ಸರ್ಕಾರ ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುತ್ತಿದೆ. ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್‌ಪಾಟ್‌ ಇಡುತ್ತಿದ್ದಾರೆ: ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ 

ಬೆಂಗಳೂರು(ಜು.23): ಆಲ್ಕೋಹಾಲಿನ ಬೆಲೆ ಹೆಚ್ಚಿಸಿದ ಬಳಿಕ ರಾಜ್ಯ ಕಾಂಗ್ರೆಸ್‌ ಸರ್ಕಾರ ಹಾಲಿನ ಬೆಲೆಯನ್ನೂ ಲೀಟರ್‌ಗೆ 3 ರು. ಏರಿಕೆ ಮಾಡಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಸರ್ಕಾರ ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುತ್ತಿದೆ. ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್‌ಪಾಟ್‌ ಇಡುತ್ತಿದ್ದಾರೆ. ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್‌ ಬಾಯಿ ಬಾಯಿ ಬಡಿದುಕೊಂಡಿತ್ತು. ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್‌ ನೀಡುತ್ತಿದೆ. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ ಕ್ಷುದ್ರ ವಿತ್ತನೀತಿಗೆ ಧಿಕ್ಕಾರ ಎಂದು ಕಿಡಿಕಾರಿದ್ದಾರೆ.

Loksabha election 2024: ಎನ್‌ಡಿಎ ಜತೆ ಕೈಜೋಡಿಸಲು ಎಚ್‌ಡಿಕೆಗೆ ಸಂಪೂರ್ಣ ಅಧಿಕಾರ

ಆರಂಭದಲ್ಲಿಯೇ ವಿದ್ಯುತ್‌ ಶಾಕ್‌ ಕೊಟ್ಟಿದ್ದ ಸರ್ಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಸಲು ಕೈಲಾಗದ ಈ ಸರ್ಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಗೆ ಗ್ಯಾರಂಟಿ, ಬೆಲೆ ಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕು ಹಾಲಾಹಲವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.