ದೇಶದ ಸಿರಿಧಾನ್ಯ ಉತ್ಪಾದನೆಯಲ್ಲಿ ರಾಜ್ಯ 4ನೇ ಸ್ಥಾನದಲ್ಲಿದ್ದು, ಅದನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಸರ್ಕಾರ ಸಂಕಲ್ಪ ಮಾಡಿದೆ. ರೈತರು ಸಿರಿಧಾನ್ಯ ಉತ್ಪಾದನೆಗೆ ಒತ್ತು ನೀಡಬೇಕು. ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭರವಸೆ ನೀಡಿದರು. 

ಬೆಂಗಳೂರು (ಜ.04): ದೇಶದ ಸಿರಿಧಾನ್ಯ ಉತ್ಪಾದನೆಯಲ್ಲಿ ರಾಜ್ಯ 4ನೇ ಸ್ಥಾನದಲ್ಲಿದ್ದು, ಅದನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಸರ್ಕಾರ ಸಂಕಲ್ಪ ಮಾಡಿದೆ. ರೈತರು ಸಿರಿಧಾನ್ಯ ಉತ್ಪಾದನೆಗೆ ಒತ್ತು ನೀಡಬೇಕು. ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭರವಸೆ ನೀಡಿದರು. ಜ.5 ರಿಂದ 7ರ ವರೆಗೂ ಅರಮನೆ ಮೈದಾನದಲ್ಲಿ ಆಯೋಜಿಸಲಿರುವ ಸಿರಿಧಾನ್ಯ ಮೇಳದ ಪೂರ್ವಭಾವಿಯಾಗಿ ಹೋಟೆಲ್‌ವೊಂದರಲ್ಲಿ ಆಯೋಜಿಸಿದ್ದ ‘ರಫ್ತುದಾರರ ಸಮಾವೇಶ’ಕ್ಕೆ ರಾಗಿ ಸಸಿಗಳಿಗೆ ನೀರೆರೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

Add Asianetnews Kannada as a Preferred SourcegooglePreferred

ಆಧುನಿಕ ಜೀವನದಲ್ಲಿ ಜನರು ಸಾವಯವ ಹಾಗೂ ಸಿರಿಧಾನ್ಯಗಳ ಉತ್ಪನ್ನಗಳಿಗೆ ಒತ್ತು ನೀಡುತ್ತಿದ್ದಾರೆ. ಸ್ಥಳೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿರಿಧಾನ್ಯಗಳ ಬೇಡಿಕೆ ಹಾಗೂ ಬಳಕೆ ಹೆಚ್ಚಿಸಿ ಬೆಳೆಗಾರರು, ಗ್ರಾಹಕರಿಗೆ ಅನುಕೂಲ ಮಾಡುವುದೇ ಸಿರಿಧಾನ್ಯ ಮೇಳದ ಉದ್ದೇಶವಾಗಿದೆ. ಪ್ರಸ್ತುತ ಸಿರಿಧಾನ್ಯಗಳ ಉತ್ಪಾದನೆಯಲ್ಲಿ ರಾಜ್ಯ 4ನೇ ಸ್ಥಾನದಲ್ಲಿದೆ. ಇದನ್ನು ಮೊದಲನೇ ಸ್ಥಾನಕ್ಕೆ ಕೊಂಡೊಯ್ಯುವ ಸಂಕಲ್ಪ ಸರ್ಕಾರದ್ದಾಗಿದ್ದು, ಅಗತ್ಯ ಸಹಕಾರ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಭವ್ಯ ಭಾರತ ವಿಶ್ವ ಗುರು ಆಗಲು ಯುವಜನರೇ ಕಾರಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ರಫ್ತು ಹೆಚ್ಚಳ ಅವಶ್ಯಕ: ಆಹಾರ ಸಂರಕ್ಷಣೆ ಮತ್ತು ಕಟಾವು ತಂತ್ರಜ್ಞಾನದ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಮಾತನಾಡಿ, ರಾಜ್ಯದಲ್ಲಿ ಆಹಾರ ಸಂಸ್ಕರಣೆ ಹಾಗೂ ರಫ್ತು ಕಾರ್ಯ ಇನ್ನೂ ಶಿಶು ಅವಸ್ಥೆಯಲ್ಲಿಯೇ ಇದೆ. ನಾವು ಅಕ್ಕಿ, ಸಾಂಬಾರು ಪದಾರ್ಥ, ಸಕ್ಕರೆ, ಕಾಫಿ ಮತ್ತಿತರ ಉತ್ಪನ್ನಗಳನ್ನು ಹೇರಳವಾಗಿ ಉತ್ಪಾದಿಸುತ್ತಿದ್ದರೂ ಸರಿಯಾಗಿ ಸಂಸ್ಕರಿಸಿ ರಫ್ತು ಮಾಡುತ್ತಿಲ್ಲ. 2022-23ರಲ್ಲಿ ನಮ್ಮ ರಫ್ತು ಶೇ. 26ರಷ್ಟು ಮಾತ್ರ. ಇದನ್ನು ಹೆಚ್ಚಿಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಸಿರಿಧಾನ್ಯದಿಂದ ತಯಾರಿಸಿ ರಫ್ತಾಗುವ ಉತ್ಪನ್ನಗಳನ್ನು ಇದೇ ಸಂದರ್ಭದಲ್ಲಿ ಸಚಿವರು ಬಿಡುಗಡೆಗೊಳಿಸಿದರು. ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್, ಆಯುಕ್ತ ವೈ.ಎಸ್.ಪಾಟೀಲ್, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಗಿರೀಶ್, ನಿರ್ದೇಶಕ ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

ಕಾಂಗ್ರೆಸ್ ಸರ್ಕಾರದಿಂದ ರಾಮಭಕ್ತರ ಬೆದರಿಸುವ ಕೆಲಸ: ಆರ್‌.ಅಶೋಕ್

ಪ್ರೋತ್ಸಾಹ ಧನ ಹೆಚ್ಚಳ ಪರಿಶೀಲನೆ: ಸಿರಿಧಾನ್ಯಗಳನ್ನು ಬೆಳೆಯುವವರಿಗೆ ಪ್ರೋತ್ಸಾಹ ನೀಡಲು ಎಕರೆಗೆ 10 ಸಾವಿರದಂತೆ ಎರಡು ಎಕರೆಯವರೆಗೂ 20 ಸಾವಿರ ರು. ಪ್ರೋತ್ಸಾಹ ಧನ ನೀಡುತ್ತಿದ್ದು, ಇದನ್ನು ಹೆಚ್ಚಳ ಮಾಡುವಂತೆ ಮನವಿಗಳು ಬಂದಿವೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಕೊಪ್ಪಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಸಿರಿಧಾನ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡಲಾಗುತ್ತಿದೆ. ರಫ್ತುದಾರರು ಎದುರಿಸುತ್ತಿರುವ ಸಮಸ್ಯೆ ಪರಿಹರಿಸಲಾಗುವುದು ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅಭಯ ನೀಡಿದರು.