ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಇದೀಗ ಹೊಸ ಪ್ಲಾನ್ ಒಂದನ್ನು ಮಾಡಿದ್ದಾರೆ. 

ಬೆಂಗಳೂರು : ಟಿಪ್ಪು ಸುಲ್ತಾನ್‌ ಜನರನ್ನು ಕೊಂದಿದ್ದಾರೆ ಎಂದು ಬಿಜೆಪಿಯವರು ಬೊಬ್ಬೆ ಹೊಡೆಯುತ್ತಿದ್ದಾರೆ. ಅಶೋಕನಿಂದ ಹಿಡಿದು ಪ್ರತಿಯೊಬ್ಬ ಹಿಂದೂ ರಾಜರೂ ಕೂಡ ಸಾಮ್ರಾಜ್ಯ ವಿಸ್ತರಣೆಗೆ ಕೊಲೆಗಳನ್ನು ಮಾಡಿದ್ದಾರೆ. ಹೀಗಾಗಿ ಟಿಪ್ಪು ಸುಲ್ತಾನ್‌ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ರಾಜ್ಯಾದ್ಯಂತ ಕಾರ್ಯಾಗಾರ ನಡೆಸಿ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಮಂಗಳವಾರ ನಗರದ ಟೌನ್‌ಹಾಲ್‌ನಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದಿಂದ ಏರ್ಪಡಿಸಿದ್ದ ಮಾಜಿ ಪ್ರಧಾನಿಗಳಾದ ಇಂದಿರಾಗಾಂಧಿ, ರಾಜೀವ್‌ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಪ್ರಯುಕ್ತ ನೂತನವಾಗಿ ಆಯ್ಕೆಯಾದ ಜನಪ್ರತಿನಿಧಿಗಳಿಗೆ ಸನ್ಮಾನ ಮಾಡಿ ಅವರು ಮಾತನಾಡಿದರು.

ಬಿಜೆಪಿಯವರು ಭಾವನಾತ್ಮಕ ವಿಷಯಗಳನ್ನು ಕೆರಳಿಸಿ, ಸುಳ್ಳುಗಳನ್ನು ಹೇಳಿಕೊಂಡು ಕೋಮುಗಲಭೆಗಳನ್ನು ಸೃಷ್ಟಿಸಲು ಮುಂದಾಗುತ್ತಾರೆ. ಟಿಪ್ಪು ಸುಲ್ತಾನ್‌ ಬಗ್ಗೆ ತಪ್ಪು ಅಭಿಪ್ರಾಯಗಳನ್ನು ಬಿಂಬಿಸಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಕಾರ್ಯಕರ್ತರು ಸಾರ್ವಜನಿಕರಿಗೆ ಅರಿವು ಮೂಡಿಸಲು ಟಿಪ್ಪು ಸುಲ್ತಾನ್‌ ಕುರಿತಾಗಿ ಕಾರ್ಯಾಗಾರಗಳನ್ನು ಮಾಡಬೇಕು ಎಂದು ಹೇಳಿದರು.

ಬಿಜೆಪಿಯವರು ಟಿಪ್ಪು ಸುಲ್ತಾನ್‌ ಯಾರನ್ನೋ ಕೊಂದರು ಎನ್ನುತ್ತಾರೆ. ಎಲ್ಲ ರಾಜರೂ ಜನರನ್ನು ಕೊಂದಿದ್ದಾರೆ. ಅಶೋಕನಿಂದ ಹಿಡಿದು ಎಲ್ಲ ಹಿಂದೂ ರಾಜರೂ ಕೊಲೆಗಳನ್ನು ಮಾಡಿ ಸಾಮ್ರಾಜ್ಯ ವಿಸ್ತರಿಸಿಕೊಂಡಿದ್ದಾರೆ. ಆದರೆ, ಟಿಪ್ಪು ಸುಲ್ತಾನ್‌ ಮಾತ್ರವೇ ಕೊಲೆಗಳನ್ನು ಮಾಡಿದಂತೆ ಬಿಂಬಿಸಲಾಗುತ್ತಿದೆ. ಅವರು ಮಾಡಿದ ಉತ್ತಮ ಕಾರ್ಯಗಳನ್ನು ಅಳಸಿ ಹಾಕಲು ಯತ್ನಿಸುತ್ತಿದ್ದಾರೆ. ಇತಿಹಾಸವನ್ನು ತಿಳಿದುಕೊಳ್ಳದೆ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಕಾರ್ಯಕರ್ತರು ಇತಿಹಾಸ ತಿಳಿದು ಜನರಿಗೆ ತಿಳಿಸಬೇಕು ಎಂದರು.