Asianet Suvarna News Asianet Suvarna News

ಬೆಂಗಳೂರಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ಪ್ಲ್ಯಾನ್‌ ಹೀಗಿದೆ ನೋಡಿ..

ರಾಜ್ಯದಲ್ಲಿ ಕಡಿಮೆ ಮತದಾನವಾಗಿರುವ ಬೂತ್‌ಗಳಲ್ಲಿ, ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಹಾಗೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಲು ಮುಖ್ಯ ಚುನಾವಣಾಧಿಕಾರಿ (ಸಿಇಸಿ) ವಿಶೇಷ ಗಮನ ಹರಿಸಿದ್ದಾರೆ. 

election commission plans to increase voter percentage in karnataka assembly elections 2023 ash
Author
First Published Mar 29, 2023, 2:51 PM IST

ಬೆಂಗಳೂರು (ಮಾರ್ಚ್‌ 29, 2023): ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಪ್ರಚಾರ, ನಾನಾ ಘೋಷಣೆ, ಗಿಫ್ಟ್‌ ಹಂಚಿಕೆ - ಹೀಗೆ ತಯಾರಾಗುತ್ತಿರುವಂತೆಯೇ, ಚುನಾವಣಾ ಸಮಿತಿ ಕೂಡ ತನ್ನ ಸಿದ್ಧತೆ ನಡೆಸುತ್ತಿದೆ. ರಾಜ್ಯದಲ್ಲಿ ಕಡಿಮೆ ಮತದಾನವಾಗಿರುವ ಬೂತ್‌ಗಳಲ್ಲಿ, ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಹಾಗೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಲು ಮುಖ್ಯ ಚುನಾವಣಾಧಿಕಾರಿ (ಸಿಇಸಿ) ವಿಶೇಷ ಗಮನ ಹರಿಸಿದ್ದಾರೆ. 

ರಾಜ್ಯದಲ್ಲಿ 58 ಸಾವಿರಕ್ಕೂ ಹೆಚ್ಚು ಮತಗಟ್ಟೆಗಳನ್ನು ಹೊಂದಿದ್ದು, ಈ ಪೈಕಿ ನಗರ ಪ್ರದೇಶದಲ್ಲಿನ ಮತಗಟ್ಟೆಗಳ ಸಂಖ್ಯೆ 24,063 ಆಗಿದೆ. ಕಳೆದ ಕೆಲವು ವರ್ಷಗಳಿಂದ ರಾಜ್ಯದಲ್ಲಿ ಮತದಾನದ ಶೇಕಡಾವಾರು ಪ್ರಮಾಣದಲ್ಲಿ ಹೆಚ್ಚಳವಾಗಿದ್ದರೂ, ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ರಾಜ್ಯದ ಸರಾಸರಿ ಮತದಾನಕ್ಕೆ ಹೋಲಿಸಿದರೆ ಕಡಿಮೆ ಮತದಾನ ಆಗುತ್ತಿದೆ.  ಕಳೆದ 10 ವರ್ಷಗಳಿಂದ ರಾಜ್ಯದ ಮತದಾನದ ಶೇಕಡಾವಾರು ಶೇಕಡಾ 70 ಕ್ಕಿಂತ ಹೆಚ್ಚಿದ್ದರೆ, ನಗರ ಪ್ರದೇಶಗಳಲ್ಲಿ, ವಿಶೇಷವಾಗಿ ಬೆಂಗಳೂರಲ್ಲಿ, ಇದು ಶೇಕಡಾ 50 ರಷ್ಟು ಮಾತ್ರ ಇದೆ. 

ಇದನ್ನು ಓದಿ: ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ, 13ಕ್ಕೆ ಮತ ಎಣಿಕೆ: ಚುನಾವಣಾ ಆಯೋಗ ಘೋಷಣೆ

ಇನ್ನು, ಬೆಂಗಳೂರು ನಗರದಲ್ಲಿ ಕುಸಿಯುತ್ತಿರುವ ಮತದಾನ ಪ್ರಮಾಣದ ಬಗ್ಗೆ ಕಳವಳ ವ್ಯಕ್ತಪಡಿಸಿದ ಚುನಾವಣಾ ಆಯೋಗ, ಬೆಂಗಳೂರು ನಗರದಲ್ಲಿ ಯುವಮತದಾರರ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಐಐಎಸ್‌ಸಿ, ಐಐಟಿ ಹಾಗೂ ಸ್ಟಾರ್ಟಪ್‌ಗಳ ಸಹಯೋಗದೊಂದಿಗೆ ಎಲೆಕ್ಥಾನ್ ಹಾಗೂ ಇನ್ನಿತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಇನ್ನೊಂದೆಡೆ, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಹಾಗೂ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡುವ ಅವಕಾಶ ನೀಡಲಾಗಿದೆ. ಈ ಬಗ್ಗೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು​ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈ ಮೂಲಕ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ 80 ವರ್ಷಕ್ಕೂ ಮೇಲ್ಪಟ್ಟ ಮತ್ತು ದಿವ್ಯಾಂಗ ಮತದಾರರು ಮನೆಗಳಿಂದಲೂ ಮತದಾನ ಮಾಡುವ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Karnataka Assembly Election 2023: ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ, ಜಿಲ್ಲಾವಾರು ಕ್ಷೇತ್ರ ಮಾಹಿತಿ

ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮೊದಲ ಬಾರಿಗೆ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯುಕ್ತರು ಹೇಳಿದ್ದಾರೆ. 

ಮೊದಲ ಬಾರಿಗೆ ಕರ್ನಾಟಕದಲ್ಲಿ ಮನೆಯಿಂದಲೇ ಮತ ಹಾಕಲು ಅವಕಾಶ ನೀಡಲಾಗಿದ್ದು, ಆದರೆ ಮೊದಲೇ ಈ ಬಗ್ಗೆ ನೋಂದಾಯಿಸಿಕೊಳ್ಳಬೇಕಿದೆ. ಒಂದು ವೋಟ್ ಸಂಗ್ರಹಕ್ಕೆ 3 - 4 ಮಂದಿ ಹೋಗ್ತಾರೆ, ಪ್ರಕ್ರಿಯೆಯ ಪಾರದರ್ಶಕತೆ ಹಾಗೂ ಮತದಾನದ ಗೌಪ್ಯತೆಯ ಬಗ್ಗೆ ಎಲ್ಲಾ ಕ್ರಮಗಳನ್ನು ವಹಿಸಲಾಗುವುದು ಎಂದೂ ಸಿಇಸಿ ರಾಜೀವ್‌ ಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಚುನಾವಣಾ ಘೋಷಣೆ ಹಿನ್ನೆಲೆ: ಸರ್ಕಾರಿ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ


ಕರ್ನಾಟಕ ಚುನಾವಣಾ ದಿನಾಂಕ
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ಇದನ್ನೂ ಓದಿ: ರಾಜ್ಯ ವಿಧಾನಸಭೆ ಚುನಾವಣೆಗೆ ಇಂದೇ ಡೇಟ್‌ ಫಿಕ್ಸ್‌: ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ

Follow Us:
Download App:
  • android
  • ios