ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಅವರು, ಕಲ್ಯಾಣ ಕರ್ನಾಟಕಕ್ಕೆ 371(ಜೆ) ವಿಧಿ ಜಾರಿಗೆ ತಂದ ಮಲ್ಲಿಕಾರ್ಜುನ ಖರ್ಗೆ ಅವರಿಗೆ 'ಭಾರತ ರತ್ನ' ನೀಡಲು ಶಿಫಾರಸು ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು. ಖರ್ಗೆಯವರನ್ನು ಅಂಬೇಡ್ಕರ್‌ಗೆ ಹೋಲಿಸಿದರು.

ಬೆಳಗಾವಿ (ಡಿ. 18): ಹೈದರಾಬಾದ್ ಕರ್ನಾಟಕ (ಕಲ್ಯಾಣ ಕರ್ನಾಟಕ) ಭಾಗದ ದಶಕಗಳ ಕನಸಾದ 371 (ಜೆ) ವಿಧಿ ಜಾರಿಗೊಳಿಸುವಲ್ಲಿ ಮಹತ್ತರ ಪಾತ್ರ ವಹಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ನೀಡುವಂತೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು ಎಂದು ಕಾಂಗ್ರೆಸ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಬುಧವಾರ ವಿಧಾನಪರಿಷತ್‌ನಲ್ಲಿ ಒತ್ತಾಯಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಖರ್ಗೆಯವನ್ನ ಅಂಬೇಡ್ಕರ್‌ಗೆ ಹೋಲಿಸಿದ ಮುಖಂಡ:

ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಸದನದಲ್ಲಿ ಮಾತನಾಡಿದ ತಿಪ್ಪಣ್ಣಪ್ಪ ಕಮಕನೂರು ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಸೇವೆಯನ್ನು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಹೋಲಿಸಿದರು. 'ಡಾ. ಅಂಬೇಡ್ಕರ್ ಅವರು ದೇಶಕ್ಕೆ ಸಂವಿಧಾನ ನೀಡಿದರೆ, ಖರ್ಗೆ ಅವರು ಈ ಭಾಗಕ್ಕೆ 371 (ಜೆ) ಕೊಡುಗೆ ನೀಡಿದ್ದಾರೆ. ಅಂಬೇಡ್ಕರ್ ಅವರಂತೆಯೇ ಖರ್ಗೆ ಅವರು ಕೂಡ ಕೇಂದ್ರ ಕಾರ್ಮಿಕ ಸಚಿವರಾಗಿ ಅದ್ಭುತ ಸೇವೆ ಸಲ್ಲಿಸಿದ್ದಾರೆ ಎಂದು ಸ್ಮರಿಸಿದರು.

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಖರ್ಗೆ ಅವರ ಕೊಡುಗೆ ಅಪಾರ

ಖರ್ಗೆ ಅವರು ಕೇಂದ್ರ ಸಚಿವರಾಗಿದ್ದ ಅವಧಿಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ನೀಡಿದ ಕೊಡುಗೆಗಳನ್ನು ಪಟ್ಟಿ ಮಾಡಿದ ಅವರು, ಇಎಸ್ಐ (ESI) ಆಸ್ಪತ್ರೆ, ಕೇಂದ್ರೀಯ ವಿಶ್ವವಿದ್ಯಾಲಯ ಸ್ಥಾಪನೆ ಹಾಗೂ ರೈಲ್ವೆ ಸಚಿವರಾಗಿ ಹೊಸ ರೈಲು ಮಾರ್ಗಗಳನ್ನು ಆರಂಭಿಸುವ ಮೂಲಕ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣಕರ್ತರಾಗಿದ್ದಾರೆ. ಇಂತಹ ನಾಯಕನಿಗೆ ಭಾರತ ರತ್ನ ನೀಡುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟರು.

ಸರ್ಕಾರಕ್ಕೆ ಅಧಿಕೃತ ಶಿಫಾರಸಿನ ಮನವಿ

ಕೇವಲ ರಾಜಕೀಯವಲ್ಲದೆ, ದೇಶದ ಅಭಿವೃದ್ಧಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಶ್ರಮ ಅಪಾರವಾಗಿದೆ. ಆದ್ದರಿಂದ ರಾಜ್ಯ ಸರ್ಕಾರವು ಕೇಂದ್ರಕ್ಕೆ ಇವರ ಹೆಸರನ್ನು ಭಾರತ ರತ್ನ ಪ್ರಶಸ್ತಿಗೆ ಅಧಿಕೃತವಾಗಿ ಶಿಫಾರಸು ಮಾಡಬೇಕು ಎಂದು ತಿಪ್ಪಣ್ಣಪ್ಪ ಕಮಕನೂರು ಸದನದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.