿ ಅನುಸರಿಸಿರುವ ಕ್ರಮಗಳ ಕುರಿತು ಪರಿಶೀಲಿಸಲಾಗುತ್ತದೆ. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಲಿದೆ. ರದ್ದತಿಯ ಸಾಧ್ಯಾಸಾಧ್ಯತೆಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ನಿಯೋಗಕ್ಕೆ ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು(ಜ.07): ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್.ಪಿ.ಎಸ್) ರದ್ದತಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟದ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘ ಹಾಗೂ ಇನ್ನಿತರ ಸಂಘಟನೆಗಳ ನಿಯೋಗದೊಂದಿಗೆ ಗೃಹ ಕಚೇರಿ ಕೃಷ್ಣದಲ್ಲಿ ಶನಿವಾರ ಸಭೆ ನಡೆಸಿದ ಸಿದ್ದರಾಮಯ್ಯ, ಎನ್.ಪಿ.ಎಸ್ ರದ್ದುಪಡಿಸಿರುವ ರಾಜ್ಯಗಳಲ್ಲಿ ಅನುಸರಿಸಿರುವ ಕ್ರಮಗಳ ಕುರಿತು ಪರಿಶೀಲಿಸಲಾಗುತ್ತದೆ. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಲಿದೆ. ರದ್ದತಿಯ ಸಾಧ್ಯಾಸಾಧ್ಯತೆಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ನಿಯೋಗಕ್ಕೆ ತಿಳಿಸಿದರು. 

NPS ಹೂಡಿಕೆ ಈಗ ಇನ್ನಷ್ಟು ಸರಳ; ಕ್ಯುಆರ್ ಕೋಡ್ ಬಳಸಿ ಕೊಡುಗೆಗೆ ಅವಕಾಶ

ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯಡಿ ಸರ್ಕಾರಿ ನೌಕರರಿಗೆ ನಿವೃತ್ತಿಯ ಬಳಿಕ ಮಾಸಿಕ ಅತಿ ಕಡಿಮೆ ಪಿಂಚಣಿ ಬರುತ್ತದೆ. ಅದರಲ್ಲಿ ಗೌರವಯುತ ನಿವೃತ್ತಿ ಜೀವನ ನಡೆಸುವುದು ಕಷ್ಟವಾಗುತ್ತದೆ. ಹೀಗಾಗಿ, ಎನ್‌.ಪಿ.ಎಸ್ ರದ್ದುಪಡಿಸಿ ಹಳೇ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಸಂಘಟನೆಗಳ ಮುಖಂಡರು ಮನವಿ ಮಾಡಿದರು.

ನಿಯೋಗದಲ್ಲಿ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ್ ಹಾಗೂ ವಿವಿಧ ಸರ್ಕಾರಿ ಸಂಘಗಳ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.