ಹಾವೇರಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸರ್ಕಾರವು ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಮತಿ ನೀಡಿದರೆ, ರಾಜ್ಯ ಸರ್ಕಾರದ 7ನೇ ಗ್ಯಾರಂಟಿಯಾಗಿ 'ನೀರಿನ ಗ್ಯಾರಂಟಿ' ನೀಡುವುದಾಗಿ ಘೋಷಿಸಿದ್ದಾರೆ. 

ಹಾವೇರಿ (ಫೆ.14): ಕೇಂದ್ರ ಸರ್ಕಾರ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಎತ್ತಿನಹೊಳೆಗೆ ಅನುಮತಿ ಕೊಟ್ಟರೆ ರಾಜ್ಯ ಸರ್ಕಾರದ ಏಳನೇ ಗ್ಯಾರಂಟಿಯಾಗಿ ಜನರಿಗೆ ನೀರಿನ ಗ್ಯಾರಂಟಿ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಘೋಷಿಸಿದ್ದಾರೆ.

Add Asianetnews Kannada as a Preferred SourcegooglePreferred

ಹಾವೇರಿಯಲ್ಲಿ ಶನಿವಾರ ಆಯೋಜಿಸಿದ್ದ ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೃಷ್ಣಾ, ಕಾವೇರಿ, ಮಹದಾಯಿ ಯೋಜನೆಗಳ ಮೂಲಕ ರೈತರ ಬದುಕು ಹಸನ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಪ್ರತಿಯೊಬ್ಬರಿಗೂ ಕುಡಿಯಲು, ವ್ಯವಸಾಯಕ್ಕೆ ನೀರು ಒದಗಿಸುವುದರ ಜೊತೆಗೆ, ಕೆರೆ ತುಂಬಿಸಿ ಅಂತರ್ಜಲ ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ 35-40 ಲಕ್ಷ ರು. ಪರಿಹಾರ ನೀಡಲು ನಮ್ಮ ಸರ್ಕಾರ ತೀರ್ಮಾನಿಸಿದೆ. ಕಾವೇರಿ ನದಿಗೆ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ನಮ್ಮ ಮಾರ್ಗದರ್ಶನದಲ್ಲಿ ಕಾನೂನು ತಜ್ಞರ ತಂಡ ವಾದ ಮಂಡಿಸಿದ್ದು, ಸುಪ್ರೀಂಕೋರ್ಟ್‌ನಲ್ಲಿ ಈ ಯೋಜನೆ ಪರವಾಗಿ ತೀರ್ಪು ಬಂದಿದೆ. ಆ ಮೂಲಕ ತಮಿಳುನಾಡು ಹಾಕಿದ್ದ ಆಕ್ಷೇಪಣಾ ಅರ್ಜಿ ವಜಾ ಆಗಿದೆ. ಈಗ ಈ ಯೋಜನೆಗೆ ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ. ಮಹದಾಯಿ ವಿಚಾರದಲ್ಲಿ ಕೇಂದ್ರ ಅರಣ್ಯ ಇಲಾಖೆ ಅನುಮತಿ ನೀಡಿಲ್ಲ. ಇನ್ನು ಕುಡಿಯುವ ನೀರು ಪೂರೈಕೆ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರ 3 ತಿಂಗಳಲ್ಲಿ ಅನುಮತಿ ಕೊಟ್ಟರೆ ಸಾಕು, ಚಿಕ್ಕಬಳ್ಳಾಪುರ, ಕೋಲಾರಕ್ಕೆ ನೀರು ಹರಿಸುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಭರವಸೆ ನೀಡಿದರು.

2028ಕ್ಕೆ ಕಾಂಗ್ರೆಸ್​ಗೆ 141 ಸೀಟು:

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಮಗೆ 136 ಸೀಟುಗಳು ಬಂದಿದ್ದವು, 2028ರ ಚುನಾವಣೆಯಲ್ಲಿ ನಮಗೆ 141 ಸೀಟುಗಳು ಬರಲಿವೆ. ನನ್ನ ಈ ಮಾತನ್ನು ಬರೆದಿಟ್ಟುಕೊಳ್ಳಿ. ನನಗೆ, ನಮ್ಮ ಶಾಸಕರಿಗೆ ಈ ಬಗ್ಗೆ ಆತ್ಮವಿಶ್ವಾಸವಿದೆ ಎಂದರು.

ಸರ್ಕಾರಕ್ಕೆ ಸಾವಿರ ದಿನಗಳು ತುಂಬಿವೆ. ಈ ಸಾವಿರ ದಿನಗಳಲ್ಲಿ ರಾಜ್ಯದಲ್ಲಿ ದೊಡ್ಡ ಬದಲಾವಣೆಯಾಗಿದೆ. ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅಪಮಾನ, ಆದರ್ಶ ಇಲ್ಲದೆ ಸತ್ತರೆ ಬದುಕಿಗೆ ಅಪಮಾನ. ಹೀಗಾಗಿ, ನಿಮ್ಮ ಋಣ ತೀರಿಸಲು ನಾವು ಇಲ್ಲಿಗೆ ಬಂದಿದ್ದೇವೆ ಎಂದರು.

