ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದಲ್ಲಿ ಜಾರಿ ನಿರ್ದೇಶನಾಲಯವು ₹5 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ನಕಲಿ ದಾಖಲೆಗಳ ಮೂಲಕ ₹89.63 ಕೋಟಿ ವಂಚಿಸಿದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಹಗರಣದ ಹಣದಲ್ಲಿ ಐಷಾರಾಮಿ ವಾಹನ ಖರೀದಿ ಪತ್ತೆಯಾಗಿದೆ.

ಬೆಂಗಳೂರು (ಆ.27): ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯ (ಇಡಿ) ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ನೆಕ್ಕುಂಟಿ ನಾಗರಾಜ್, ಚಂದ್ರಮೋಹನ್, ಗೋಲಪಲ್ಲಿ ಕಿಶೋರ್ ರೆಡ್ಡಿ ಮತ್ತು ಎಟಕೇರಿ ಸತ್ಯನಾರಾಯಣ ಅವರಿಗೆ ಸೇರಿದ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಟ್ಟುಗೋಲು ಹಾಕಿಕೊಂಡ ಆಸ್ತಿ ವಿವರ

ಇಡಿ ಅಧಿಕಾರಿಗಳು, 4.45 ಕೋಟಿ ರೂ. ಮೌಲ್ಯದ ಭೂಮಿ, ಫ್ಲಾಟ್‌ಗಳು ಮತ್ತು ಫಸ್ಟ್‌ ಫೈನಾನ್ಸ್ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಇದ್ದ 50 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ್ದಾರೆ. ಈ ಕ್ರಮವು ಹಗರಣದ ತನಿಖೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಹಗರಣದ ಹಿನ್ನೆಲೆ

ಕಳೆದ ವರ್ಷ ಮೇ ತಿಂಗಳಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಉದ್ಯೋಗಿ ಚಂದ್ರಶೇಖರ್ ಶಿವಮೊಗ್ಗದಲ್ಲಿ ಆತ್ಮಹ*ತ್ಯೆ ಮಾಡಿಕೊಂಡ ಬಳಿಕ ಈ ಹಗರಣ ಬೆಳಕಿಗೆ ಬಂದಿತ್ತು. ನಂತರ ರಾಜ್ಯ ಪೊಲೀಸರು ಮತ್ತು ಸಿಬಿಐ ತನಿಖೆ ಪ್ರಾರಂಭಿಸಿದವು. ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಕೂಡ ತನಿಖೆ ಕೈಗೆತ್ತಿಕೊಂಡಿತ್ತು.

ಈ ವೇಳೆ ಆರೋಪಿಗಳು, ನಕಲಿ ದಾಖಲೆಗಳನ್ನು ಸೃಷ್ಟಿಸುವ ಮೂಲಕ ನಿಗಮಕ್ಕೆ 89.63 ಕೋಟಿ ರೂ. ವಂಚಿಸಿದ್ದರು. ನಿಗಮದ ಹಣವನ್ನು ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್‌ನಲ್ಲಿ ತೆರೆದ ನಕಲಿ ಖಾತೆಗೆ ವರ್ಗಾಯಿಸಲಾಗಿತ್ತು. ನಂತರ ಈ ಹಣವನ್ನು ಹೈದರಾಬಾದ್‌ನಲ್ಲಿರುವ ಫಸ್ಟ್‌ ಫೈನಾನ್ಸ್ ಬ್ಯಾಂಕ್‌ನಲ್ಲಿ ತೆರೆಯಲಾದ 18 ನಕಲಿ ಖಾತೆಗಳಿಗೆ ವರ್ಗಾಯಿಸಿರುವುದು ತನಿಖೆಯಿಂದ ತಿಳಿದುಬಂದಿದೆ.

ಐಷಾರಾಮಿ ವಾಹನಗಳ ಖರೀದಿಗೆ ಹಣ ಬಳಕೆ

ಹಗರಣದ ಹಣದಲ್ಲಿ ಆರೋಪಿಗಳು ಲ್ಯಾಂಬೋರ್ಘಿನಿ ಕಾರು ಸೇರಿದಂತೆ ಹಲವು ಐಷಾರಾಮಿ ವಾಹನಗಳನ್ನು ಖರೀದಿಸಿರುವುದು ಇಡಿ ತನಿಖೆಯಲ್ಲಿ ಪತ್ತೆಯಾಗಿದೆ. ನಿಗಮದ ಹಣವನ್ನು ದುರುಪಯೋಗಪಡಿಸಿಕೊಂಡು ವೈಯಕ್ತಿಕ ಸಂಪತ್ತನ್ನು ಸೃಷ್ಟಿಸಿಕೊಂಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಇಡಿ, ಹಣ ಅಕ್ರಮ ವರ್ಗಾವಣೆ ಕಾಯ್ದೆ (PMLA) ಅಡಿಯಲ್ಲಿ ತನಿಖೆಯನ್ನು ಮುಂದುವರಿಸಿದೆ. ಈ ಹಗರಣದಲ್ಲಿ ಇನ್ನೂ ಹಲವು ಪ್ರಭಾವಿಗಳ ಹೆಸರು ಹೊರಬರುವ ಸಾಧ್ಯತೆ ಇದೆ.