ಮುಡಾ ಹಗರಣದ ತನಿಖೆ ತೀವ್ರ ಸ್ವರೂಪ ಪಡೆದುಕೊಂಡ ಬಳಿಕ ಮರೀಗೌಡ ಅವರು ಮುಡಾದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿದ್ದರಾಮಯ್ಯ ಆಪ್ತರಾಗಿರುವ ಕಾರಣ ಮುಡಾ ಹಗರಣದಲ್ಲಿ ಮರೀಗೌಡ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆ ನಡೆಸಲಾಯಿತು.  

ಬೆಂಗಳೂರು(ನ.15): ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ ಮತ್ತು ಮುಡಾ ಮಾಜಿ ಅಧ್ಯಕ್ಷ ಮರೀಗೌಡ ಮತ್ತು ಮಾಜಿ ತಹಶೀಲ್ದಾ‌ರ್ ಮಾಳಿಗೆ ಶಂಕ‌ರ್ ಅವರ ತೀವ್ರ ವಿಚಾರಣೆ ನಡೆಸಿದ್ದಾರೆ. ಸುಮಾರು ಎಂಟು ಗಂಟೆಗಿಂತಲೂ ಹೆಚ್ಚು ಕಾಲ ವಿಚಾರಣೆ ನಡೆಸಿದ ಇ.ಡಿ. ಅಧಿಕಾರಿಗಳು, ನಿವೇಶನ ಹಂಚಿಕೆ ಕುರಿತ ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ಹೇಳಿವೆ.

Add Asianetnews Kannada as a Preferred SourcegooglePreferred

ಮುಡಾ ಹಗರಣದ ತನಿಖೆ ತೀವ್ರ ಸ್ವರೂಪ ಪಡೆದುಕೊಂಡ ಬಳಿಕ ಮರೀಗೌಡ ಅವರು ಮುಡಾದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿದ್ದರಾಮಯ್ಯ ಆಪ್ತರಾಗಿರುವ ಕಾರಣ ಮುಡಾ ಹಗರಣದಲ್ಲಿ ಮರೀಗೌಡ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆ ನಡೆಸಲಾಯಿತು. ಈ ಹಿಂದೆಯೇ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಅಧಿಕಾರಿಗಳು ನೊಟೀಸ್ ನೀಡಿದರೂ, ಅನಾರೋಗ್ಯ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿರಲಿಲ್ಲ. ಇದೀಗ ವಿಚಾರಣೆಗೆ ಹಾಜರಾಗಿ ಇ.ಡಿ. ಅಧಿಕಾರಿಗಳು ಕೇಳಿರುವ ಮಾಹಿತಿಗಳಿಗೆ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ, ಹಗರಣದ ಅವಧಿಯಲ್ಲಿ ತಹಶೀಲ್ದಾರ್ ಆಗಿದ್ದ ಮಾಳಿಗೆ ಶಂಕರ್ ಅವರಿಂದಲೂ ಮಾಹಿತಿ ಕಲೆಹಾಕಲಾಗಿದೆ ಎಂದು ಅವು ಹೇಳಿವೆ. 

ನಾನು ನಿನ್ನೆ ಮೊನ್ನೆ ಮಂತ್ರಿಯಾದವನಲ್ಲ, ಸುಳ್ಳು ಕೇಸಲ್ಲಿ ನನ್ನನ್ನು, ನನ್ನ ಪತ್ನಿಯನ್ನು ಎಳೀತೀರಾ?: ಬಿಜೆಪಿ ವಿರುದ್ಧ ಸಿಎಂ ಗರಂ

ದಶಕಗಳಿಂದ ಸಿದ್ದು ಆಪ್ತ ಮರೀಗೌಡ: 

