Asianet Suvarna News Asianet Suvarna News

'ಸುಶಾಸನ ಮಾಸ' ಅಂಗವಾಗಿ 10 ಸಾವಿರ ಮಂದಿಗೆ ಉದ್ಯೋಗ ಪತ್ರ ಹಂಚಿಕೆ: ಅಶ್ವತ್ಥನಾರಾಯಣ

ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಸ್ಮರಣಾರ್ಥವಾಗಿ ತಮ್ಮ ನೇತೃತ್ವದ ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಗಳಲ್ಲಿ ಡಿ.1ರಿಂದ 'ಸುಶಾಸನ ಮಾಸ'ವನ್ನು ಆಚರಿಸಲಾಗುವುದು. ಈ ಒಂದು ತಿಂಗಳ ಅವಧಿಯಲ್ಲಿ 10 ಸಾವಿರ ಜನರಿಗೆ ಉದ್ಯೋಗ ಪತ್ರ ಹಂಚಿಕೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Distribution of employment letter to 10 thousand people as part of Sushasana Masa
Author
First Published Nov 24, 2022, 10:56 PM IST

ಬೆಂಗಳೂರು (ನ.24) : ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಸ್ಮರಣಾರ್ಥವಾಗಿ ತಮ್ಮ ನೇತೃತ್ವದ ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಗಳಲ್ಲಿ ಡಿ.1ರಿಂದ 'ಸುಶಾಸನ ಮಾಸ'ವನ್ನು ಆಚರಿಸಲಾಗುವುದು. ಈ ಒಂದು ತಿಂಗಳ ಅವಧಿಯಲ್ಲಿ 10 ಸಾವಿರ ಜನರಿಗೆ ಉದ್ಯೋಗ ಪತ್ರ ಹಂಚಿಕೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಕುರಿತು ಮೂರೂ ಇಲಾಖೆಗಳ ಉನ್ನತಾಧಿಕಾರಿಗಳ ಜತೆ ಗುರುವಾರ ಮಹತ್ವದ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಶಾಸನ ಮಾಸಾಚರಣೆ ಅಂಗವಾಗಿ ತಮ್ಮ ಇಲಾಖೆಗಳಲ್ಲಿನ ಹಲವು ಸುಧಾರಣಾ ಕ್ರಮಗಳನ್ನುಜನರಿಗೆ ತಿಳಿಸುವ ಸಲುವಾಗಿ ತಿಂಗಳಪೂರ್ತಿ ನಿರಂತರವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಡಿ.25 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಈ ವೇಳೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಂಪೂರ್ಣವಾಗಿ ಹೊಸ ರೂಪ ನೀಡಲಾಗುವುದು. ಜತೆಗೆ, ಕೌಶಲಾಭಿವೃದ್ಧಿ ಇಲಾಖೆಯ ಮೂಲಕ 10 ಸಾವಿರ ಜನರಿಗೆ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸುವ ಸಂಬಂಧ ನೇಮಕಾತಿ ಪತ್ರಗಳನ್ನು ನೀಡಲಾಗುವುದು. ಹಾಗೆಯೇ, ಜಿಟಿಟಿಸಿ ಸುವರ್ಣ ಸಂಭ್ರಮದ ಅಂಗವಾಗಿ ಕಟ್ಟಿರುವ ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಲಾಗುವುದು. ಅಲ್ಲದೆ, ತಾಂತ್ರಿಕ ಶಿಕ್ಷಣ ಇಲಾಖೆಗೆ ನೇಮಕಾತಿ ಮತ್ತು ವೃಂದ ನಿಯಮಗಳನ್ನು 15 ವರ್ಷಗಳ ನಂತರ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ವಿಧಾನಸೌಧದ ಮುಂಭಾಗದಲ್ಲೂ ಕೆಂಪೇಗೌಡರ ಪ್ರತಿಮೆ ನಿರ್ಮಾಣ: ಸಚಿವ ಅಶ್ವತ್ಥ ನಾರಾ​ಯಣ

