ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ಗಿರಿಯ ದತ್ತಾತ್ರೇಯ ಪೀಠದಲ್ಲಿ ಇಸ್ಲಾಂ ಮತ್ತು ಹಿಂದೂ ಧರ್ಮಗಳ ಸಂಪ್ರದಾಯಗಳಂತೆ ಪೂಜಾ ವಿಧಿವಿಧಾನ ನೆರವೇರಿಸಲು ಅವಕಾಶ ಕಲ್ಪಿಸಲು ಕೈಗೊಂಡಿರುವ ನಿರ್ಣಯದ ಕುರಿತು ರಾಜ್ಯ ಸರ್ಕಾರ ಸೋಮವಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಬೆಂಗಳೂರು (ಆ.23): ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ಗಿರಿಯ ದತ್ತಾತ್ರೇಯ ಪೀಠದಲ್ಲಿ ಇಸ್ಲಾಂ ಮತ್ತು ಹಿಂದೂ ಧರ್ಮಗಳ ಸಂಪ್ರದಾಯಗಳಂತೆ ಪೂಜಾ ವಿಧಿವಿಧಾನ ನೆರವೇರಿಸಲು ಅವಕಾಶ ಕಲ್ಪಿಸಲು ಕೈಗೊಂಡಿರುವ ನಿರ್ಣಯದ ಕುರಿತು ರಾಜ್ಯ ಸರ್ಕಾರ ಸೋಮವಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ತಮ್ಮನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದ್ದ ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮುಸ್ಲಿಂ ಮೌಲ್ವಿ ಸೈಯದ್‌ ಗೌಸ್‌ ಮೊಹಿದ್ದೀನ್‌ ಮೇಲ್ಮನವಿ ಸಲ್ಲಿಸಿದ್ದರು.

Add Asianetnews Kannada as a Preferred SourcegooglePreferred

ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧೆ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರಿ ವಕೀಲರು ಮೊಮೊ ಸಲ್ಲಿಸಿ ಈ ಮಾಹಿತಿ ನೀಡಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ಸರ್ಕಾರವು ಮೊಮೊ ಪ್ರತಿಯನ್ನು ಮೇಲ್ಮನವಿದಾರರಿಗೆ ಒದಗಿಸಬೇಕು. ಸರ್ಕಾರದ ನಿರ್ಧಾರಕ್ಕೆ ಅರ್ಜಿದಾರರಿಗೆ ಯಾವುದಾದರೂ ಆಕ್ಷೇಪಣೆಯಿದ್ದರೆ ಸಲ್ಲಿಸಬಹುದು ಎಂದು ಸೂಚಿಸಿ ಅರ್ಜಿ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿತು. ಅಲ್ಲದೆ, ಸಮಿತಿಯ ನಿರ್ಣಯವು ಈ ಮೇಲ್ಮನವಿ ಕುರಿತ ವಿಭಾಗೀಯ ಪೀಠದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ. 

ಬಿಸಿಯೂಟ ಯೋಜನೆ ಗುತ್ತಿಗೆ ಕಾರ್ಮಿಕರು ಕನಿಷ್ಠ ವೇತನ ಕಾಯ್ದೆಯಡಿ ಸಂಬಳ ಪಡೆಯಲು ಅರ್ಹರಲ್ಲ: ಹೈಕೋರ್ಟ್

ಒಂದೊಮ್ಮೆ ಈ ಅವಧಿಯಲ್ಲಿ ಸರ್ಕಾರವು ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಾನದಲ್ಲಿ ಯಾವುದೇ ಮಾರ್ಪಾಡು ಮಾಡಿದರೆ, ಆ ಕುರಿತು ಪ್ರಶ್ನಿಸಿ ಸೂಕ್ತ ಅರ್ಜಿ ಸಲ್ಲಿಸಲು ಪಕ್ಷಗಾರರಿಗೆ ಅವಕಾಶವಿದೆ ಎಂದು ತಿಳಿಸಿ 2022ರ ಮೇ 31ರಂದು ಹೊರಡಿಸಿರುವ ಆದೇಶವು ಸೆ.5ರವರೆಗೆ ಮುಂದುವರಿಯುತ್ತದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಅದರಂತೆ ಸೆ.5ರವರೆಗೆ ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಾನ ನೆರವೇರಿಸುವ ವಿಚಾರದಲ್ಲಿ ಹಾಲಿಯಿರುವ ವ್ಯವಸ್ಥೆಯೆ (ಮುಜಾವಾರ್‌ ಪೂಜೆ ನಡೆಸುವುದು) ಮುಂದುವರಿಯಲಿದೆ.

