ಒಂದೇ ವಿಮಾನದಲ್ಲಿ ದೇವೇಗೌಡ-ಸಿದ್ದರಾಮಯ್ಯ : ಎಲ್ಲಿಗೆ ಪಯಣ?
ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಸ್ಥಾನ ಹಾಗೂ ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಂದು ಒಂದೇ ವಿಮಾನದಲ್ಲಿ ಪ್ರಯಾಣ ಬೆಳಸಲಿದ್ದಾರೆ.
ಬೆಂಗಳೂರು, [ಡಿ.17]: ಹಾವು ಮುಂಗುಸಿ ಇದ್ದಂತೆ ಇದ್ದ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಷ್ಟು ಹತ್ತಿರವಾಗಿದ್ದಾರೆ.
ಇದಕ್ಕೆ ಪೂರಕವೆಂಬಂತೆ ಈ ಇಬ್ಬರು ಹಳೇದೋಸ್ತಿಗಳು ರಾಜ್ಯಸ್ಥಾನ ಹಾಗೂ ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಂದು [ಸೋಮವಾರ] ಒಂದೇ ವಿಮಾನದಲ್ಲಿ ಪ್ರಯಾಣ ಬೆಳಸಲಿದ್ದಾರೆ.
ಬಿಜೆಪಿ ವಿರುದ್ಧ ಸಂದೇಶ ರವಾನಿಸಲು ಒಟ್ಟಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಸಿದ್ದರಾಮಯ್ಯ ಹಾಗೂ ದೇವೇಗೌಡ ಒಟ್ಟಿಗೆ ವಿಮಾನ ಹತ್ತಲಿದ್ದಾರೆ. ರಾಜ್ಯಮಟ್ಟದಲ್ಲಿ ಮೈತ್ರಿ ಶಕ್ತಿಯುತವಾಗಿದ್ದು, ರಾಷ್ಟ್ರಮಟ್ಟದಲ್ಲೂ ಮೈತ್ರಿ ಗಟ್ಟಿಯಾಗಲಿ ಅನ್ನೋ ಸಂದೇಶ ರವಾನಿಸಲು ಕಾಂಗ್ರೆಸ್ ಹೈಕಮಾಂಡ್ ಉದ್ದೇಶವಾಗಿದೆ.
ಇತ್ತೀಚೆಗಷ್ಟೇ ಈ ದೋಸ್ತಿ ಪಕ್ಷಗಳ ನಾಯಕರು ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದನ್ನು ಇಲ್ಲಿ ಸ್ಮರಿಸಬಹುದು.