ಖಾಸಗಿ ಅನುದಾನಿತ ಶಾಲೆಗಳಲ್ಲಿ ಕಡಿಮೆ ಫಲಿತಾಂಶಕ್ಕೆ ಶಿಕ್ಷಕರನ್ನು ಹೊಣೆಗಾರರನ್ನಾಗಿ ಮಾಡುವ ಆದೇಶವನ್ನು ಪರಿಶೀಲಿಸುವುದಾಗಿ ಶಿಕ್ಷಣ ಸಚಿವರು ಭರವಸೆ ನೀಡಿದ್ದಾರೆ. ಫಲಿತಾಂಶದ ಹೊಣೆಗಾರಿಕೆ ಶಿಕ್ಷಕರಿಗೆ ಮಾತ್ರ ಸೀಮಿತವಲ್ಲ ಎಂಬ ಪ್ರಶ್ನೆಗಳೂ ಎದ್ದಿವೆ.

ವಿಧಾನ ಪರಿಷತ್‌: ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ಶೇ. 60ಕ್ಕಿಂತ ಕಡಿಮೆ ಫಲಿತಾಂಶ ಬಂದಿದ್ದರೆ ವಿಷಯ ಶಿಕ್ಷಕರ ವಾರ್ಷಿಕ ವೇತನ, ಬಡ್ತಿ ತಡೆಹಿಡಿಯುವ, ಶಿಕ್ಷಕರ ವೇತನ ಅನುದಾನ ತಡೆಹಿಡಿಯುವ ಕ್ರಮ ಜಾರಿ ಮಾಡುವುದಿಲ್ಲ. ಈ ಸಂಬಂಧ 2019ರಲ್ಲಿ ಹೊರಡಿಸಿದ ಆದೇಶ ವಾಪಸ್‌ ಪಡೆಯುವ ಬಗ್ಗೆ ಪರಿಶೀಲಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಜೆಪಿಯ ಎಸ್‌.ವಿ. ಸಂಕನೂರು ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಇದಕ್ಕೂ ಮುನ್ನ ಮಾತನಾಡಿದ ಎಸ್‌.ವಿ. ಸಂಕನೂರು, ಫಲಿತಾಂಶ ಕಡಿಮೆಯಾಗಲು ಕೇವಲ ಶಿಕ್ಷಕರು ಮಾತ್ರ ಕಾರಣರಾಗುತ್ತಾರೆಯೇ? ಪೋಷಕರು, ವಿದ್ಯಾರ್ಥಿಗಳಿಗೆ ಹೊಣೆ ಇಲ್ಲವೇ? ಪ್ರಸ್ತುತ ಒಂದರಿಂದ ಒಂಬತ್ತನೇ ತರಗತಿವರೆಗೆ ಯಾವುದೇ ಮಕ್ಕಳನ್ನು ಅನುತ್ತೀರ್ಣ ಮಾಡದಂತೆ ನಿಯಮ ಇದೆ. ಕಡಿಮೆ ಅಂಕ ಇದ್ದರೂ ಪಾಸ್‌ ಮಾಡಬೇಕಾಗಿದೆ. ಹೀಗಿರುವಾಗಿ ಏಕಾಏಕಿ 10ನೇ ತರಗತಿಯಲ್ಲಿ ಫಲಿತಾಂಶ ಕಡಿಮೆ ಬಂದರೆ ಶಿಕ್ಷಕರ ವಾರ್ಷಿಕ ವೇತನ ಬಡ್ತಿ ಕಡಿತ ಸೇರಿದಂತೆ ವಿವಿಧ ಕ್ರಮ ಕೈಗೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಇದಕ್ಕೆ ಪೂರಕವಾಗಿ ಸಭಾಪತಿ ಬಸವರಾಜ ಹೊರಟ್ಟಿ ಅವರು, ಸಮಸ್ಯೆ ಬಗ್ಗೆ ಚರ್ಚಿಸಲು ಸದಸ್ಯರ ಸಭೆ ಕರೆಯುವಂತೆ ಸಲಹೆ ನೀಡಿದರು. ಅದಕ್ಕೆ ಒಪ್ಪಿದ ಸಚಿವರು ಆ. 13 ರಂದು ಸಭೆ ಕರೆದು ಚರ್ಚಿಸುವುದಾಗಿ ತಿಳಿಸಿದರು.

ಸಚಿವರು, ಶೇ. 60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ವಿಷಯ ಶಿಕ್ಷಕರ ವಾರ್ಷಿಕ ವೇತನ ಕಡಿತ ಸೇರಿದಂತೆ ವಿವಿಧ ಕ್ರಮಕೈಗೊಳ್ಳಲು 2019ರಲ್ಲಿಯೇ ಆದೇಶ ಹೊರಡಿಸಲಾಗಿತ್ತು. ಸರ್ಕಾರ ಹೊಸದಾಗಿ ಯಾವುದೇ ಆದೇಶ ಜಾರಿ ಮಾಡಿಲ್ಲ. ಆದರೂ ಯಾವುದೇ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳದಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಜೊತೆಗೆ ಹೊರಡಿಸಿರುವ ಆದೇಶ ವಾಪಸ್‌ ಪಡೆಯುವ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದರು.