Asianet Suvarna News Asianet Suvarna News

ರೇಷನ್‌ ಕಾರ್ಡ್‌ ಹೊಂದಿರುವ ಎಲ್ಲ ಮನೆಗೂ ವಿದ್ಯುತ್‌ ಸಂಪರ್ಕ

  •  ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಪ್ರತಿ ಮನೆಗೂ ವಿದ್ಯುತ್‌ ಸಂಪರ್ಕ 
  • ವಿದ್ಯುತ್‌ ಸರಬರಾಜು ಕಂಪನಿಗಳಿಗೆ ಆಗುತ್ತಿರುವ ನಷ್ಟತಡೆಯಲು ಸೂಕ್ತ ಕಾರ್ಯ ಯೋಜನೆ 
  •  ಇಂಧನ ಸಚಿವ ಸುನೀಲ್‌ ಕುಮಾರ್‌ ಅಧಿಕಾರಿಗಳಿಗೆ ಸೂಚನೆ
electricity connection every ration card holder family says minister sunil kumar  snr
Author
Bengaluru, First Published Aug 19, 2021, 9:02 AM IST

ಬೆಂಗಳೂರು (ಆ.19):  ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಪ್ರತಿ ಮನೆಗೂ ವಿದ್ಯುತ್‌ ಸಂಪರ್ಕ ನೀಡುವುದು ಸೇರಿದಂತೆ ಬಜೆಟ್‌ನಲ್ಲಿ ಘೋಷಿಸಿರುವ ಎಲ್ಲಾ ಕಾರ್ಯಕ್ರಮ ಅನುಷ್ಠಾನವಾಗಬೇಕು. ಜತೆಗೆ, ವಿದ್ಯುತ್‌ ಸರಬರಾಜು ಕಂಪನಿಗಳಿಗೆ ಆಗುತ್ತಿರುವ ನಷ್ಟತಡೆಯಲು ಸೂಕ್ತ ಕಾರ್ಯ ಯೋಜನೆ ರೂಪಿಸಬೇಕು ಎಂದು ಇಂಧನ ಸಚಿವ ಸುನೀಲ್‌ ಕುಮಾರ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕೆಪಿಟಿಸಿಎಲ್ ಕಚೇರಿಯಲ್ಲಿ ಬುಧವಾರ ನಡೆದ ಇಂಧನ ಇಲಾಖೆ, ವಿದ್ಯುತ್‌ ಸರಬರಾಜು ಕಂಪನಿಗಳು ಮತ್ತು ಅದರ ಅಂಗ ಸಂಸ್ಥೆಗಳ ಕಾರ್ಯ ನಿರ್ವಹಣೆಯ ಕುರಿತು ಸಭೆ ನಡೆಸಿ ಅವರು ಮಾತನಾಡಿದರು.

ಬಜೆಟ್‌ನಲ್ಲಿ ಘೋಷಿಸಿರುವ ಕಾರ್ಯಕ್ರಮಗಳು ಮತ್ತು ಕೇಂದ್ರ ಸರ್ಕಾರದ ಸಹಯೋಗದ ಯೋಜನೆಗಳನ್ನು ಕಾಲ ಮಿತಿಯೊಳಗೆ ಪೂರ್ಣಗೊಳಿಸಬೇಕು. ಈ ವಿಚಾರದಲ್ಲಿ ನಾನು ಯಾವುದೇ ಕಾರಣಕ್ಕೆ ರಾಜಿಯಾಗುವುದಿಲ್ಲ ಎಂದು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸಚಿವ ಸುನೀಲ್ ಕುಮಾರ್‌ ಮತ್ತೊಂದು ಜನ ಮೆಚ್ಚುವ ಕೆಲಸ

