ರಾಜ್ಯದಲ್ಲಿ ಮತ್ತೆ ಕೊರೋನಾ ಮಹಾಮಾರಿ ಅಟ್ಟಹಾಸ ಶುರುವಾಗಿದೆ. ಇದರಿಮದ ಮತ್ತಷ್ಟು ಕಠಿಣ ಕ್ರಮಗಳು ರಾಜ್ಯದಲ್ಲಿ ಜಾರಿಯಾಗಲಿದ್ದು ಜನತೆಗೆ ಎಚ್ಚರಿಕೆಯನ್ನು ನೀಡಲಾಗಿದೆ. ಅಲ್ಲದೇ ರಾಜ್ಯ ಹೈ ರಿಸ್ಕ್‌ನಲ್ಲಿದೆ ಎಂದು ಹೇಳಲಾಗಿದೆ. 

ಬೆಂಗಳೂರು (ಮಾ.28):  ರಾಜ್ಯದ ಪಾಸಿಟಿವಿಟಿ ದರ ರಾಷ್ಟ್ರೀಯ ಪಾಸಿಟಿವಿಟಿ ದರಕ್ಕಿಂತ ಹೆಚ್ಚಾಗಿದೆ. ಎರಡನೇ ಅಲೆ ಆರಂಭವಾಗಿರುವ ಲಕ್ಷಣ ಕಂಡು ಬಂದಿರುವುದರಿಂದ ಸಾರ್ವಜನಿಕರು ಹೆಚ್ಚು ಎಚ್ಚರ ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಮನವಿ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 8-10 ರಾಜ್ಯಗಳಲ್ಲಿ ಅತಿ ಹೆಚ್ಚು ಸಕ್ರಿಯ ಕೊರೋನಾ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ 2.82 ಲಕ್ಷ, ಕೇರಳದಲ್ಲಿ 24 ಸಾವಿರ, ಪಂಜಾಬ್‌ನಲ್ಲಿ 22 ಸಾವಿರ, ಕರ್ನಾಟಕದಲ್ಲಿ 19 ಸಾವಿರ ಸಕ್ರಿಯ ಪ್ರಕರಣಗಳಿವೆ. ಇದರಿಂದ ಎಲ್ಲ ರಾಜ್ಯಗಳಲ್ಲಿ ಕೊರೋನಾ ಎರಡನೇ ಅಲೆ ಆರಂಭವಾಗಿದೆ ಎಂಬುದು ಸ್ಪಷ್ಟವಾಗಿದೆ. ನಮ್ಮ ಚಟುವಟಿಕೆಗಳು ನಿಯಂತ್ರಣವಾಗದಿದ್ದರೆ ಅಪಾಯ ತಪ್ಪಿದ್ದಲ್ಲ ಎಂದು ಎಚ್ಚರಿಕೆ ನೀಡಿದರು.

2ನೇ ಅಲೆ ಜಯಿಸಿದರೆ ಕೊರೋನಾದಿಂದ ಪಾರಾದಂತೆ: ಸುಧಾಕರ್

ಹೆಚ್ಚು ಪಾಸಿಟಿವಿಟಿ ದರ: ರಾಜ್ಯದಲ್ಲಿ ಈಗ ಪಾಸಿಟಿವಿಟಿ ದರ ಶೇ.1.6 ರಷ್ಟಾಗಿರುವುದು ಒಳ್ಳೆಯ ಬೆಳವಣಿಗೆಯಲ್ಲ. ರಾಷ್ಟ್ರೀಯ ಸರಾಸರಿ ಪಾಸಿಟಿವಿಟಿ ದರ 1.5% ಇದ್ದು, ನಮ್ಮ ರಾಜ್ಯದ ಪಾಸಿಟಿವಿಟಿ ದರ ಹೆಚ್ಚಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಈಗ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರತಿ ದಿನ ಪರೀಕ್ಷೆ ಮಾಡಲಾಗುತ್ತಿದೆ. ಜನರು ಕಡ್ಡಾಯವಾಗಿ ಮಾಸ್ಕ್‌ ಧರಿಸುವ, ಭೌತಿಕ ಅಂತರ ಕಾಯ್ದುಕೊಳ್ಳುವ ನಿಯಮ ಪಾಲಿಸಬೇಕು. ಅರ್ಹರೆಲ್ಲರೂ ಲಸಿಕೆಯನ್ನು ಪಡೆಯಬೇಕು ಎಂದು ಕರೆ ನೀಡಿದರು.

ಹಾಸ್ಟೆಲ್‌ಗಳೇ ಕೊರೋನಾ ಹಾಟ್‌ಸ್ಪಾಟ್‌: 53 ವಿದ್ಯಾರ್ಥಿಗಳಿಗೆ ಪಾಸಿಟಿವ್‌ ..

ಲಸಿಕೆಯಲ್ಲಿ ಉತ್ತಮ ಪ್ರಗತಿ:

ಆರೋಗ್ಯ ಸಿಬ್ಬಂದಿ ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡುವಲ್ಲಿ ಬೀದರ್‌ ಶೇ. 113, ಧಾರವಾಡ ಶೇ. 107, ಗದಗ ಶೇ.103ರಷ್ಟುಗುರಿ ಸಾಧಿಸಿವೆ. ಬೆಂಗಳೂರು ನಗರ ಶೇ.61, ಬಾಗಲಕೋಟೆ ಶೇ.64, ದಾವಣಗೆರೆ ಹಾಗೂ ಕೊಪ್ಪಳ ಶೇ.65 ಗುರಿ ಸಾಧಿಸಿವೆ. 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವಲ್ಲಿ ಚಿತ್ರದುರ್ಗ ಶೇ. 37, ರಾಮನಗರ ಶೇ. 37.8, ಕೊಡಗು ಶೇ.38, ಚಾಮರಾಜನಗರ ಶೇ.38, ಕೊಪ್ಪಳ ಶೇ.48 ರಷ್ಟುಗುರಿ ಸಾಧಿಸಿವೆ. ಭಾನುವಾರ ರಾಜ್ಯಕ್ಕೆ 12 ಲಕ್ಷ ಡೋಸ್‌ ಲಸಿಕೆ ಬರಲಿದೆ. ಆದಷ್ಟುಬೇಗ ಎಲ್ಲರಿಗೂ ಲಸಿಕೆ ವಿತರಿಸಲಾಗುವುದು ಎಂದರು.

ಶಾಲೆ, ಕಾಲೇಜು ನಿಯಂತ್ರಣ : ಸಿಎಂಗೆ ಸುಧಾಕರ್‌ ಕೋರಿಕೆ

ಬೆಂಗಳೂರು: ಕೊರೋನಾ ನಿಯಂತ್ರಣ ಕ್ರಮ ಈಗಾಗಲೇ ಜಾರಿಯಲ್ಲಿದೆ. ಜಾತ್ರೆ ಆಚರಣೆಗೆ ಅನುಮತಿ ನೀಡುತ್ತಿಲ್ಲ. ಕ್ರಮೇಣ ಇನ್ನೂ ಬಿಗಿಯಾದ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಣ ಸಂಸ್ಥೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ಮುಖ್ಯಮಂತ್ರಿಗಳು ಸದ್ಯದಲ್ಲೇ ಈ ವಿಚಾರದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಸಚಿವ ಡಾ.ಸುಧಾಕರ್‌ ತಿಳಿಸಿದರು.