ಗಣೇಶ ಹಬ್ಬಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ ರಾಜ್ಯ ಸರಕಾರದ ಕಠಿಣ ನಿಯಮ ಮನೆಯಲ್ಲಿ 2 ಅಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಗಣೇಶ ಮೂರ್ತಿ ಇಡಬೇಕೆಂದು ನಿರ್ಬಂಧ ನಿರ್ಬಂಧ ವಿಧಿಸಿರುವುದು ಅರ್ಥ ಹೀನ ಎಂದ ಡಿಕೆ ಶಿವಕುಮಾರ್

 ಬೆಂಗಳೂರು (ಸೆ.09): ಗಣೇಶ ಹಬ್ಬಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ ರಾಜ್ಯ ಸರಕಾರವು ಮನೆಯಲ್ಲಿ 2 ಅಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಗಣೇಶ ಮೂರ್ತಿ ಇಡಬೇಕೆಂದು ನಿರ್ಬಂಧ ವಿಧಿಸಿರುವುದು ಅರ್ಥ ಹೀನ. ಗಣೇಶಮೂರ್ತಿ ತಯಾರಕರ ಬದುಕಿನ ಜೊತೆ ಚೆಲ್ಲಾಟ ಮಾಡದೆ ಕೂಡಲೇ ಆದೇಶ ಹಿಂಪಡೆಯಬೇಕು. ಇಲ್ಲದಿದ್ದರೆ ಮೂರ್ತಿ ತಯಾರಕರಿಗೆ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದ್ದಾರೆ.

Add Asianetnews Kannada as a Preferred SourcegooglePreferred

ಕಳೆದ 2 ತಿಂಗಳಿಂದ ಗಣೇಶ ಮೂರ್ತಿ ತಯಾರಕರು ಲಕ್ಷಾಂತರ ಮೂರ್ತಿಗಳನ್ನು ಮಾಡಿದ್ದಾರೆ. ಸರ್ಕಾರ ಕೊನೆ ಕ್ಷಣದಲ್ಲಿ ಇಂತಹ ನಿರ್ಬಂಧ ಹೇರಿದರೆ ಅವರ ಸ್ಥಿತಿ ಏನಾಗಬೇಕು? ಸರ್ಕಾರ ಇದನ್ನೇ ಎರಡು ಮೂರು ತಿಂಗಳ ಹಿಂದೆಯೇ ಹೇಳಿದ್ದರೆ, ಮೂರ್ತಿ ತಯಾರಕರು ದೊಡ್ಡ ಮೂರ್ತಿಗಳನ್ನು ಮಾಡುತ್ತಲೇ ಇರಲಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

'ನಮ್ಮದೇ ಸೋಲು ಅಂತೀರಲ್ಲ.. ಅವರೇನೂ ಸೋತಿಲ್ವ'

ಕೊರೋನಾ ಸಮಯದಲ್ಲಿ ಆದಾಯವಿಲ್ಲದಿದ್ದ ಗಣೇಶ ಮೂರ್ತಿ ತಯಾರಕರು, ತಮ್ಮ ಬಳಿಯಿದ್ದ ಹಣ ಹಾಕಿ ಮೂರ್ತಿಗಳನ್ನು ತಯಾರಿಸಿದ್ದಾರೆ. ಕೊನೆ ಘಳಿಗೆಯಲ್ಲಿ ಈ ರೀತಿ ನಿರ್ಬಂಧ ಹೇರಿದರೆ ಅವರ ಪರಿಸ್ಥಿತಿ ಏನು? ಸರ್ಕಾರ ಇದುವರೆಗೂ ಇವರಿಗೆ ನಯಾ ಪೈಸೆ ಕೊರೋನಾ ಪರಿಹಾರ ಕೊಟ್ಟಿಲ್ಲ. ಇದರ ನಡುವೆ ದೇವರ ಮೂರ್ತಿ ಮಾಡಿಕೊಂಡು ಜೀವನ ನಡೆಸುವವರ ಬದುಕಿಗೆ ಸರಕಾರ ಕೊಳ್ಳಿ ಇಟ್ಟಿದೆ ಎಂದು ಆಕ್ರೋಶ ಅವರು ವ್ಯಕ್ತಪಡಿಸಿದ್ದಾರೆ.

ಭಕ್ತ - ಭಗವಂತನ ನಡುವೆ ಕಂದಕ: ರಾಜ್ಯ ಸರ್ಕಾರ ಗಣಪತಿ ಉತ್ಸವಕ್ಕೆ ಕಡಿವಾಣ ಹಾಕುವ ಭರದಲ್ಲಿ ಭಕ್ತ ಹಾಗೂ ಭಗವಂತನ ನಡುವೆ ಕಂದಕ ನಿರ್ಮಿಸಿದೆ. ಗಣೇಶ ಪ್ರತಿಮೆಯನ್ನು ಮನೆಯಲ್ಲಿ 2 ಅಡಿ, ಸಾರ್ವಜನಿಕ ಪ್ರದೇಶದಲ್ಲಿ 4 ಅಡಿಗೆ ಸೀಮಿತಗೊಳಿಸಿ, ದೇವರಿಗೂ ನೀನು ಇಷ್ಟೇ ಎತ್ತರ ಇರಬೇಕು ಎಂದು ನಿಯಂತ್ರಣ ಹೇರುತ್ತಿದ್ದಾರೆ. ಸರಕಾರದ ಈ ತಿಕ್ಕಲುತನದ ನಿರ್ಧಾರ ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ ಎಂಬಂತಿದೆ ಎಂದು ಅವರು ಟೀಕಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚು ಜನ ಸೇರಬಾರದು, ಮೆರವಣಿಗೆ ಮಾಡಬಾರದು ಎಂಬುದನ್ನು ಒಪ್ಪುತ್ತೇವೆ. ಆದರೆ ಗಣೇಶನ ಪ್ರತಿಮೆ 2-4 ಅಡಿಯೇ ಇರಬೇಕು ಎಂಬ ನಿರ್ಬಂಧದ ಹಿಂದೆ ಯಾವ ತರ್ಕ ಇದೆ? ಹಿಂದೂ ಸಂಸ್ಕೃತಿ ವಕ್ತಾರರು ಎಂದು ಹೇಳಿಕೊಳ್ಳುವವರು ಮಾಡುವ ಕೆಲಸ ಇದೇನಾ? ಎಂದು ಕಿಡಿ ಕಾರಿದ್ದಾರೆ.