ಗೃಹ ಸಚಿವ ಡಾ. ಜಿ.ಪರಮೇಶ್ವರ್ರಾ ಜ್ಯದ ಮುಖ್ಯಮಂತ್ರಿಯಾಗಬೇಕು ಎಂದು ತುಮಕೂರು ಜಿಲ್ಲೆಯ 25 ಮಠಾಧೀಶರು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ. ಪರಮೇಶ್ವರ್ ಅವರ ಸ್ವಚ್ಛ ರಾಜಕೀಯ ಕೆಪಿಸಿಸಿ ಅಧ್ಯಕ್ಷರಾಗಿ ಗೃಹ ಸಚಿವರಾಗಿ ಅವರ ಸೇವೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಶ್ಲಾಘಿಸಿದ್ದಾರೆ.

ತುಮಕೂರು (ಡಿ.19): ಸಜ್ಜನರು, ವಿದ್ಯಾವಂತರು ಆಗಿರುವ ಗೃಹ ಮಂತ್ರಿ ಡಾ। ಜಿ.ಪರಮೇಶ್ವರ್‌ ಅವರು ಈ ರಾಜ್ಯದ ಮುಖ್ಯಿಮಂತ್ರಿಗಳಾಗಿ ನೇಮಕ ಮಾಡುವಂತೆ ಕಾಂಗ್ರೆಸ್ ಪಕ್ಷದ ಮುಖಂಡರನ್ನು ತುಮಕೂರು ಜಿಲ್ಲೆಯ 25 ವಿವಿಧ ಮಠಾಧೀಶರು ಒತ್ತಾಯಿಸಿದ್ದಾರೆ.

Add Asianetnews Kannada as a Preferred SourcegooglePreferred

ನಗರದ ಕೊಲ್ಲಾಪುರದಮ್ಮ ಸಮುದಾಯಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿವಿಧ ಮಠಾಧಿಪತಿಗಳು, ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷರಾಗಿ ಎರಡು ಬಾರಿಯೂ ಪಕ್ಷವನ್ನು ಮುನ್ನೆಡೆಸಿ, ಒಮ್ಮೆ ಪೂರ್ಣ ಬಹುಮತದೊಂದಿಗೆ, ಮತ್ತೊಮ್ಮೆ ಜೆಡಿಎಸ್ ಪಕ್ಷದ ಸಹಕಾರದೊಂದಿಗೆ ಅಧಿಕಾರ ಹಿಡಿಯಲು ಕಾರಣಕರ್ತರಾಗಿದ್ದಾರೆ. ಅಲ್ಲದೆ ಮೂರು ಬಾರಿ ಗೃಹ ಸಚಿವರಾಗಿ, ವಿವಿಧ ಮಂತ್ರಿ ಪದವಿಗಳನ್ನು ಅತ್ಯಂತ ಜವಾಬ್ದಾರಿಯಿಂದ ನಿಭಾಯಿಸಿ, ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ಕಾರ್ಯನಿರ್ವಹಿಸಿದ್ದಾರೆ. ಹಾಗಾಗಿ ಅವರನ್ನು ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿಯಾಗಿ ಘೋಷಿಸಬೇಕು ಎಂಬುದು ಜಿಲ್ಲೆಯ ಎಲ್ಲಾ ಮಠಾಧೀಶರು, ಮುಖಂಡರು, ಕಾರ್ಯಕರ್ತರ ಒತ್ತಾಯವಾಗಿದೆ ಎಂದರು.

ಗೃಹಮಂತ್ರಿಯಾಗಿರುವ ಡಾ.ಜಿ.ಪರಮೇಶ್ವರ್ ವಿದೇಶದಲ್ಲಿ ಕಲಿತರೂ ದೇಶ ಸೇವೆಗೆ ತಮ್ಮನ್ನುತಾವು ಅರ್ಪಿಸಿಕೊಂಡಿದ್ದಾರೆ. ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೂಲಕ ಒಂದೇ ಸೂರಿನಡಿ ಎಲ್.ಕೆ.ಜಿ.ಯಿಂದ ಪದವಿ, ಮೆಡಿಕಲ್, ಎಂಜಿನಿಯರಿಂಗ್ ವರೆಗೆ ಶಿಕ್ಷಣ ನೀಡುತ್ತಾ, ಲಕ್ಷಾಂತರ ಜನರ ಬಾಳಿಗೆ ಬೆಳಕಾಗಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ತುಮಕೂರು ವಿಶ್ವವಿದ್ಯಾಲಯ ಸೇರಿದಂತೆ ಹಲವು ಯೋಜನೆಗಳ ಹಿಂದೆ ಡಾ.ಜಿ.ಪರಮೇಶ್ವರ್‌ ಅವರ ಶ್ರಮವಿದೆ. ದೂರದೃಷ್ಟಿಯುಳ್ಳ ಇಂತಹ ವ್ಯಕ್ತಿಗಳು ಮುಖ್ಯಮಂತ್ರಿಗಳಾದರೆ ರಾಜ್ಯ ಮತ್ತಷ್ಟು ಅಭಿವೃದ್ದಿ ಹೊಂದಲಿದೆ.ಹಾಗಾಗಿ ಪಕ್ಷದ ಹೈಕಮಾಂಡ್ ನಮ್ಮಒತ್ತಾಯಪೂರ್ವ ಮನವಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಠಾಧೀಶರು ತಿಳಿಸಿದರು.