ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಲಬುರಗಿ ಜಿಲ್ಲಾಧಿಕಾರಿಯವರನ್ನು ಅವಮಾನಿಸಿದ ಛಲವಾದಿ ನಾರಾಯಣಸ್ವಾಮಿ ಮತ್ತು ಎನ್. ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಳ್ಳಾರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು

ಬಳ್ಳಾರಿ (ಜೂ.4): ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅಸಭ್ಯ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಅವರನ್ನು ಪಾಕಿಸ್ತಾನದೊಂದಿಗೆ ಹೋಲಿಸಿ ಅಪಮಾನಿಸಿದ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

Add Asianetnews Kannada as a Preferred SourcegooglePreferred

ಛಲವಾದಿ ನಾರಾಯಣಸ್ವಾಮಿ ಹಾಗೂ ಎನ್.ರವಿಕುಮಾರ್ ಅವಹೇಳನಕಾರಿಯಾಗಿ ಮಾತನಾಡುವ ಮೂಲಕ ವಿವಾದ ಸೃಷ್ಟಿಸುತ್ತಿದ್ದಾರೆ. ವಿನಾಕಾರಣ ಕಾಂಗ್ರೆಸ್ ಸಚಿವರನ್ನು ಗುರಿಯಾಗಿಸಿಕೊಂಡು ಛಲವಾದಿ ನಾರಾಯಣಸ್ವಾಮಿ ಅಪಮಾನಕಾರಿಯಾಗಿ ಮಾತನಾಡಿದ್ದಾರೆ. ಶಾಸಕರಾಗಿ ಜವಾಬ್ದಾರಿಯುತವಾಗಿ ವರ್ತಿಸಬೇಕಾದ ರವಿಕುಮಾರ್ ಅವರು ಜಿಲ್ಲಾಧಿಕಾರಿಗಳನ್ನು ಪಾಕಿಸ್ತಾನಿ ಎಂದಿದ್ದಾರೆ. ಈ ಇಬ್ಬರ ಹೇಳಿಕೆಗಳು ಅತ್ಯಂತ ಖಂಡನೀಯ. ಕೂಡಲೇ ಈ ಇಬ್ಬರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹಾಗೂ ಶಾಸಕ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್ ಮಾತನಾಡಿದರು. ಮೇಯರ್ ಮುಲ್ಲಂಗಿ ನಂದೀಶ್, ಕಾಂಗ್ರೆಸ್ ಹಿರಿಯ ಮುಖಂಡ ಕಲ್ಲುಕಂಬ ಪಂಪಾಪತಿ, ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಇ. ಚಿದಾನಂದಪ್ಪ, ಕಾಂಗ್ರೆಸ್ ಮುಖಂಡರಾದ ಜಗನ್, ಕೆ.ಹೊನ್ನಪ್ಪ, ಗುಂಡ್ಲು ರವಿಕುಮಾರ್, ಪರ್ವಿನ್ ಬಾನು ಸೇರಿದಂತೆ ಪಕ್ಷದ ಜಿಲ್ಲಾ ಹಾಗೂ ತಾಲೂಕು ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ನಗರದ ಪ್ರಮುಖ ಬೀದಿಗಳ ಮೂಲಕ ಮೆರವಣಿಗೆಯಲ್ಲಿ ಆಗಮಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿ ತಲುಪಿ, ಮನವಿ ಸಲ್ಲಿಸಿದರು.