ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಆರೋಪ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ವಹಿಸಲು ಕರ್ನಾಟಕದ ಸ್ವಾಮೀಜಿಗಳ ನಿಯೋಗ ಗೃಹ ಸಚಿವ ಅಮಿತ್ ಶಾ ಅವರನ್ನು ಖುದ್ದು ಭೇಟಿಯಾಗಿ ಮನವಿಯನ್ನು ಸಲ್ಲಿಸಿದೆ.

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಆರೋಪ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ವಹಿಸಲು ಕರ್ನಾಟಕದ ಸ್ವಾಮೀಜಿಗಳ ನಿಯೋಗ ಗೃಹ ಸಚಿವ ಅಮಿತ್ ಶಾ ಅವರನ್ನು ಖುದ್ದು ಭೇಟಿಯಾಗಿ ಮನವಿಯನ್ನು ಸಲ್ಲಿಸಿದೆ.ಪಂಚಮಸಾಲಿ ಲಿಂಗಾಯತ ಮಠದ ವಚನಾನಂದ ಸ್ವಾಮೀಜಿ ನೇತೃತ್ವದ ಸನಾತನ ಸಂತ ನಿಯೋಗದಲ್ಲಿ ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀರಾಜಶೇಖರಾನಂದ ಸೇರಿದಂತೆ ವಿವಿಧ ಪೀಠಗಳ ಎಂಟು ಮಂದಿ ಸ್ವಾಮೀಜಿಗಳು ಇದ್ದರು. ಗೃಹ ಸಚಿವ ಅಮಿತ್ ಶಾ ದೆಹಲಿ ಕಚೇರಿಯಲ್ಲಿ ಬುಧವಾರ ರಾತ್ರಿ ಭೇಟಿ ಮಾಡಿ ಎನ್‌ಐಎಗೆ ವಹಿಸಲು ಮನವಿ ಮಾಡಿದ್ದಾರೆ. ಅಲ್ಲದೆ ಧರ್ಮಸ್ಥಳ ಪ್ರಕರಣ ಕುರಿತು ಗೃಹ ಸಚಿವರ ಜೊತೆಗೆ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ.

Add Asianetnews Kannada as a Preferred SourcegooglePreferred

ಎಸ್‌ಐಟಿ ತನಿಖೆ ಬಗ್ಗೆ ಆಕ್ಷೇಪವಿಲ್ಲ. ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರ ಹೊರಬರಬೇಕು ಎಂದು ಆಗ್ರಹಿಸಿದ್ದಾರೆ. ಖುದ್ದು ಸ್ವಾಮೀಜಿಗಳಿಂದ ಅಮಿತ್ ಶಾ ಧರ್ಮಸ್ಥಳ ಬುರುಡೆ ಪ್ರಕರಣದ ಮಾಹಿತಿ ಪಡೆದಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ಕುರಿತು ಮಾಹಿತಿ ಪಡೆದಿದ್ದಾರೆ.

ಸ್ಥಳ ಪರಿಶೋಧನೆ ಕಾರ್ಯಾಚರಣೆ ಧರ್ಮಸ್ಥಳದ ಬಾಹುಬಲಿ ಬೆಟ್ಟ ತಲುಪಿದ ಬಗ್ಗೆ ಸ್ವಾಮೀಜಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಕೇವಲ ಧರ್ಮಸ್ಥಳ ಮಾತ್ರವಲ್ಲ ಬೇರೆ ಬೇರೆ ಕ್ಷೇತ್ರದ ಅಪಪ್ರಚಾರದ ಬಗ್ಗೆಯೂ ಮಾಹಿತಿ ಕೊಟ್ಟಿದ್ದಾರೆ. ಶಬರಿಮಲೆ, ತಿರುಪತಿ ಬಳಿಕ ಇದೀಗ ಧರ್ಮಸ್ಥಳ ಟಾರ್ಗೆಟ್ ಎಂದು ಗೃಹ ಸಚಿವರ ಮುಂದೆ ಬೇಸರ ಹೊರ ಹಾಕಿದ್ದಾರೆ. ಹಿಂದೂ ಧರ್ಮ ಕ್ಷೇತ್ರಗಳನ್ನ ಸಂಶಯದಿಂದ ನೋಡುವ ರೀತಿ ಷಡ್ಯಂತ್ರ ನಡೆಯುತ್ತಿದೆ. ಯಾರು ದೇವಸ್ಥಾನಗಳಿಗೆ ಹೋಗದಂತೆ ಮಾಡುವ ಹುನ್ನಾರ ಇದು ಎಂದು ಮಾಹಿತಿ ನೀಡಿದ್ದಾರೆ. ಇದನ್ನೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ ಎಂದು ಅಮಿತ್‌ ಶಾ ಹೇಳಿದ್ದಾರೆ. ಅತೀ ಶೀಘ್ರವಾಗಿ ಎನ್‌ಐಎ ತನಿಖೆಗೆ ವಹಿಸಲು ನಿಯೋಗ ಮನವಿ ಮಾಡಿದೆ.