ದರ್ಶನ್​ಗೆ ಈ ಹಿಂದೆ ಕೂಡ ಅಪರಾಧದ ಹಿನ್ನೆಲೆ ಇದೆ. ಬೆನ್ನು ನೋವಿನ ಕಾರಣ ನೀಡಿ, ಜಾಮೀನು ಪಡೆದಿರುವ ದರ್ಶನ್‌, ಬಳಿಕ, ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ ಎಂದು ಬೆಂಗಳೂರು ಪೊಲೀಸರ ಪರ ವಕೀಲರು ಲಿಖಿತ ವಾದದಲ್ಲಿ ತಿಳಿಸಿದ್ದಾರೆ.

ನವದೆಹಲಿ (ಆ.07): ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಮತ್ತು ಅವರ ಸಹಚರರಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್‌ಗೆ ಬುಧವಾರ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದ್ದು, ಅದರಲ್ಲಿ ಆರೋಪಿಗಳ ವಿರುದ್ಧ ಪ್ರಬಲ ಸಾಕ್ಷ್ಯಾಧಾರಗಳ ಸರಮಾಲೆಯನ್ನೇ ಮುಂದಿಟ್ಟಿದ್ದಾರೆ. ಇದೇ ವೇಳೆ, ದರ್ಶನ್‌ ಪರ ವಕೀಲರಿಂದಲೂ ಅಫಿಡವಿಟ್‌ ಸಲ್ಲಿಕೆಯಾಗಿದೆ.

Add Asianetnews Kannada as a Preferred SourcegooglePreferred

ಸರ್ಕಾರದ ವಾದವೇನು?: ಹೈಕೋರ್ಟ್‌ನ ತೀರ್ಪು ತಾವು ಸಲ್ಲಿಸಿದ ದಾಖಲೆಗಳಿಗೆ ವಿರುದ್ಧವಾಗಿದೆ. ಕೊಲೆ ಮಾಡಲು ಬಳಸಿದ ಆಯುಧಗಳು ಮಾರಕವಲ್ಲ ಅಂದಿರೋದು ತಪ್ಪು. ಮೃತ ರೇಣುಕಾಸ್ವಾಮಿಯ ಮೈಮೇಲೆ ಗಂಭೀರ ಗಾಯಗಳಾಗಿವೆ. ಇನ್ನು, ಸಾಕ್ಷಿ ಹೇಳಿಕೆ ತಡವಾಗಿ ದಾಖಲಿಸಲಾಗಿದೆ ಅಂತ ಅನುಮಾನಿಸಿದ್ದು ಸರಿಯಲ್ಲ. ವಿಳಂಬಕ್ಕೆ ಸೂಕ್ತ ಕಾರಣಗಳನ್ನು ನೀಡಲಾಗಿದೆ. ಸೂಕ್ತ ಎಫ್‌ಎಸ್‌ಎಲ್‌, ಎಲೆಕ್ಟ್ರಾನಿಕ್ ಮತ್ತು ಸಿಡಿಆರ್ ಪುರಾವೆಗಳಿದ್ದರೂ ಅವನ್ನು ಪರಿಗಣಿಸಿಲ್ಲ. ದರ್ಶನ್​ಗೆ ಈ ಹಿಂದೆ ಕೂಡ ಅಪರಾಧದ ಹಿನ್ನೆಲೆ ಇದೆ. ಬೆನ್ನು ನೋವಿನ ಕಾರಣ ನೀಡಿ, ಜಾಮೀನು ಪಡೆದಿರುವ ದರ್ಶನ್‌, ಬಳಿಕ, ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ ಎಂದು ಬೆಂಗಳೂರು ಪೊಲೀಸರ ಪರ ವಕೀಲರು ಲಿಖಿತ ವಾದದಲ್ಲಿ ತಿಳಿಸಿದ್ದಾರೆ.

