Asianet Suvarna News Asianet Suvarna News

ಮುಡಾ ಹಗರಣ: ನಾನು ಸಂಪತ್ತು ಬಯಸಿಲ್ಲ, ಈ ಸೈಟ್‌ಗಳು ತೃಣಕ್ಕೆ ಸಮ, ಸಿಎಂ ಪತ್ನಿ ಪಾರ್ವತಿ

ನಾನೆಂದೂ ಮನೆ, ಆಸ್ತಿ, ಚಿನ್ನ ಹಾಗೂ ಸಂಪತ್ತನ್ನು ಬಯಸಿದವಳಲ್ಲ. ಈ ನಿವೇಶನಗಳು ತೃಣಕ್ಕೆ ಸಮ. ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಯಾರೊಂದಿಗೂ ಚರ್ಚಿಸದೆ ಸೈಟು ವಾಪಸು ಮಾಡಿದ್ದೇನೆ. ಇಡೀ ಪ್ರಕರಣದ ತನಿಖೆ ನಡೆಸಿ ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ 

CM Siddaramaiah Wife Parvati react to 14 sites returned to Muda grg
Author
First Published Oct 1, 2024, 8:47 AM IST | Last Updated Oct 1, 2024, 8:47 AM IST

ಬೆಂಗಳೂರು(ಅ.01):  ಹಠಾತ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮುಡಾದಿಂದ ಪಡೆದಿದ್ದ 14 ನಿವೇಶನಗಳನ್ನು ಹಿಂತಿರುಗಿಸಿ, 'ನಾನೆಂದೂ ಮನೆ, ಆಸ್ತಿ, ಚಿನ್ನ ಹಾಗೂ ಸಂಪತ್ತನ್ನು ಬಯಸಿದವಳಲ್ಲ. ಈ ನಿವೇಶನಗಳು ತೃಣಕ್ಕೆ ಸಮ. ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಯಾರೊಂದಿಗೂ ಚರ್ಚಿಸದೆ ಸೈಟು ವಾಪಸು ಮಾಡಿದ್ದೇನೆ. ಇಡೀ ಪ್ರಕರಣದ ತನಿಖೆ ನಡೆಸಿ' ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಪತ್ರದ ಪೂರ್ಣಪಾಠ: 

'ನನ್ನ ಪತಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು ನಾನು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು. ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂದಿಸಿ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. 

ಮುಡಾ ಉರುಳು ಸಿದ್ದರಾಮಯ್ಯ ಪುತ್ರ ಯತೀಂದ್ರಗೂ ಸುತ್ತಿಕೊಳ್ಳುವ ಸಾಧ್ಯತೆ!

ನನ್ನ ಸ್ವಂತ ಸೋದರ ಅರಿಶಿನ-ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ದಾಂತವಾಗುತ್ತದೆ, ಇದರಿಂದ ನನ್ನ ಪತಿ ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ. ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನ ನ್ಯೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನೆಗಳು ತೃಣಕ್ಕೆ ಸಮ. ಹೀಗಾಗಿ 14 ಸೈಟ್ ವಾಪಸ್ ನೀಡಲು ನಿರ್ಧರಿಸಿದ್ದೇನೆ. 

ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಈ ಬಗ್ಗೆ ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾ ಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ದ ಹೋರಾಡಬೇಕು. ಅವರ ಸಂಜೆಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರ ಕೈಬಿಟ್ಟಿದ್ದೆ.' - ಶ್ರೀಮತಿ ಪಾರ್ವತಿ

ಸಿಎಂ ಪತ್ನಿಯಿಂದ ಮುಡಾಗೆ ಎಲ್ಲ 14 ಸೈಟ್‌ಗಳು ವಾಪಸ್‌

ಬೆಂಗಳೂರು: ಅಚ್ಚರಿಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ವಿವಾದಕ್ಕೆ ಸಿಲುಕಿರುವ 14 ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ನಿವೇಶನಗಳನ್ನು ಹಿಂತಿರುಗಿಸಿದ್ದಾರೆ. ಈ ಮೂಲಕ ಕಳೆದ ಹಲವು ತಿಂಗಳಿಂದ ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದದ ತರಂಗವನ್ನೇ ಎಬ್ಬಿಸಿ ರುವ 'ಮುಡಾ ಹಗರಣ' ಕ್ಕೆ ಮಹತ್ವದ ತಿರುವು ಲಭಿಸಿದಂತಾಗಿದೆ.

ಈ ಬಗ್ಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಪತ್ರ ಬರೆದಿರುವ ಅವರು, 'ಮುಡಾದಿಂದ ನನಗೆ ಸಿಕ್ಕ 14 ಸೈಟ್‌ಗಳನ್ನು ಮರಳಿಸುತ್ತಿದ್ದೇನೆ. ದಯವಿಟ್ಟು ಈ ನಿಟ್ಟಿನಲ್ಲಿ ಆದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳಿ' ಎಂದು ಕೋರಿದ್ದಾರೆ. 

ಮುಡಾ ಕೇಸ್‌: ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್ ಸಂಭವ

'ಮೈಸೂರು ತಾಲೂಕು ಕಸಬಾ ಹೋಬಳಿ ಕೆಸರೆ ಗ್ರಾಮದ ಸರ್ವೆ ನಂ.464 ರಲ್ಲಿ 3 ಎಕರೆ 16 ಗುಂಟೆ ವಿಸ್ತೀ ರ್ಣದ ನನ್ನ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದೆ. ಇದಕ್ಕಾಗಿ ಮುಡಾ 14 ನಿವೇಶನಗಳನ್ನು ಮಂಜೂರು ಮಾಡಿದೆ. ಈ ನಿವೇಶನಗಳ ಕ್ರಯಪತ್ರ ರದ್ದುಗೊಳಿಸಿ ಹಿಂತಿರುಗಿಸಲು ನಿರ್ಧರಿಸಿದ್ದು, ಸೈಟ್ಗಗಳನ್ನು ಸಹ ಮುಡಾಕ್ಕೆ ಮರಳಿ ಹಸ್ತಾಂತರಿಸುತ್ತಿದ್ದೇನೆ' ಎಂದಿದ್ದಾರೆ. 

ನಿವೇಶನ ಹಿಂಪಡೆದು ಸಮಗ್ರ ತನಿಖೆ ನಡೆಸಿ: ಬಳಿಕ ಪತ್ರಿಕಾ ಹೇಳಿಕೆ ನೀಡಿರುವ ಪಾರ್ವತಿ ಅವರು, 'ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ' ಎಂದು ಹೇಳಿದ್ದಾರೆ.

Latest Videos
Follow Us:
Download App:
  • android
  • ios