ಆರೋಗ್ಯ ಇಲಾಖೆ ಎನ್‌ಎಚ್‌ಎಂ ಅಡಿ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರ ಕುರಿತು ಸಮಗ್ರ ಮಾನವ ಸಂಪನ್ಮೂಲ ನೀತಿ ರಚಿಸಿ ವರದಿ ನೀಡಲು ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎನ್‌. ಶ್ರೀನಿವಾಸಾಚಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ

ಬೆಂಗಳೂರು(ಜೂ.05): ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ಅಡಿ ನೇಮಕಗೊಂಡಿರುವ ವೈದ್ಯರು, ಶುಶ್ರೂಷಕರು ಸೇರಿ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಬೇಡಿಕೆಗಳ ಬಗ್ಗೆ ಅಧ್ಯಯನ ನಡೆಸಲು ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎನ್‌. ಶ್ರೀನಿವಾಸಾಚಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿ ಸರ್ಕಾರ ಆದೇಶಿಸಿದೆ. 

Add Asianetnews Kannada as a Preferred SourcegooglePreferred

ಹಲವು ಗುತ್ತಿಗೆ ನೌಕರರಿಗೆ ಕಳೆದ ಎರಡು ತಿಂಗಳಿಂದ ವೇತನ ಪಾವತಿಯಾಗದೇ ಇರುವುದು, ಜತೆಗೆ ಸಮಾನ ಕೆಲಸಕ್ಕೆ ಸಮಾನ ವೇತನ, ಸೇವೆ ಖಾಯಂಗೊಳಿಸುವುದು ಹಾಗೂ ಕೊರೋನಾ ಸಂದರ್ಭದಲ್ಲಿ ಕೆಲಸ ಮಾಡುತ್ತಿರುವವರಿಗೆ ಹೆಚ್ಚುವರಿ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ (ಕೆಎಸ್‌ಎಚ್‌ಸಿಒಇಎ) ನೇತೃತ್ವದಲ್ಲಿ ಗುರುವಾರದಿಂದ ಸೇವೆ ಬಹಿಷ್ಕರಿಸಿ ಮುಷ್ಕರಕ್ಕೆ ನೌಕರರು ಮುಂದಾಗಿದ್ದರು.

ರಾಜ್ಯದಲ್ಲಿ ಮತ್ತೆ 257 ಕೊರೋನಾ ಕೇಸ್‌: ಒಂದೇ ದಿನ ನಾಲ್ವರ ಸಾವು

ಇದರಿಂದ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ ಎನ್‌ಎಚ್‌ಎಂ ಅಡಿ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರ ಕುರಿತು ಸಮಗ್ರ ಮಾನವ ಸಂಪನ್ಮೂಲ ನೀತಿ (ಎಚ್‌.ಆರ್‌. ಪಾಲಿಸಿ) ರಚಿಸಿ ವರದಿ ನೀಡಲು ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎನ್‌. ಶ್ರೀನಿವಾಸಾಚಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದೆ. ಇದಕ್ಕೆ ವಿಧಾನಪರಿಷತ್‌ ಸದಸ್ಯರು ಹಾಗೂ ಸಂಘದ ಗೌರವಾಧ್ಯಕ್ಷ ಆಯನೂರು ಮಂಜುನಾಥ್‌ ಸೇರಿದಂತೆ 9 ಮಂದಿ ಸದಸ್ಯರು ಹಾಗೂ ಒಬ್ಬರು ಸದಸ್ಯ ಕಾರ್ಯದರ್ಶಿಯನ್ನು ನೇಮಿಸಲಾಗಿದೆ.