ಸಿದ್ದರಾಮಯ್ಯ ಜತೆ ಮರೀಗೌಡ ಆಪ್ತತೆ ಹಲವು ದಶಕಗಳಿಂದಲೂ ಇದ್ದು, 1983 ರಿಂದಲೂ ಮರೀಗೌಡ ಅವರು ಸಿದ್ದರಾಮಯ್ಯ ಜತೆ ಕಾರ್ಯ ನಿರ್ವಹಿಸುತ್ತಿದ್ದಾರೆ. 1995ರಲ್ಲಿ ಮರೀಗೌಡ ಅವರನ್ನು ಮೈಸೂರು ತಾಲ್ಲೂಕು ಪಂಚಾಯಿತಿ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. 2000ನೇ ಸಾಲಿನಲ್ಲಿ ಮೈಸೂರು ಜಿಲ್ಲಾ ಪಂಚಾಯಿತಿಯ ಉಪಾಧ್ಯಕ್ಷರನ್ನಾಗಿ ಮಾಡಲಾಗಿತ್ತು. ಇದೀಗ ಅವರಿಗೆ ಮುಡಾ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಹಗರಣ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಅವರು ಕಳೆದ ತಿಂಗಳು ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮುಡಾ ಹಗರಣದಲ್ಲಿ ಅವರ ಪಾತ್ರ ಮತ್ತು ಸಿದ್ದರಾಮಯ್ಯ ಪಾತ್ರ ಪ್ರಶ್ನಿಸಲಾಗಿದೆ. ಮುಡಾದಲ್ಲಿ ನಿವೇಶನ ಹಂಚಿಕೆ ವಿಚಾರದಲ್ಲಿ ರಾಜಕೀಯವಾಗಿ ಪ್ರಭಾವ ಬೀರುವ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಮುಡಾಹಗರಣವಿಚಾರದಲ್ಲಿ ಕೇಳಿಬಂದಿರುವ ಹೆಸರುಗಳು ಮತ್ತು ದಾಳಿ ವೇಳೆ ಪತ್ತೆಯಾದ ಮಾಹಿತಿ ಮೇರೆಗೆ ಒಬ್ಬರಾದ ಮೇಲೆ ಒಬ್ಬರಂತೆ ಕರೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಡಿ ವಿಚಾರಣೆ ಸನ್ನಿಹಿತ?

ಮರೀಗೌಡ ಆಪ್ತ ಶಿವಣ್ಣಗೆ ಅನಾರೋಗ್ಯ! 

ಬೆಂಗಳೂರು: ಮುಡಾ ಹಗರಣ ಸಂಬಂಧ 2.2. ವಿಚಾರಣೆಗೆ ಹಾಜರಾಗಿದ್ದ ಮುಡಾ ಮಾಜಿ ಅಧ್ಯಕ್ಷ ಮರೀಗೌಡ ಆಪ್ತ ಶಿವಣ್ಣ ಎಂಬುವವರು ಅನಾರೋಗ್ಯಕ್ಕೊಳಗಾದ ನಡೆಯಿತು. ಪ್ರಸಂಗ ಶಾಂತಿನಗರದಲ್ಲಿನ ಕಚೇರಿಗೆ ಮರೀಗೌಡ ಹಾಜರಾಗಿದ್ದ ವೇಳೆ ಶಿವಣ್ಣ ಎಂಬಾತನು ಸಹ ಅವರ ಜತೆ ಆಗಮಿಸಿದ್ದ. ಈ ವೇಳೆ ಆತನನ್ನು ಸಹ ಇ.ಡಿ. ಅಧಿಕಾರಿಗಳು ವಿಚಾರಣೆ ನಡೆಸಿದರು ಎಂದು ಹೇಳಲಾಗಿದೆ. ಶಿವಣ್ಣಗೆ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥಗೊಂಡ ಕಾರಣ ತಕ್ಷಣ ಇ.ಡಿ. ಅಧಿಕಾರಿಗಳು ವಿಲ್ಸನ್‌ಗಾರ್ಡನ್‌ನಲ್ಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು ಎಂದು ಹೇಳಲಾಗಿದೆ.

ಶೀಘ್ರ ಸಿದ್ದು, ಪತ್ನಿ ಇ.ಡಿ. ವಿಚಾರಣೆ: ಸ್ನೇಹಮಯಿ ಕೃಷ್ಣ 

ಮೈಸೂರು: ಮುಡಾ ಹಗರಣ ಸಂಬಂಧ ಇ.ಡಿ. ತನಿಖೆ ಕೊನೆ ಹಂತಕ್ಕೆ ಬಂದಿದೆ. ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿಗೆ ಇ.ಡಿ. ಅಧಿಕಾರಿಗಳು ನೋಟಿಸ್‌ ನೀಡಿ ವಿಚಾರಣೆ ನಡೆಸಲಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಅವರು ಮೈಸೂರಿನಲ್ಲಿ ಸುದ್ದಿಗಾರರಿಗೆ ಹೇಳಿದ್ದಾರೆ.