ದತ್ತಪೀಠ: ಮುಂದಿನ ಕ್ರಮ ಚರ್ಚೆಗೆ ಉಪಸಮಿತಿ ರಚನೆ
* ಸಚಿವ ಮಾಧುಸ್ವಾಮಿ ಅಧ್ಯಕ್ಷತೆಯ ಸಮಿತಿಗೆ ಸಚಿವ ಅಶೋಕ್, ಶಶಿಕಲಾ ಜೊಲ್ಲೆ, ಸುನೀಲ್ ಕುಮಾರ್ ಸದಸ್ಯರು
* ಮುಂದಿನ ಕ್ರಮ ಚರ್ಚಿಸಿ ಸರ್ಕಾರಕ್ಕೆ ಸಮಿತಿ ವರದಿ
* ದತ್ತಪೀಠ ಪೂಜೆಗೆ ಮೌಲ್ವಿ ನೇಮಕ ರದ್ದುಪಡಿಸಿದ್ದ ಹೈಕೋರ್ಟ್
ಬೆಂಗಳೂರು(ಅ.06): ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದ ಬಾಬಾ ಬುಡನ್ಗಿರಿ ಗುರು ದತ್ತಾತ್ರೇಯ ಪೀಠದ ಪೂಜೆಗೆ ಮೌಲ್ವಿ ಅವರ ನೇಮಕ ಆದೇಶವನ್ನು ಹೈಕೋರ್ಟ್ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬಹುದಾದ ಮುಂದಿನ ನಿರ್ಣಯಗಳ ಬಗ್ಗೆ ಚರ್ಚಿಸಲು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ(JC Madhuswamy) ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ರಚನೆ ಮಾಡಲು ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ.
ವಿಧಾನಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಕಂದಾಯ ಸಚಿವ ಆರ್.ಅಶೋಕ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಮತ್ತು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸಮಿತಿಯ ಸದಸ್ಯರಾಗಿರಲಿದ್ದಾರೆ.
ದತ್ತಪೀಠದಲ್ಲಿ ಏನಾಗ್ತಿದೆ? ಉಪಚುನಾವಣೆಗೂ ಮುನ್ನ ಬಂಡಾಯದ ಬಿಸಿ
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಾಧುಸ್ವಾಮಿ, ದತ್ತಪೀಠದ ಪೂಜೆಗೆ ಮೌಲ್ವಿ ನೇಮಕ ಆದೇಶವನ್ನು ನ್ಯಾಯಾಲಯವು ರದ್ದುಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಂದಿನ ನಡೆಯ ಬಗ್ಗೆ ಚರ್ಚಿಸುವ ಸಂಬಂಧ ನನ್ನ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ರಚನೆ ಮಾಡಲು ನಿರ್ಧರಿಸಲಾಗಿದೆ. ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಕೆ ಮಾಡುವುದು, ಮುಂದಿನ ರೂಪುರೇಷೆಗಳೇನು? ನ್ಯಾಯಾಲಯದ ಆದೇಶ ಉಲ್ಲಂಘನೆಯಾಗದಂತೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಸೇರಿದಂತೆ ಇತರೆ ಅಂಶಗಳ ಕುರಿತು ಸಮಿತಿಯು ಸಮಾಲೋಚನೆ ನಡೆಸಲಿದೆ. ಮುಂದೆ ಕೈಗೊಳ್ಳಬಹುದಾದ ಪ್ರಕ್ರಿಯೆಗಳ ಕುರಿತು ಚರ್ಚಿಸಿ ವರದಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.
ಕರ್ನಾಟಕ ಧಾರ್ಮಿಕ ಕಟ್ಟಡಗಳ ಸಂರಕ್ಷಣೆ ವಿಧೇಯಕ ಇನ್ನೂ ಕಾಯ್ದೆಯಾಗಿಲ್ಲ. ಸಭಾಪತಿ ಬಸವರಾಜ ಹೊರಟ್ಟಿಅವರು ಸಹಿ ಹಾಕಬೇಕಿದೆ. ಅವರ ಸಹಿ ಬಳಿಕ ರಾಜ್ಯಪಾಲರಿಗೆ ವಿಧೇಯಕ ಕಳುಹಿಸಲಾಗುವುದು. ರಾಜ್ಯಪಾಲರ ಒಪ್ಪಿಗೆ ಬಳಿಕ ಕಾಯ್ದೆಯಾಗಲಿದೆ. ನಂತರ ಸುಪ್ರೀಂಕೋರ್ಟ್ಗೆ ಕಾಯ್ದೆ ಕುರಿತು ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.