ಮೋಟಾರು ವಾಹನ ತೆರಿಗೆ ವಿನಾಯಿತಿಗೆ ಸಂಬಂಧಿಸಿದಂತೆ ಸಾರಿಗೆ ಇಲಾಖೆಯಿಂದಲೂ ಈಗಾಗಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಿವೆ. ಅದರ ಜತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೂಡ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದು, ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು(ಡಿ.26):  ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಆರ್ಥಿಕ ಹೊರೆಯನ್ನು ತಗ್ಗಿಸಲು ಮುಂದಾಗಿರುವ ರಾಜ್ಯ ಸರ್ಕಾರ, ನಾಲ್ಕೂ ನಿಗಮಗಳಿಗೆ ಪ್ರಸಕ್ತ ಸಾಲಿನ ಮೋಟಾರು ವಾಹನ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಕ್ತಿ ಯೋಜನೆ ಜಾರಿ ನಂತರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಆದಾಯ ಹೆಚ್ಚಾಗಿದೆ. ಅದರಿಂದ ನಿಗಮಗಳ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದೆ. ಆದರೂ, ನಾಲ್ಕೂ ನಿಗಮಗಳ ಮೇಲೆ 4 ಸಾವಿರ ಕೋಟಿ ರು.ಗೂ ಹೆಚ್ಚಿನ ಹೊಣೆಗಾರಿಕೆಯಿದ್ದು, ಅದನ್ನು ತೀರಿಸಲು ನಿಗಮಗಳು ಸಾಕಷ್ಟು ಶ್ರಮಪಡಬೇಕಿದೆ. ಅದರ ಜತೆಗೆ ಶಕ್ತಿ ಯೋಜನೆಗಾಗಿ ನಿಗಮಗಳಿಂದ ವ್ಯಯಿಸಲಾದ ಮೊತ್ತದ ಮರುಪಾವತಿ ವಿಳಂಬವಾಗುತ್ತಿರುವ ಕಾರಣ, ನಿಗಮಗಳು ಕೊಂಚಮಟ್ಟಿಗೆ ಆರ್ಥಿಕ ಸಮಸ್ಯೆ ಎದುರಿಸುತ್ತಿವೆ. ಈ ಎಲ್ಲ ಕಾರಣಗಳಿಂದಾಗಿ ನಿಗಮಗಳಿಗೆ ಆರ್ಥಿಕ ಶಕ್ತಿ ತುಂಬಲು ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡುವ ಬಗ್ಗೆ ಚರ್ಚೆ ನಡೆಸುತ್ತಿದೆ.

ಹೆಸರಿಗಷ್ಟೇ ರಾಜಹಂಸ ಒಳಗಡೆ ಕುಳಿತರೆ ಡಗಡಗ ಅಂತಾ ಪರಮಹಿಂಸೆ ಕೊಡುತ್ತೆ ಬಸ್!

ಮೋಟಾರು ವಾಹನ ತೆರಿಗೆ ವಿನಾಯಿತಿಗೆ ಸಂಬಂಧಿಸಿದಂತೆ ಸಾರಿಗೆ ಇಲಾಖೆಯಿಂದಲೂ ಈಗಾಗಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಿವೆ. ಅದರ ಜತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೂಡ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದು, ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ.

ಎಷ್ಟು ಪಾವತಿಸಬೇಕು?:

ಸದ್ಯ ಕೆಎಸ್ಸಾರ್ಟಿಸಿ 243.52 ಕೋಟಿ ರು., ಬಿಎಂಟಿಸಿ 119.88 ಕೋಟಿ ರು., ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ 103.91 ಕೋಟಿ ರು ಹಾಗೂ ಕೆಕೆಆರ್‌ಟಿಸಿ 114.16 ಕೋಟಿ ರು. ಸೇರಿ ಒಟ್ಟು 541.87 ಕೋಟಿ ರು. ತೆರಿಗೆ ಪಾವತಿಸಬೇಕಿದೆ ಒಂದು ವೇಳೆ ಸರ್ಕಾರ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿದರೆ, ಸಾರಿಗೆ ನಿಗಮಗಳಿಗೆ ಅಷ್ಟು ಮೊತ್ತ ಉಳಿತಾಯವಾಗಲಿದೆ.