ವಿದ್ಯುತ್‌ ಸರಬರಾಜು ಕಂಪನಿಗಳು ನಷ್ಟಅನುಭವಿಸುತ್ತಿವೆ. ಅನಧಿಕೃತ ಸಂಪರ್ಕ, ವಿದ್ಯುತ್‌ ಸೋರಿಕೆ, ವಿದ್ಯುತ್‌ ಸಂಪರ್ಕ ನೀಡುವಲ್ಲಿನ ವಿಳಂಬ, ಮೀಟರ್‌ಗಳ ಅಳವಡಿಕೆಯಲ್ಲಿ ಆಗುವ ವಿಳಂಬ ಸೇರಿದಂತೆ ಹಲವು ಕಾರಣಗಳಿಂದ ನಷ್ಟಉಂಟಾಗುತ್ತಿದೆ. ಈ ನಷ್ಟತಡೆಯಲು ಸೂಕ್ತ ಕಾರ್ಯ ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು. ನಷ್ಟತಡೆಯಲು ಎಲ್ಲಾ ವಿಧವಾದ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜನರಿಗೆ ಸಮಸ್ಯೆಯಾಗದಂತೆ ತ್ವರಿತಗತಿಯಲ್ಲಿ ಸೇವೆ ನೀಡಬೇಕು. ಟ್ರಾನ್ಸ್‌ಫಾರ್ಮರ್‌ಗಳ ದುರಸ್ತಿ, ಬದಲಾವಣೆ ಕುರಿತಂತೆ ಬಹಳಷ್ಟುದೂರುಗಳು ಬರುತ್ತಿವೆ. ಅವುಗಳ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಕೃಷಿ ಮತ್ತು ಕೈಗಾರಿಕೆಗಳಿಗೆ ಮತ್ತು ಎಲ್ಲಾ ವರ್ಗದ ಗ್ರಾಹಕರಿಗೆ ಗುಣಮಟ್ಟದ ವಿದ್ಯುತ್‌ ಪೂರೈಕೆ ಹಾಗೂ ಸಮರ್ಪಕ ವಿದ್ಯುತ್‌ ಸರಬರಾಜು ನಮ್ಮ ಆದ್ಯತೆಯಾಗಬೇಕು ಎಂದು ಸಲಹೆ ನೀಡಿದರು.

ಕನ್ನಡ ಸಂಸ್ಕೃತಿ ಇಲಾಖೆಗೆ ಪವರ್, ಪವರ್ ಇಲಾಖೆಗೆ ಸಂಸ್ಕೃತಿ ಬರಬೇಕು: ಸುನೀಲ್ ಕುಮಾರ್

ಫಾಸ್ಟ್ರಾಕ್‌ ಸೆಲ್‌ ಆರಂಭಿಸಿ:  ಗ್ರಾಹಕ ಸಂಬಂಧಿ ಸಮಸ್ಯೆಗಳ ಪರಿಹಾರ, ಹೊಸ ವಿದ್ಯುತ್‌ ಸಂಪರ್ಕ ನೀಡಿಕೆ ಸೇರಿದಂತೆ ವಿವಿಧ ಸೇವೆಗಳನ್ನು ಒಂದೇ ಕಡೆ 24 ಗಂಟೆಯೊಳಗೆ ಒದಗಿಸುವ ಫಾಸ್ಟ್‌ಟ್ರ್ಯಾಕ್‌ ಘಟಕ ಆರಂಭಿಸಬೇಕು. ವೇಗವಾಗಿ ಸೇವೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ವಿದ್ಯುತ್‌ ರೀಚಾರ್ಜ್ ಕೇಂದ್ರ ಸ್ಥಾಪನೆ ಮಾಡಿ:  ವಿದ್ಯುತ್‌ ಚಾಲಿತ ವಾಹನಗಳು ಹೆಚ್ಚಾಗುತ್ತಿವೆ. ಹೀಗಾಗಿ ವಿದ್ಯುತ್‌ ವಾಹನ ಚಾರ್ಜಿಂಗ್‌ ಕೇಂದ್ರಗಳನ್ನು ಆರಂಭಿಸಲು ಆದ್ಯತೆ ನೀಡಬೇಕು. ಈಗಾಗಲೇ ಗುರುತಿಸಿರುವ ಸ್ಥಳಗಳಲ್ಲಿ ವೇಗವಾಗಿ ವಿದ್ಯುತ್‌ ರೀಚಾರ್ಜಿಂಗ್‌ ಮಾಡುವ ಘಟಕ ಸ್ಥಪಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಇಂಧನ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಕುಮಾರನಾಯಕ್‌, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಮಂಜುಳಾ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್‌ ಸೇರಿದಂತೆ ಹಲವರು ಹಾಜರಿದ್ದರು.

Follow Us:
Download App:
  • android
  • ios