ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ವಿರುದ್ಧ ಮಾಡಿದ್ದ ಲೈಂಗಿಕ ಕಿರಕುಕುಳ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಅರ್ಜುನ್ ಸರ್ಜಾಗೆ ನೋಟಿಸ್ ನೀಡಲಾಗಿದೆ.
ಬೆಂಗಳೂರು : ಸಿನಿಮಾ ಚಿತ್ರೀಕರಣದ ವೇಳೆ ಹಿರಿಯ ನಟ ಅರ್ಜುನ್ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಆರೋಪಿಸಿ ನಟಿ ಶ್ರುತಿ ಹರಿಹರನ್ ದೂರು ನೀಡಿದ್ದ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಅರ್ಜುನ್ ಸರ್ಜಾಗೆ ನೋಟಿಸ್ ನೀಡಿದ್ದಾರೆ.
ಕಬ್ಬನ್ಪಾರ್ಕ್ ಠಾಣೆ ಇನ್ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿ ಅವರ ನೋಟಿಸ್ಗೆ ಪ್ರತಿಕ್ರಿಯಿಸಿರುವ ಅರ್ಜುನ್ ಸರ್ಜಾ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ಸೋಮವಾರ ಬೆಳಗ್ಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ಪ್ರಕರಣದ ಸಂಬಂಧ ಈಗಾಗಲೇ ಶ್ರುತಿ ಹರಿಹರನ್ ಆಪ್ತ ಸ್ನೇಹಿತೆ ಹಾಗೂ ಆಪ್ತ ಸಹಾಯಕ ಕಿರಣ್, ವಿಸ್ಮಯ ಚಿತ್ರದ ಸಹ ನಿರ್ದೇಶಕಿ ಮೋನಿಕಾ, ಸಹ ನಿರ್ದೇಶಕ ಅರುಣ್ ವೈದ್ಯನಾಥ್ ಹಾಗೂ ವಿಸ್ಮಯ ಚಿತ್ರದ ನಿರ್ಮಾಪಕ ಉಮೇಶ್ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಅಲ್ಲದೆ, ದೂರು ನೀಡಿದ್ದ ಶ್ರುತಿ ಹರಿಹರನ್ ಅವರ ಹೇಳಿಕೆಯನ್ನು ಸಹ ದಾಖಲಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಶ್ರುತಿ ಘಟನೆಗೆ ಸಂಬಂಧಿಸಿದ ಕೆಲ ಸಾಕ್ಷ್ಯಗಳನ್ನು ತನಿಖಾಧಿಕಾರಿಗಳಿಗೆ ಒದಗಿಸಿದ್ದಾರೆ. ಪ್ರಕರಣದ ಆರೋಪಿ ಅರ್ಜುನ್ ಸರ್ಜಾ ಅವರ ಹೇಳಿಕೆ ದಾಖಲಿಸಿಕೊಳ್ಳಲಿದ್ದು, ಸೋಮವಾರ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.