ಬೆಲೆ ಏರಿಕೆ ನಿಯಂತ್ರಿಸಿ ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ನಾವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದೆವು. ಇದು ಕಾಂಗ್ರೆಸ್ ಗ್ಯಾರಂಟಿಯಾಗಿ ಉಳಿಯಲಿಲ್ಲ. ಬಿಜೆಪಿಯವರೂ ಕೂಡ ಬೇರೆ ರಾಜ್ಯಗಳಲ್ಲಿ ಕರ್ನಾಟಕದ ಮಾದರಿಯನ್ನು ಅನುಸರಿಸಿದ್ದು, ಇಂದು ಇಂದು ದೇಶದ ಗ್ಯಾರಂಟಿಯಾಗಿದೆ. ಇದಕ್ಕೆ ಕಾರಣ ನೀವು ಕೊಟ್ಟ ಮತಗಳು. ಹೀಗಾಗಿ, ನಿಮಗೆ ಅಭಿನಂದನೆ ಸಲ್ಲಿಸಲು ನಾನಿಲ್ಲಿ ನಿಂತಿದ್ದೇನೆ ಎಂದು ಹೇಳಿದರು.

‘ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಮಾತ್ರ ಚೆಂದ ಅಂತ ಈ ಮೊದಲು ಹೇಳಿದ್ದೆ. ಈ ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿ ಇದ್ದಿದ್ದಕ್ಕೆ 5 ಗ್ಯಾರಂಟಿಗಳ ಜೊತೆಗೆ ಇದೀಗ 6ನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿಯನ್ನು ನೀಡುತ್ತಿದ್ದೇವೆ’ ಎಂದರು.

ಧರ್ಮ, ದೇವರು ಬಿಜೆಪಿ ಆಸ್ತಿಯಲ್ಲ:

ರಾಜ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಡಿಸಿಎಂ, ನಾವು ಮಾಡಿದಂತಹ ಯಾವುದಾದರೂ ಒಂದು ಕೆಲಸವನ್ನು ಬಿಜೆಪಿಯವರು ಮಾಡಿದ್ದರೆ, ಜನರಿಗಾಗಿ ಒಂದೇ ಒಂದು ಒಳ್ಳೆಯ ಕಾರ್ಯಕ್ರಮವನ್ನು ಕೊಟ್ಟಿದ್ದರೆ, ರಾಜಕೀಯದಲ್ಲಿ ಅವರಿಗೆ ಮಾತನಾಡುವ ಶಕ್ತಿ, ನೈತಿಕತೆ ಇರುತ್ತಿತ್ತು. ಆದರೆ, ಬಿಜೆಪಿಯವರು ಆ ನೈತಿಕತೆಯನ್ನು ಕಳೆದುಕೊಂಡಿದ್ದಾರೆ. ಆದರೆ, ನಮ್ಮಿಂದಾಗಿ, ಜನರು ನೆಮ್ಮದಿಯಿಂದ ಬದುಕುವ ದಿನಗಳನ್ನು, ಮಹಿಳೆಯರು ಸಂತೋಷದಿಂದ ಬಸ್‌ನಲ್ಲಿ ಪ್ರಯಾಣ ಮಾಡುತ್ತಿರುವ ದಿನಗಳನ್ನು, ಗೃಹಿಣಿಯರ ಬದುಕಿನಲ್ಲಿ ಬದಲಾವಣೆ ಕಂಡ ದಿನಗಳನ್ನು, ಯುವಕರು ಉದ್ಯೋಗ ಸೃಷ್ಟಿಮಾಡಿಕೊಳ್ಳುತ್ತಿರುವ ದಿನಗಳನ್ನು ನಾವು-ನೀವು ಈಗ ನೋಡುತ್ತಿದ್ದೇವೆ ಎಂದರು.

ದೇವರು ಬಿಜೆಪಿಯ ಆಸ್ತಿಯಲ್ಲ. ದೇವರು, ದೇಶದ ಎಲ್ಲಾ ವರ್ಗದ ಜನರ ಆಸ್ತಿ. ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು, ಧರ್ಮದಲ್ಲಿ ರಾಜಕಾರಣ ಇರಬಾರದು. ಪಿಂಚಣಿ ಯೋಜನೆ, ಮಧ್ಯಾಹ್ನ ಬಿಸಿಯೂಟ, ಸ್ತ್ರೀಶಕ್ತಿ, ಮನರೇಗಾ ಕಾರ್ಯಕ್ರಮ ಕೊಟ್ಟಿದ್ದು ಕಾಂಗ್ರೆಸ್. ಆದರೆ, ನೀವು ಮಹಾತ್ಮಾ ಗಾಂಧಿ ಹೆಸರನ್ನು ತೆಗೆದು ಅವರನ್ನು ಕೊಂದಿದ್ದೀರಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.