ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಹಕಾರ ಸಚಿವ ಕೆ.ಎನ್. ರಾಜಣ್ಣ ನಡುವಿನ ಶೀತಲ ಸಮರ ಮುಂದುವರೆದಿದೆ. ರಾಜಣ್ಣ ಅವರನ್ನು ಹಿರಿಯ ನಾಯಕರು ಎಂದು ಡಿ.ಕೆ.ಶಿವಕುಮಾರ್ ಬಣ್ಣಿಸಿದರೆ, ರಾಜಣ್ಣ ಅವರು ಕುಬೇರರ ಮಾತಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಬೆಂಗಳೂರು (ಫೆ.13) : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ನಡುವೆ ಮತ್ತೆ ಶೀತಲ ಸಮರ ಮುಂದುವರೆದಿದೆ. ರಾಜಣ್ಣ ಅವರು ದೊಡ್ಡವರು, ಅವರ ಬಗ್ಗೆ ಮಾತನಾಡುವುದಿಲ್ಲ. ಅವರು ಪಕ್ಷದ ಹಿರಿಯ ನಾಯಕರು, ನಾನು ಸಾಮಾನ್ಯ ಕಾರ್ಯಕರ್ತ ಎಂದು ಡಿ.ಕೆ.ಶಿವಕುಮಾರ್ ಅವರು ಹೇಳಿದ್ದರೆ, ಇದಕ್ಕೆ ಪ್ರತಿಯಾಗಿ ರಾಜಣ್ಣ ಅವರು, ನಾವು ಕುಬೇರರ ಮಾತಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಸಚಿವ ರಾಜಣ್ಣ ಅವರ ದೆಹಲಿ ಭೇಟಿ ಕುರಿತು ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಡಿ.ಕೆ.ಶಿವಕುಮಾರ್, ರಾಜಣ್ಣ ಅವರು ಹಿರಿಯ ನಾಯಕರು, ನಾನು ಸಾಮಾನ್ಯ ಕಾರ್ಯಕರ್ತ ಎಂದರು.
ಇದನ್ನೂ ಓದಿ: ಸಚಿವ ರಾಜಣ್ಣಗೆ ಮಾರ್ಮಿಕವಾಗಿ ಡಿಚ್ಚಿ ಕೊಟ್ಟ ಡಿಕೆಶಿ | BJP internal conflict | Suvarna News
ರಾಜಣ್ಣ ಅವರು ಸರ್ಕಾರಕ್ಕೆ ಮುಜುಗರವಾಗುವಂಥ ಹೇಳಿಕೆಗಳನ್ನು ಪದೇ ಪದೆ ನೀಡುತ್ತಿರುವ ಬಗ್ಗೆ ಮುಖ್ಯಮಂತ್ರಿ ಉತ್ತರಿಸುತ್ತಾರೆ ಎಂದು ಮತ್ತೊಂದು ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಮೈಸೂರಿನ ಉದಯಗಿರಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಪೊಲೀಸರ ವೈಫಲ್ಯವಿದೆ ಎಂಬ ರಾಜಣ್ಣ ಅವರ ಹೇಳಿಕೆಗೂ ಪ್ರತಿಕ್ರಿಯಿಸದ ಡಿ.ಕೆ.ಶಿವಕುಮಾರ್, ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಉತ್ತರಿಸುತ್ತಾರೆ. ಆದರೆ ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ. ಯಾರಿಗೂ ಅಪಾಯವಾಗದ ರೀತಿಯಲ್ಲಿ ಪೊಲೀಸರು ಪರಿಸ್ಥಿತಿ ನಿಭಾಯಿಸಿದ್ದಾರೆ. ಅದಕ್ಕಾಗಿ ಪೊಲೀಸರಿಗೆ ಅಭಿನಂದಿಸುತ್ತೇನೆ ಎಂದರು.