ಎನ್‌ಇಪಿ ಜಾರಿ ಕುರಿತು ಚರ್ಚೆ ಆಯೋಜಿಸಿ: ಸುಶಾಸನ ಮಾಸಾಚರಣೆಯ ಅಂಗವಾಗಿ, ಉತ್ತಮ ವಿ.ವಿ.ಗಳು ಸೇರಿದಂತೆ ಹಲವು ವಿಭಾಗಗಳಲ್ಲಿ ಪ್ರಶಸ್ತಿ ಗಳನ್ನು ನೀಡುವ ಉದ್ದೇಶ ಇದೆ. ಈ ನಿಟ್ಟಿನಲ್ಲಿ ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದಲ್ಲದೆ, ಎಲ್ಲ ಕಾಲೇಜುಗಳಲ್ಲೂ ಎನ್‌ಇಪಿ ಮತ್ತು ಅದರ ಪ್ರಗತಿ ಕುರಿತು ಪ್ರಬಂಧ ಮತ್ತು ಚರ್ಚಾ ಸ್ಪರ್ಧೆಗಳನ್ನು ಆಯೋಜಿಸಲು ನಿರ್ದೇಶನ ನೀಡಲಾಗಿದೆ. ಜತೆಗೆ, ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರುತ್ತಿರುವ ಏಳು ಹೊಸ ವಿಶ್ವವಿದ್ಯಾಲಯಗಳಲ್ಲಿ ಆಗಬೇಕಿರುವ ಹುದ್ದೆಗಳ ನೇಮಕಾತಿಗೆ ಅನುಮೋದನೆ ಕೊಡಲಾಗುವುದು. ಬದಲಾದ ಕಾಲಮಾನದಲ್ಲಿ ಎಲ್ಲ ಇಲಾಖೆಗಳೂ ಸುಸ್ಥಿರ ಮತ್ತು ಪಾರದರ್ಶಕ ಮಾದರಿಯಲ್ಲಿ ಉತ್ತರದಾಯಿತ್ವದೊಂದಿಗೆ ಕೆಲಸ ಮಾಡಬೇಕಾದ ಸವಾಲಿದೆ. ಇದಕ್ಕಾಗಿ ಮೂರೂ ಇಲಾಖೆಗಳಲ್ಲಿ ಸೋಶಿಯಲ್‌ ಮೀಡಿಯಾವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಸುವ ಸಂಸ್ಕೃತಿಯನ್ನು ತರಲಾಗುವುದು ಎಂದು ವಿವರಿಸಿದರು.

ಪ್ರಾಧ್ಯಾಪಕರ ಬಡ್ತಿ ಗೊಂದಲಕ್ಕೆ ಮುಕ್ತಿ: ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಾಧ್ಯಾಪಕರ ಬಡ್ತಿ ಇತ್ಯಾದಿ ವಿಚಾರಗಳು ಬಹುಕಾಲದಿಂದ ನನೆಗುದಿಗೆ ಬಿದ್ದಿವೆ. ಸುಶಾಸನ ಮಾಸಾಚರಣೆ ಸಂದರ್ಭದಲ್ಲಿ ಅವುಗಳನ್ನು ಬಗೆಹರಿಸಲಾಗುವುದು. ಇದರ ಜತೆಗೆ ಸುಗಮ ಮತ್ತು ಉತ್ತಮ ಆಡಳಿತದ ಅಂಗವಾಗಿ ತಂದಿರುವ ಸಮಗ್ರ ವಿವಿ ನಿರ್ವಹಣಾ ತಂತ್ರಾಂಶದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುವುದು. ಜೀವನೋಪಾಯ ಇಲಾಖೆಯಡಿ ಬರುವ ಸ್ವಸಹಾಯ ಸಂಘಗಳು ರಾಜ್ಯದ ಅರ್ಥಿಕ ಅಭಿವೃದ್ಧಿಗೆ ಮಹತ್ತ್ವದ ಕಾಣಿಕೆ ನೀಡುತ್ತಿವೆ. ಇವುಗಳನ್ನು ಮತ್ತಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. ಸುಶಾಸನ ಮಾಸಾಚರಣೆ ಅಂಗವಾಗಿ ಅರಿವು ಮತ್ತು ಜಾಗೃತಿ ಎರಡನ್ನೂ ಸಾಧಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಹೇಳಿದರು.

ಚಿಲುಮೆ ಸಂಸ್ಥೆಯನ್ನು ನಾನು ಬಳಸಿಲ್ಲ: ಸಚಿವ ಅಶ್ವತ್ಥ್‌ ನಾರಾಯಣ

ಈ ವೇಳೆ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ ತಿಮ್ಮೇಗೌಡ, ಐಟಿಬಿಟಿ ಇಲಾಖೆ ಹೆಚ್ವುವರಿ ಮುಖ್ಯ ಕಾರ್ಯದರ್ಶಿ‌ ರಮಣರೆಡ್ಡಿ, ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಐಟಿಬಿಟಿ ನಿರ್ದೇಶಕಿ ಮೀನಾ‌ ನಾಗರಾಜ, ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತೆ ಜ್ಯೋತಿ, ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ರವಿ ಡಿ.ಚನ್ನಣ್ಣನವರ್, ಕೆಇಎ ಆಡಳಿತಾಧಿಕಾರಿ ಶಿವಕುಮಾರ ಇತರರು ಇದ್ದರು.

Follow Us:
Download App:
  • android
  • ios