Davanagere teacher suspension: ದಾವಣಗೆರೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಗೈರುಹಾಜರಾದ ಕಾರಣ ಇಬ್ಬರು ಶಿಕ್ಷಕರು ಮತ್ತು ಓರ್ವ ಹಾಸ್ಟೆಲ್ ವಾರ್ಡನ್ನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ದಾರೆ.
ದಾವಣಗೆರೆ (ಸೆ.29): ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷಾ ಕಾರ್ಯ ಕೈಗೊಳ್ಳಲು ನಿರಾಸಕ್ತಿ ತೋರಿದ ಇಬ್ಬರು ಶಿಕ್ಷಕರೂ ಸೇರಿದಂತೆ ಮೂವರು ಸಿಬ್ಬಂದಿಯನ್ನು ಜಿಲ್ಲಾ ಶಿಸ್ತು ಪ್ರಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ದಾವಣಗೆರೆ ಉತ್ತರ ವಲಯದ ಜಮಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಡಿ.ಕೆ.ಮಂಜುನಾಥ, ದಾವಣಗೆರೆ ದಕ್ಷಿಣ ವಲಯದ ನಾಗನೂರು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಎಚ್.ಬಸವರಾಜಪ್ಪ, ದಾವಣಗೆರೆ ತಾಲೂಕು ಮಾಯಕೊಂಡ ಹಿಂದುಳಿಗ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಕೆ.ಆರ್.ದುರ್ಗಪ್ಪ ಅಮಾನತುಗೊಂಡವರು.
ಇದನ್ನೂ ಓದಿ: Chikkaballapur Stray Dog attack: ಜಾತಿ ಸಮೀಕ್ಷೆ ಹೋದ ಶಿಕ್ಷಕಿ ಮೇಲೆ ನಾಯಿ ದಾಳಿ
ಸೆ.22ರಿಂದ ಅ.7ರವರೆಗೆ ಸಮೀಕ್ಷಾ ಕಾರ್ಯಕ್ಕೆ ಮೂವರನ್ನೂ ನಿಯೋಜಿಸಲಾಗಿತ್ತು. ಆದರೆ, ಈ ನೌಕರರು ಸಮೀಕ್ಷಾ ಕಾರ್ಯಕ್ಕೆ ಗೈರು ಹಾಜರಾಗಿದ್ದರು. ಕಾರಣ ಕೇಳಿ ಜಾರಿಗೊಳಿಸಿದ್ದ ನೋಟಿಸ್ಗೂ ಸಮಜಾಯಿಷಿ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಮೂವರೂ ನೌಕರರ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ, ಕರ್ನಾಟಕ ಸರ್ಕಾರಿ ಸಿವಿಲ್ ವರ್ಗೀಕರಣ ಮತ್ತು ಅಪೀಲು ನಿಯಮಾವಳಿ 1957ರ ನಿಯಮ 10(1)(ಜ)ರ ಅನ್ವಯ ಸೇವೆಯಿಂದ ಅಮಾನತುಗೊಳಿಸಲಾಗಿದೆ.
