ನಟ ಚೇತನ್ ಅಹಿಂಸ ಅವರು, ಬೆಂಗಳೂರಿನಲ್ಲಿ ಡಾ. ರಾಜ್ಕುಮಾರ್ ಅವರ ಸಮಾಧಿಗೆ ಸರ್ಕಾರ 2.5 ಎಕರೆ ಭೂಮಿ ನೀಡಿರುವುದನ್ನು ಪ್ರಶ್ನಿಸಿದ್ದಾರೆ. ರಾಜ್ಕುಮಾರ್ ಅವರ ಜನ್ಮದಿನದಂದೇ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ಇದು ತೀವ್ರ ವಿರೋಧಕ್ಕೆ ಕಾರಣವಾಗಿದೆ.
ಬೆಂಗಳೂರು (ಏ.25): ಬೆಂಗಳೂರಿನ ನಗರ ಮಧ್ಯದಲ್ಲಿ ಡಾ.ರಾಜ್ಕುಮಾರ್ ಅವರ ಸಮಾಧಿ ಕಾಂಪ್ಲೆಕ್ಸ್ಗಾಗಿ ಜಾಗ ನೀಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ಅವರು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಡಾ ರಾಜ್ಕುಮಾರ್ ಅವರ ಹುಟ್ಟುಹಬ್ಬದಂದೇ ಇಂಥದ್ದೊಂದು ಪೋಸ್ಟ್ ಮಾಡುವ ಮೂಲಕ ನಟ ಚೇತನ್ ಅವರು ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ‘ನಾವು ರಾಜಕುಮಾರ್ ಅವರನ್ನು ಒಬ್ಬ ಮಹಾನ್ ಕಲಾವಿದರಾಗಿ ಗೌರವಿಸುತ್ತೇವೆ. ಆದರೆ, ಬೆಂಗಳೂರು ನಗರ ಮಧ್ಯದಲ್ಲಿ 2006ರಲ್ಲಿ ಒಬ್ಬ ನಟನ ‘ಸಮಾಧಿ ಕಾಂಪ್ಲೆಕ್ಸ್’ಗಾಗಿ 2.5 ಎಕರೆ ಭೂಮಿ ನೀಡುವುದು ತಿಳಿವಳಿಕೆಯ ನಿರ್ಧಾರವಾಗಿತ್ತೇ ಎಂಬುದನ್ನು ಪ್ರಶ್ನಿಸಬೇಕಾಗಿದೆ. 21ನೇ ಶತಮಾನದ ಭಾರತದಲ್ಲಿ ಪ್ರಮುಖ ಹೋರಾಟವೇ ಭೂಮಿ. ಸರ್ಕಾರ ಅದನ್ನು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹಾಗೂ ಸಾರ್ವಜನಿಕ ಉಪಯೋಗಕ್ಕೆ ತಕ್ಕಂತೆ ಹಂಚಬೇಕು. ಮತಗಳ ಲಾಭದ ಅವಕಾಶವಾದಿ ಉದ್ದೇಶದಿಂದ ಅಲ್ಲ’ ಎಂದು ಚೇತನ್ ಅವರು ತಮ್ಮ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಅಣ್ಣಾವ್ರ ಸಮಾಧಿ ಸ್ಥಳಕ್ಕೆ ಜಾಗ ಕೊಟ್ಟಿರುವ ಸರ್ಕಾರದ ಕ್ರಮವನ್ನು ಟೀಕೆ ಮಾಡಿರುವ ನಟ ಚೇತನ್ ಅವರ ಸೋಷಿಯಲ್ ಮೀಡಿಯಾ ಪೋಸ್ಟ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.