ವಿಚಾರಣೆ ವೇಳೆ ಸರ್ಕಾರದ ಪರ ಹಾಜರಾದ ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ ಅವರು ಮೊಮೊ ಸಲ್ಲಿಸಿ, 2021ರ ಸೆ.28ರ ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠದ ಆದೇಶದಂತೆ ಸರ್ಕಾರ ರಚಿಸಿದ್ದ ಸಚಿವ ಸಂಪುಟ ಉಪ ಸಮಿತಿಯನ್ನು ಪ್ರಕರಣವನ್ನು ಮರು ಪರಿಶೀಲನೆ ನಡೆಸಿ 2022ರ ಜೂ.30ರಂದು ವರದಿ ಸಲ್ಲಿಸಿತ್ತು. ವರದಿಯಲ್ಲಿ 10 ಶಿಫಾರಸು ಮಾಡಲಾಗಿದ್ದು, ಅದನ್ನು ಸಚಿವ ಸಂಪುಟ ಅನುಮೋದಿಸಿದೆ ಎಂದು ಮಾಹಿತಿ ನೀಡಿದರು.

ಅಲ್ಲದೆ, ಸಚಿವ ಸಂಪುಟ ಉಪ ಸಮಿತಿಯ ವರದಿ ಆಧರಿಸಿ ದತ್ತಾತ್ರೇಯ ಪೀಠದಲ್ಲಿ ಇಸ್ಲಾಂ ಮತ್ತು ಹಿಂದೂ ಸಂಪ್ರದಾಯಗಳದಂತೆ ಪೂಜಾ ವಿಧಿ ವಿಧಾನ ನೆರವೇರಿಸುವುದಕ್ಕೆ ಅವಕಾಶ ಕಲ್ಪಿಸಲು 2022ರ ಜು.1ರಂದು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ದತ್ತಾತ್ರೇಯ ಪೀಠದಲ್ಲಿ ಪೂಜೆ ನೆರವೇರಿಸಲು ಮುಜಾವರ್‌ ಮತ್ತು ಅರ್ಚಕರನ್ನು ನೇಮಿಸಲು 2022ರ ಜು.19ರಂದು ಆದೇಶಿಸಲಾಗಿದೆ. ಹಾಗೆಯೇ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನಿಸಿ ಆ.17ರಂದು ಅಧಿಸೂಚನೆ ಹೊರಡಿಸಲಾಗಿದೆ ಎಂದು ವಿವರಿಸಿದರು.

ಮೇಲ್ಮನವಿದಾರರ ಪರ ವಕೀಲರು, ಸರ್ಕಾರ ಕೈಗೊಂಡಿರುವ ನಿರ್ಣಯದ ಬಗ್ಗೆ ನಮಗೆ ಯಾವುದೇ ಮಾಹಿತಿ ನೀಡಿಲ್ಲ. ಸರ್ಕಾರ ಸಲ್ಲಿಸಿರುವ ಮೊಮೊ ಪ್ರತಿ ಸಹ ನಮಗೆ ತಲುಪಿಲ್ಲ. ಆದ್ದರಿಂದ ಸರ್ಕಾರದ ಮೊಮೊಗೆ ಉತ್ತರಿಸಲು ತಮಗೆ ಅವಕಾಶ ನೀಡಬೇಕು. ಅಲ್ಲಿಯವರೆಗೆ 2022ರ ಮೇ 31ರಂದು ನ್ಯಾಯಾಲಯ ಹೊರಡಿಸಿರುವ ಮಧ್ಯಂತರ ಆದೇಶವನ್ನು ವಿಸ್ತರಿಸಬೇಕು ಎಂದು ಕೋರಿದರು.

ಸಕಾರಣಕ್ಕೆ ಮಗು ಬೇಡ ಎಂದರೆ ಕ್ರೌರ್ಯ ಅಲ್ಲ: ಹೈಕೋರ್ಟ್‌

ಪ್ರಕರಣವೇನು?: ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ಮುಸ್ಲಿಂ ಮೌಲ್ವಿ ಸೈಯದ್‌ ಗೌಸ್‌ ಮೊಹಿದ್ದೀನ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ 2018ರಲ್ಲಿ ಆದೇಶಿಸಿತ್ತು. ಅದನ್ನು ರದ್ದುಪಡಿಸಿದ್ದ ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠ, ಪ್ರಕರಣವನ್ನು ಸರ್ಕಾರಕ್ಕೆ ಹಿಂದಿರುಗಿಸಿತ್ತು. ಹಾಗೆಯೇ, ಪ್ರಕರಣದ ಕುರಿತು ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿ ನೀಡಿರುವ ವರದಿ ಗಣನೆಗೆ ತೆಗೆದುಕೊಳ್ಳದೇ ಪ್ರಕರಣವನ್ನು ಹೊಸದಾಗಿ ಪರಿಗಣಿಸಬೇಕು ಎಂದು 2021ರ ಸೆ.28ಂದು ನಿರ್ದೇಶಿಸಿತ್ತು. ಈ ತೀರ್ಪು ಪ್ರಶ್ನಿಸಿ ಗೌಸ್‌ ಮೊಹಿದ್ದೀನ್‌ 2021ರ ಅ.18ರಂದು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.