ಸಚಿವ ಶಿವರಾಜ ತಂಗಡಗಿ ಅವರು, 2010ರಲ್ಲಿ ಕಾಂಗ್ರೆಸ್ ತಂದ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿದ್ದ ಬಿಜೆಪಿ ಈಗ ಚುನಾವಣಾ ಗಿಮಿಕ್‌ಗಾಗಿ ನಾಟಕವಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಪ್ರಧಾನಿ ಮೋದಿ ರಾಜರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕೊಪ್ಪಳ (ಏ.28): ಮಹಿಳೆಯರು ಮತ್ತು ಮಹಿಳಾ ಮೀಸಲಾತಿಯ ಬಗ್ಗೆ ಕಾಂಗ್ರೆಸ್‌ಗೆ ಇರುವಷ್ಟು ಕಾಳಜಿ ಬಿಜೆಪಿಗೆ ಇಲ್ಲ. 2010ರಲ್ಲಿಯೇ ಕಾಂಗ್ರೆಸ್ ಮಹಿಳಾ ಮೀಸಲಾತಿ ಜಾರಿ ಮಾಡಿದಾಗ ಅದನ್ನು ವಿರೋಧಿಸಿದ್ದು ಇದೇ ಬಿಜೆಪಿ. ಈಗ ಮಹಿಳಾ ಮೀಸಲಾತಿ ಬಗ್ಗೆ ಮಾತನಾಡುತ್ತದೆ ಎಂದು ಸಚಿವ ಶಿವರಾಜ ತಂಗಡಗಿ ಕಿಡಿಕಾರಿದರು. 

Add Asianetnews Kannada as a Preferred SourcegooglePreferred

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2023ರಲ್ಲಿಯೇ ಅನುಮೋದನೆಯಾಗಿರುವ ಮಹಿಳಾ ಮೀಸಲಾತಿ ಜಾರಿ ಮಾಡುವುದನ್ನು ಬಿಟ್ಟು ಈಗ ಮತ್ತೆ ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದ್ದು, ಇದೆಲ್ಲವೂ ನಾಟಕ ಎನ್ನುವುದು ಇಡೀ ದೇಶಕ್ಕೆ ಗೊತ್ತಿದೆ. ಮಹಿಳಾ ಮೀಸಲಾತಿ ಜಾರಿ ಅವರಿಗೆ ಇಷ್ಟ ಇಲ್ಲ. ಅದಕ್ಕಾಗಿಯೇ ಅದರ ಜತೆಗೆ ಲೋಕಸಭಾ ಕ್ಷೇತ್ರಗಳನ್ನು ಹೆಚ್ಚಿಸುವ ವಿಷಯ ಸೇರ್ಪಡೆ ಮಾಡಿದ್ದಾರೆ. ಇದು ಕೇವಲ ಚುನಾವಣೆ ಗಿಮಿಕ್ ಹೊರತು ನಿಜವಾದ ಕಳಕಳಿ ಅಲ್ಲ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ರಾಜರಂತೆ ವರ್ತಿಸುತ್ತಿದ್ದು, ಅವರನ್ನು ಯಾರೂ ಪ್ರಶ್ನೆ ಮಾಡಬಾರದು. ಅವರು ಜಾರಿ ಮಾಡುವ ಮಸೂದೆಯನ್ನು ಸಂಸತ್ತಿನಲ್ಲಿಯೂ ಕೇಳಬಾರದು. ಸುದ್ದಿಗೋಷ್ಠಿ ನಡೆಸಬಾರದು. ಕೇವಲ ತಾವು ಹೇಳಿದ್ದನ್ನು ಕೇಳಬೇಕು ಎನ್ನುವ ಮನೋಧೋರಣೆ ಹೊಂದಿದ್ದಾರೆ ಎಂದರು.

ಸಾಂಸ್ಕೃತಿಕ ಕಾಯ್ದೆ: 

ರಾಜ್ಯದಲ್ಲಿ ಸಾಂಸ್ಕೃತಿಕ ಕಾಯ್ದೆ ಜಾರಿ ಮಾಡಬೇಕು ಎನ್ನುವ ದಿಸೆಯಲ್ಲಿ ಪ್ರಯತ್ನ ನಡೆದಿದೆ. ಸ್ಥಳೀಯರನ್ನೇ ಗಮನದಲ್ಲಿಟ್ಟುಕೊಂಡು, ಅವರಿಗೆ ಆದ್ಯತೆ ನೀಡಬೇಕು ಎನ್ನುವ ಕಾರಣಕ್ಕಾಗಿ ಮತ್ತು ಸಾಂಸ್ಕೃತಿಕ ವಲಯದಲ್ಲಿಯೂ ಸ್ಥಳೀಯರಿಗೆ ಆದ್ಯತೆ ನೀಡಲು ಈ ಕಾನೂನು ಜಾರಿಗೆ ತರಲಾಗುತ್ತದೆ. ಈಗಲೇ ಯಾವುದರಲ್ಲಿ ಎಷ್ಟು ಪಾಲು, ಹೇಗೆ ಎನ್ನುವುದನ್ನು ವಿವರಿಸಲು ಸಾಧ್ಯವಿಲ್ಲ. ಅದರ ಸಿದ್ಧತೆ ನಡೆದಿದ್ದು, ಪರಾಮರ್ಶೆ ಮಾಡಿ, ಸೂಕ್ತವಾಗಿರುವ ಅಂಶಗಳನ್ನೊಳಗೊಂಡು ಸಾಂಸ್ಕೃತಿಕ ಕಾಯ್ದೆ ಜಾರಿ ಮಾಡಲಾಗುವುದು ಎಂದು ಶಿವರಾಜ ತಂಗಡಗಿ ತಿಳಿಸಿದ್ದಾರೆ.