ಬೆಂಗಳೂರು-ಪುಣೆ ಹೆದ್ದಾರಿಯಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಮಾಜಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಹೈಕೋರ್ಟ್ ತನಿಖಾಧಿಕಾರಿಗಳಿಗೆ ಸೂಚಿಸಿದೆ. ಹಲ್ಲೆಗೊಳಗಾದವರು ಹೆಗಡೆ ಮತ್ತು ಅವರ ಭದ್ರತಾ ಸಿಬ್ಬಂದಿ ವಿರುದ್ಧ ದೂರು ನೀಡಿದ್ದರು.

ಬೆಂಗಳೂರು (ಜೂ.27) : ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ದಾಬಸ್‌ಪೇಟೆ ಸಮೀಪದ ಹಳೇ ನಿಜಗಲ್‌ ಬಳಿ ಇತ್ತೀಚೆಗೆ ನಡೆದಿದ್ದ ಗಲಾಟೆ ಪ್ರಕರಣ ಸಂಬಂಧ ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು ಎಂದು ಹೈಕೋರ್ಟ್‌ ಗುರವಾರ ತನಿಖಾಧಿಕಾರಿಗಳಿಗೆ ಸೂಚನೆ ನೀಡಿದೆ.

Add Asianetnews Kannada as a Preferred SourcegooglePreferred

ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಬಸ್‌ಪೇಟೆ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಅನಂತಕುಮಾರ್‌, ಅವರ ಭದ್ರತಾ ಸಿಬ್ಬಂದಿ ಶ್ರೀಧರ್‌ ಹಾಗೂ ಕಾರು ಚಾಲಕ ಮಹೇಶ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣಕುಮಾರ್‌ ಅವರ ಪೀಠ, ಅನಂತಕುಮಾರ್‌ ವಿರುದ್ಧ ತನಿಖಾಧಿಕಾರಿಗಳು ಬಲವಂತದ ಕ್ರಮಕೈಗೊಳ್ಳಬಾರದು. ಆದರೆ ಅವರು ತನಿಖೆಗೆ ಸಹಕರಿಸಬೇಕು ಎಂದು ಸೂಚಿಸಿ ಮಧ್ಯಂತರ ತಡೆಯಾಜ್ಞೆ ನೀಡಿತು.

ಪ್ರಕರಣದ ಹಿನ್ನೆಲೆ: ತುಮಕೂರಿನಿಂದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಕಾರಿನಲ್ಲಿ ಬರುತ್ತಿದ್ದಾಗ ಹಳೇ ನಿಜಗಲ್‌ ಬಳಿ ಹಿಂದಿನಿಂದ ಅತಿವೇಗವಾಗಿ ಚಾಲನೆ ಮಾಡಿಕೊಂಡು ಬಂದ ಕಾರೊಂದರ ಚಾಲಕ ನಮ್ಮ ಕಾರು ನಿಲ್ಲಿಸಲು ಸನ್ನೆ ಮಾಡಿದರು. ಕಾರು ನಿಲ್ಲಿಸುತ್ತಿದ್ದಂತೆ ಆ ಕಾರಿನಿಂದಿಳಿದು ಬಂದ ಒಬ್ಬ ವ್ಯಕ್ತಿ ಮುಖಕ್ಕೆ ಗುದ್ದಿದರು. ಮತ್ತೊಬ್ಬ ವ್ಯಕ್ತಿ ನಮ್ಮನ್ನು ಕಾರಿನಿಂದ ಹೊರಗೆಳೆದುಕೊಂಡು ಹಲ್ಲೆ ನಡೆಸಿದರು. ಇದರಿಂದ ನಮ್ಮಲ್ಲಿ ಒಬ್ಬರ ಮೂರು ಹಲ್ಲುಗಳು ಮುರಿದಿವೆ ಎಂದು ಹಾಲೇನಹಳ್ಳಿಯ ಸೈಫ್‌ಖಾನ್‌ ಜೂ.23ರಂದು ದಾಬಾಸ್‌ಪೇಟೆ ಠಾಣೆಗೆ ನೀಡಿದ್ದರು.

ಆ ಕಾರಿನಲ್ಲಿದ್ದ ಅನಂತ್‌ ಕುಮಾರ್‌ ಹೆಗಡೆ ನನ್ನ ತಾಯಿ ಮೇಲೆ ಹಲ್ಲೆ ನಡೆಸಿದರು. ಅವರ ಭದ್ರತಾ ಸಿಬ್ಬಂದಿ ಪಿಸ್ತೂಲ್‌ ತೋರಿಸಿ ಜೀವ ಬೆದರಿಕೆ ಹಾಕಿದರು ಎಂದು ದೂರಿನಲ್ಲಿ ತಿಳಿಸಿದ್ದರು. ಇದರ ಆಧಾರದ ಮೇಲೆ ದಾಬಸ್‌ಪೇಟೆ ಠಾಣೆ ಪೊಲೀಸರು ಅನಂತಕುಮಾರ್‌ ಹೆಗಡೆ, ಭದ್ರತಾ ಸಿಬ್ಬಂದಿ ಶ್ರೀಧರ್‌ ಹಾಗೂ ಕಾರು ಚಾಲಕ ಮಹೇಶ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು.