ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಬೆಂಗಳೂರು (ನ.28) : ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಮಂಗಳವಾರ ದೆಹಲಿಯಲ್ಲಿ ಹಿರಿಯ ವಕೀಲರಾದ ಮುಕುಲ್‌ ರೋಹಟಗಿ ಅವರನ್ನು ಭೇಟಿ ಮಾಡಲಿರುವ ಮುಖ್ಯಮಂತ್ರಿಗಳು, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಸಚಿವರನ್ನೂ ಕಾಣುವ ನಿರೀಕ್ಷೆಯಿದೆ.

Add Asianetnews Kannada as a Preferred SourcegooglePreferred

ತಮ್ಮ ದೆಹಲಿ ಭೇಟಿ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕರ್ನಾಟಕ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಿವರಾಜ ಪಾಟೀಲ್‌ ಸೇರಿದಂತೆ ಸಚಿವರು, ಕಾನೂನು ತಜ್ಞರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯ ಅವಲೋಕನ ನಡೆಸಿದರು.

karnataka maharashtra border dispute: ನಾವೂ ಕರ್ನಾಟಕ ಸೇರ್ತೀವಿ: ಪಂಢರಪುರದಲ್ಲೂ ಕೂಗು!

ಮಹಾರಾಷ್ಟ್ರ ಸರ್ಕಾರ 2004ರಲ್ಲಿ ಹೂಡಿರುವ ಪ್ರಕರಣ ಸಂಬಂಧ ಈವರೆಗೆ ನಡೆದಿರುವ ಬೆಳವಣಿಗೆಗಳು ಹಾಗೂ ನ.30 ರಂದು ನಡೆಯುವ ವಿಚಾರಣೆ ವೇಳೆ ಪ್ರಮುಖವಾಗಿ ಯಾವೆಲ್ಲಾ ಅಂಶಗಳನ್ನು ಎತ್ತಲಾಗುತ್ತದೆ ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

‘2017ರಲ್ಲಿ ಅಂದಿನ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಪ್ರಕರಣವನ್ನು ಕೈಗೆತ್ತಿಕೊಳ್ಳಬೇಕೋ ಬೇಡವೋ ಎಂದು ಮೆಂಟೇನಬಿಲಿಟಿ ಬಗ್ಗೆ ಪ್ರಶ್ನೆ ಕೇಳಿ ಆದೇಶ ಮಾಡಿದ್ದರು. ಈ ಆದೇಶದನ್ವಯ ಮೆಂಟೇನಬಿಲಿಟಿ ಬಗ್ಗೆ ಚರ್ಚೆಯಾಗಲಿದೆ. ಈ ಬಗ್ಗೆ ನಮ್ಮ ನಡೆ ಏನಿರಬೇಕು, ಸಂವಿಧಾನ ಏನು ಹೇಳುತ್ತದೆ ಅವೆಲ್ಲವನ್ನೂ ಚರ್ಚೆ ಮಾಡಿದ್ದೇವೆ. ನ್ಯಾಯಮೂರ್ತಿ ಶಿವರಾಜ್‌ ಪಾಟೀಲ್‌ ಅವರು ಸಂವಿಧಾನ, ರಾಜ್ಯ ಪುನರ್‌ ವಿಂಗಡನಾ ಕಾಯ್ದೆ ಹಾಗೂ ಸತ್ಯಾಂಶ ಗಳು ನಮ್ಮ ಪರವಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ. ಎ. ಜಿ ಪ್ರಭುಲಿಂಗ ನಾವಡಗಿ, ಹಾಗೂ ನ್ಯಾ. ಉದಯ ಹೊಳ್ಳ ಅವರು ಕೆಲವು ನಿರ್ದೇಶನಗಳನ್ನು ಕೊಟ್ಟಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದ ಹಲವು ಭಾಗ ಸೇರಿಸಿ ಕರ್ನಾಟಕದ ಹೊಸ ನಕ್ಷೆ ತಯಾರಿ..!

ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ರಾಜ್ಯ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವಡಗಿ, ಹಿರಿಯ ವಕೀಲರಾದ ಉದಯ ಹೊಳ್ಳ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್‌, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ ಪ್ರಸಾದ್‌ ಮೊದಲಾದವರು ಉಪಸ್ಥಿತರಿದ್ದರು.