ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರದ ಮೊದಲ ದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಮಳೆಯಿಂದ ಮೃತರಾದ ಯುವತಿ ಸಂಬಂಧಿಕರಿಗೆ ಖುದ್ದಾಗಿ ತೆರಳಿ ಸಾಂತ್ವನ ತಿಳಿಸಿದ್ದಲ್ಲದೇ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಬೆಂಗಳೂರು (ಮೇ.22) : ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರದ ಮೊದಲ ದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಮಳೆಯಿಂದ ಮೃತರಾದ ಯುವತಿ ಸಂಬಂಧಿಕರಿಗೆ ಖುದ್ದಾಗಿ ತೆರಳಿ ಸಾಂತ್ವನ ತಿಳಿಸಿದ್ದಲ್ಲದೇ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶನಿವಾರ ಪ್ರಮಾಣವಚನ ಸ್ವೀಕರಿಸಿದ ಮುಖ್ಯಮಂತ್ರಿಗಳು ಭಾನುವಾರ ಬೆಳಗ್ಗೆ ತಮ್ಮ ನಿವಾಸದ ಬಳಿಗೆ ಆಗಮಿಸಿದ ನಾಯಕರೊಂದಿಗೆ ಚರ್ಚಿಸಿದರು. ಈ ವೇಳೆ ಹಿರಿಯ ನಾಯಕರಾದ ಟಿ.ಬಿ. ಜಯಚಂದ್ರ, ಬಸವರಾಜ ರಾಯರೆಡ್ಡಿ, ದಿನೇಶ್‌ ಗುಂಡೂರಾವ್‌ ಸೇರಿದಂತೆ ಹಲವರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದರು ಎಂದು ತಿಳಿದುಬಂದಿದೆ.

ಬಳಿಕ ಬಳಿಕ ಮೊಮ್ಮಗ ಧವನ್‌ ರಾಕೇಶ್‌ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗಿಯಾಗಿ ಪಿಯುಸಿ ಮುಗಿಸಿದ ಮೊಮ್ಮಗನಿಗೆ ಶುಭ ಹಾರೈಸಿದರು. ಬಳಿಕ ಕೆಪಿಸಿಸಿ ಕಚೇರಿಯಲ್ಲಿನ ರಾಜೀವ್‌ಗಾಂಧಿ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾದರು.

ಮಳೆ ಹಾನಿ ಸ್ಥಳಕ್ಕೆ ಭೇಟಿ:

ಮಧ್ಯಾಹ್ನ ಸುರಿದ ಅಬ್ಬರದ ಮಳೆಯಿಂದಾಗಿ ಕೆ.ಆರ್‌. ವೃತ್ತದ ಕೆಳಸೇತುವೆಯಲ್ಲಿ ನೀರು ತುಂಬಿಕೊಂಡು ಕಾರು ಮುಳುಗಡೆಯಾಗಿ ಯುವತಿಯೊಬ್ಬರು ಮೃತಪಟ್ಟಿದ್ದರು. ವಿಷಯ ಅರಿತು ಕೂಡಲೇ ಸ್ಥಳಕ್ಕೆ ದಾವಿಸಿದ ಅವರು ಕೆ.ಆರ್‌. ವೃತ್ತದಲ್ಲಿ ತುಂಬಿಕೊಂಡಿದ್ದ ನೀರು ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದ ಸೇಂಟ್‌ ಮಾರ್ಥಾಸ್‌ ಆಸ್ಪತ್ರೆಗೆ ತೆರಳಿ ಯುವತಿಯ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಜತೆಗೆ ಮೃತರ ಕುಟುಂಬಕ್ಕೆ 5 ಲಕ್ಷ ರು. ಪರಿಹಾರ ಘೋಷಿಸಿದರು.

ಅಧಿಕಾರಿಗಳೊಂದಿಗೆ ಸಭೆ:

ನಂತರ ಮಳೆ ಹಾನಿಯೊಂದ ಸಮಸ್ಯೆಗಳು ಪುನರಾವರ್ತನೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚಿಸಿದರು. ಈ ವೇಳೆ ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಅಧಿಕಾರಿಗಳು ಸಮನ್ವಯ ಸಾಧಿಸಿ ಕೆಲಸ ಮಾಡುವಂತೆ ಸೂಚನೆ ನೀಡಿದರು.