Dharmasthala Case: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದ ಕುರಿತು ವಿಶೇಷ ತನಿಖಾ ತಂಡ (ಎಸ್ಐಟಿ) ತನ್ನ ಮೊದಲ ತನಿಖಾ ವರದಿಯನ್ನು ಸಿದ್ಧಪಡಿಸಿದೆ. ಈ ವರದಿಯನ್ನು ಶೀಘ್ರದಲ್ಲೇ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸುವ ಸಾಧ್ಯತೆಯಿದ್ದು, ಇದು ಪ್ರಕರಣದ ತನಿಖೆಯಲ್ಲಿ ಒಂದು ಪ್ರಮುಖ ಬೆಳವಣಿಗೆಯಾಗಿದೆ.
ಮಂಗಳೂರು (ನ.20): ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದ ತನಿಖೆಯ ವರದಿಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಸಿದ್ಧಪಡಿಸಿದ್ದು, ಗುರುವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಪ್ರಥಮ ವರದಿ ಸಲ್ಲಿಸುವ ಸಾಧ್ಯತೆ ಇದೆ.
ಪ್ರಕರಣದ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ಎಸ್ಐಟಿ ಈ ವರದಿಯನ್ನು ಸಿದ್ಧಪಡಿಸಿದೆ. ಪ್ರಕರಣದ ತನಿಖಾಧಿಕಾರಿ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಕೋರ್ಟ್ಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ.
ಸುದೀರ್ಘ ತನಿಖೆ ನಂತರ ಇಂದು ಮೊದಲ ವರದಿ:
ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 20 ರಂದು ರಾಜ್ಯ ಸರ್ಕಾರ ತನಿಖೆ ನಡೆಸಲು ಎಸ್ಐಟಿ ರಚನೆ ಮಾಡಿತ್ತು. ಸುದೀರ್ಘ ತನಿಖೆ ನಡೆಸಿದ ಬಳಿಕ ಈಗ ಮೊದಲ ಹಂತದ ತನಿಖಾ ವರದಿ ಸಿದ್ಧಪಡಿಸಲಾಗಿದೆ.
ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಚಿನ್ನಯ್ಯ ಪ್ರಸಕ್ತ ಶಿವಮೊಗ್ಗ ಜೈಲಿನಲ್ಲಿ ಬಂಧನದಲ್ಲಿದ್ದಾನೆ. ಸೌಜನ್ಯ ಪರ ಹೋರಾಟಗಾರರಾದ ಮಹೇಶ ಶೆಟ್ಟಿ ತಿಮರೋಡಿ ಸೇರಿದಂತೆ ಐವರ ವಿಚಾರಣೆಗೆ ಎಸ್ಐಟಿ ನೋಟಿಸ್ ನೀಡಿತ್ತು. ಈ ನೋಟಿಸ್ಗೆ ಕೋರ್ಟ್ ಮೂಲಕ ತಿಮರೋಡಿ ತಂಡ ತಡೆ ತಂದಿತ್ತು. ಈ ಎಲ್ಲ ಬೆಳವಣಿಗೆಗಳ ನಡುವೆ ಮೊದಲ ಹಂತದ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ.


