ಕೊರೋನಾ ಮಹಾಮಾರಿ ಪ್ರಕರಣಗಳು ಇದೀಗ ಮತ್ತಷ್ಟು ಹೆಚ್ಚಾಗಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಎಲ್ಲಾ ಗಡಿಗಳನ್ನು ಬಂದ್ ಮಾಡಿ ಟೆಸ್ಟ್ ಕಡ್ಡಾಯ ಮಾಡಲಾಗಿದೆ. 

ಬೆಂಗಳೂರು (ಫೆ.22): ನೆರೆಯ ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿ ಕೊರೋನಾ ಪ್ರಕರಣಗಳು ಜಾಸ್ತಿಯಾಗುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಅಂತಾರಾಜ್ಯ ಗಡಿಗಳಲ್ಲಿ ಸೋಮವಾರದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲು ಆರೋಗ್ಯ ಇಲಾಖೆ ತಂಡ ಸನ್ನದ್ಧವಾಗಿದೆ. 

Add Asianetnews Kannada as a Preferred SourcegooglePreferred

ಕೇರಳದಿಂದ ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಮುಖಾಂತರ ಆಗಮಿಸುವ ಪ್ರಯಾಣಿಕರಿಗೆ 72 ಗಂಟೆಗಳೊಳಗೆ ನಡೆಸಲಾಗದ ಕೋವಿಡ್‌ ನೆಗೆಟಿವ್‌ ವರದಿ ತರುವುದನ್ನು ಕಡ್ಡಾಯಗೊಳಿಸಲಾಗಿದೆ.

ಗಡಿ ಜಿಲ್ಲೆಗಳಲ್ಲಿ ಕೋವಿಡ್‌ ತಪಾಸಣೆಗೆ ಡಿಸಿಎಂ ಕಾರಜೋಳ ಸೂಚನೆ

ಗಡಿಭಾಗಗಳ ಚೆಕ್‌ಪೋಸ್ಟ್‌ಗಳಲ್ಲಿ ವೈದ್ಯಕೀಯ ತಪಾಸಣೆ, ಸ್ಕ್ರೀನಿಂಗ್‌ ನಡೆಸಲು ಪೊಲೀಸರೊಂದಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಕೇರಳವನ್ನು ಸಂಪರ್ಕಿಸುವ 15 ಗಡಿರಸ್ತೆಗಳಲ್ಲಿ 4 ಚೆಕ್‌ಪೋಸ್ಟ್‌ಗಳಲ್ಲಿ ಮಾತ್ರ ಅವಕಾಶ ಕಲ್ಪಿಸಿ, ಉಳಿದೆಲ್ಲ ಗಡಿ ರಸ್ತೆಗಳ ಸಂಚಾರ ನಿರ್ಬಂಧ ವಿಧಿಸಲಾಗಿದೆ.

 ಇನ್ನು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ ಗ್ರಾಮದಲ್ಲಿ ಭಾನುವಾರ ಚೆಕ್‌ಪೋಸ್ಟ್‌ ನಿರ್ಮಿಸಲಾಗಿದ್ದು ಮಹಾರಾಷ್ಟ್ರದಿಂದ ಬಂದು ಜಿಲ್ಲೆಗೆ ಪ್ರವೇಶಿಸುವ ಪ್ರತಿ ಪ್ರಯಾಣಿಕರ ಸ್ಕ್ರೀನಿಂಗ್‌, ಸ್ಯಾನಿಟೈಸರ್‌, ಚೆಕ್‌ ಮಾಡಲಾಗುತ್ತಿದೆ.