ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿ ಮಾತನಾಡಿ, ತೊಡೆ ತಟ್ಟಿ ಸವಾಲೆಸೆದಿದ್ದಾರೆ. ಈ ಪ್ರಚೋದನಕಾರಿ ವರ್ತನೆಗಾಗಿ ಜೆಡಿಎಸ್ ಮುಖಂಡರು ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಚಿಕ್ಕಬಳ್ಳಾಪುರ (ಜೂ.29): ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ವರ್ತನೆ ಈಗ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಏಕವಚನ ಪ್ರಯೋಗ ಹಾಗೂ ಸಾರ್ವಜನಿಕವಾಗಿ ಮೀಸೆ ತಿರುವಿ, ತೊಡೆ ತಟ್ಟಿ ಕುಸ್ತಿಗೆ ಆಹ್ವಾನ ನೀಡಿದ ಆರೋಪದ ಮೇಲೆ ಶಾಸಕರ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ.
ಘಟನೆಯ ಹಿನ್ನೆಲೆ:
ಜೂನ್ 27, 2026 ರಂದು ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ 'ಕೆಂಪೇಗೌಡ ಜಯಂತಿ' ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಾಸಕ ಪ್ರದೀಪ್ ಈಶ್ವರ್ ಅವರನ್ನು ಸಾರ್ವಜನಿಕರು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಕುರಿತಾದ ಹಳೆಯ ಹೇಳಿಕೆಗಳ ಬಗ್ಗೆ ಪ್ರಶ್ನಿಸಿದ್ದಾರೆ. ಈ ವೇಳೆ ಉದ್ವಿಗ್ನಗೊಂಡ ಶಾಸಕರು, ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಅತ್ಯಂತ ಕೀಳು ಮಟ್ಟದಲ್ಲಿ ವರ್ತಿಸಿದ್ದಾರೆ ಎಂಬುದು ಜೆಡಿಎಸ್ ಮುಖಂಡರ ಆರೋಪವಾಗಿದೆ.
ದೂರಿನಲ್ಲಿರುವ ಗಂಭೀರ ಆರೋಪಗಳು:
ಅವಹೇಳನಕಾರಿ ಮಾತು: ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಅತ್ಯಂತ ಹಗುರವಾಗಿ ಮತ್ತು ಏಕವಚನದಲ್ಲಿ ಮಾತನಾಡಿ ಅವಮಾನಿಸಿದ್ದಾರೆ.
ಪ್ರಚೋದನಕಾರಿ ವರ್ತನೆ: ಸಾರ್ವಜನಿಕವಾಗಿ ಕಾಫಿ ಕುಡಿಯುತ್ತಾ ತೋಳು ಏರಿಸುವುದು, ಮೀಸೆ ತಿರುಗಿಸುವುದು ಹಾಗೂ ಶರ್ಟ್ ಗುಂಡಿ ಬಿಚ್ಚಿ ತೊಡೆ ತಟ್ಟುವ ಮೂಲಕ ಜನರನ್ನು ಕುಸ್ತಿಗೆ ಅಥವಾ ಜಗಳಕ್ಕೆ ಆಹ್ವಾನಿಸುವಂತೆ ರೌಡಿ ವರ್ತನೆ ತೋರಿದ್ದಾರೆ.
ಜಾತಿ ವಿಷಬೀಜ: ತಾನೊಬ್ಬ 'ಓಬಿಸಿ ಶಾಸಕ' ಎಂದು ಪದೇ ಪದೇ ಹೇಳಿಕೊಳ್ಳುವ ಮೂಲಕ ಸಮಾಜದಲ್ಲಿ ಜಾತಿಗಳ ನಡುವೆ ವಿಷಬೀಜ ಬಿತ್ತಲು ಪ್ರಯತ್ನಿಸಿದ್ದಾರೆ.
ಮಾಧ್ಯಮಗಳ ಮುಂದೆ ದರ್ಪ: ಮಾಧ್ಯಮಗಳ ಮುಂದೆ ತಮ್ಮ ತಲೆಯ ಕೂದಲು ಕಿತ್ತು 'ನನ್ನನ್ನು ಏನು ಮಾಡಿಕೊಳ್ಳಲು ಸಾಧ್ಯವಿಲ್ಲ' ಎಂದು ಬದ್ಧತೆ ಇಲ್ಲದ ಮಾತುಗಳನ್ನು ಆಡಿ ಸಮಾಜದ ಶಾಂತಿ ಕದಡಲು ಯತ್ನಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಜೆಡಿಎಸ್ ಪ್ರತಿಭಟನೆ ಮತ್ತು ದೂರು:
ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಎಸ್.ಪಿ. ಮತ್ತು ಜಿಲ್ಲಾಧ್ಯಕ್ಷ ಬಿ.ಎನ್. ಮುನಿಯಪ್ಪ ನೇತೃತ್ವದಲ್ಲಿ ಎಸ್ಪಿ ಕಚೇರಿಗೆ ತೆರಳಿ ದೂರು ನೀಡಲಾಗಿದೆ. ಸಂವಿಧಾನಾತ್ಮಕ ಹುದ್ದೆಯಲ್ಲಿರುವ ಶಾಸಕರು ಸಾರ್ವಜನಿಕವಾಗಿ ಇಂತಹ ಅಸಹ್ಯ ಸನ್ನೆಗಳನ್ನು ಮಾಡುವುದು ಮತ್ತು ಪ್ರಚೋದನೆ ನೀಡುವುದು ಕಾನೂನು ಬಾಹಿರ. ಆದ್ದರಿಂದ ಅವರ ಮೇಲೆ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.