ರೇಣುಕಾಸ್ವಾಮಿಯನ್ನು ಅಪಹರಿಸಿ, ಶೆಡ್​​​ನಲ್ಲಿ ಕೊಲೆ ಮಾಡಲಾಗಿದೆ. ಆರೋಪಿಗಳು ಕೊಲೆ ನಡೆದ ಸ್ಥಳದಲ್ಲಿ ಇದ್ದಿದ್ದು, ಪವಿತ್ರಾ ಮತ್ತು ದರ್ಶನ್‌ ಕೊಲೆಯಲ್ಲಿ ಸಕ್ರೀಯವಾಗಿ ಭಾಗಿ ಆಗಿರುವುದು ತನಿಖೆಯಲ್ಲಿ ಬಯಲಾಗಿದೆ. ಶೆಡ್​ಗೆ ರೇಣುಕಾಸ್ವಾಮಿ, ಆರೋಪಿಗಳು ಪ್ರವೇಶ ಮಾಡಿದ್ದನ್ನು ಐವರು ಸಾಕ್ಷಿಗಳು ನೋಡಿದ್ದಾರೆ. ಕೊಲೆ ನಡೆದ ಸ್ಥಳದಲ್ಲಿನ ಮಣ್ಣಿನ ಮಾದರಿ, ದರ್ಶನ್, ರಾಘವೇಂದ್ರ, ನಂದೀಶ್ ಮತ್ತು ನಾಗರಾಜು ಅವರ ಪಾದರಕ್ಷೆಗಳಲ್ಲಿ ಸಿಕ್ಕ ಮಣ್ಣಿನ ಮಾದರಿ ಹೊಂದಾಣಿಕೆ ಆಗಿದೆ. ಡಿಎನ್‌ಎಯಲ್ಲೂ ಮೃತ ವ್ಯಕ್ತಿಯ ರಕ್ತದ ಕಲೆಗಳು ಕೆಲ ಆರೋಪಿಗಳ ಬಟ್ಟೆಗಳ ಮೇಲೆ ಇದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ದರ್ಶನ್ ಪರ ವಾದ: ಇದೇ ವೇಳೆ, ದರ್ಶನ್‌ ಪರ ವಕೀಲರು ಸಲ್ಲಿಸಿದ ಲಿಖಿತ ವಾದದಲ್ಲಿ, ದರ್ಶನ್ ಬಂಧನದ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ. ಅವರನ್ನು ಮೈಸೂರಿನಲ್ಲಿ ಬಂಧಿಸಿದ್ದು, ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಬಂಧನಕ್ಕೆ ಕಾರಣಗಳನ್ನು ನೀಡದಿರುವುದು ಕಾನೂನು ಉಲ್ಲಂಘನೆ. ಘಟನೆ ನಡೆದ 7 ದಿನಗಳ ನಂತರ ಸಾಕ್ಷಿ ಹೇಳಿಕೆ ದಾಖಲಿಸಲಾಗಿದೆ ಎಂದು ಅಫಿಡವಿಟ್‌ನಲ್ಲಿ ವಾದಿಸಿದ್ದಾರೆ.

ಮಗಳನ್ನು ನೋಡ್ಕೋಬೇಕು, ಬೇಲ್‌ ರದ್ದು ಮಾಡಬೇಡಿ: ಇದೇ ವೇಳೆ, ಪವಿತ್ರಾ ಗೌಡ ಕೂಡ ಅಫಿಡವಿಟ್ ಸಲ್ಲಿಸಿದ್ದು, ‘ರೇಣುಕಾಸ್ವಾಮಿ, ನನಗೆ ಪದೇ, ಪದೇ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸಿದ್ದ. ಆದರೆ, ನಾನು ಕೊಲೆ ಪ್ರಕರಣದಲ್ಲಿ ಭಾಗಿಯಾಗಿಲ್ಲ. ನನಗೂ ಮತ್ತು ಉಳಿದ ಆರೋಪಿಗಳಿಗೂ ಯಾವುದೇ ಸಂಬಂಧ ಇಲ್ಲ’ ಎಂದು ತಿಳಿಸಿದ್ದಾರೆ. ನಾನು ಸಿಂಗಲ್ ಪೇರೆಂಟ್‌ ಆಗಿದ್ದು, ನನಗೆ 10ನೇ ತರಗತಿಯಲ್ಲಿ ಓದುವ ಮಗಳಿದ್ದಾಳೆ. ಅವಳನ್ನು ನಾನು ನೋಡಿಕೊಳ್ಳಬೇಕು.

ಈ ವರ್ಷ ಆಕೆಗೆ ಬೋರ್ಡ್‌ ಪರೀಕ್ಷೆಗಳು ಇವೆ. ಜೊತೆಗೆ, ವಯಸ್ಸಾದ ತಂದೆ-ತಾಯಿಯನ್ನೂ ನೋಡಿಕೊಳ್ಳಬೇಕಿದೆ. ಹೀಗಾಗಿ ಜಾಮೀನು ರದ್ದು ಮಾಡಬೇಡಿ ಎಂದು ತಿಳಿಸಿದ್ದಾರೆ. ನನಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ. ನನ್ನ ವಿರುದ್ಧ ಕ್ರಿಮಿನಲ್‌ ಕೇಸ್ ಕೂಡ ಇಲ್ಲ. ನಾನು ಫ್ಯಾಷನ್ ಡಿಸೈನರ್ ಆಗಿದ್ದು, ಜೀವನಕ್ಕಾಗಿ ಸ್ಟುಡಿಯೋ ನಡೆಸುತ್ತಿದ್ದೇನೆ. ನಾನು ಯಾವಾಗಲೂ ಕಾನೂನಿಗೆ ಬದ್ದನಾಗಿ ನಡೆದುಕೊಂಡಿದ್ದೇನೆ.