ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಒಪ್ಪಿಗೆ ನೀಡುವಂತೆ ಸಭೆಯಲ್ಲಿ ತಿಳಿಸಲಾಗಿದೆ. ತಮಿಳುನಾಡು ಎಲ್ಲದಕ್ಕೂ ತಕರಾರು ತೆಗೆಯುತ್ತಿದೆ. ನಮ್ಮ ಹಣದಲ್ಲಿ ನಾವು ಅಣೆಕಟ್ಟು ನಿರ್ಮಾಣ ಮಾಡುತ್ತೇವೆ. ಸ್ವಾಮಿನಾಥನ್‌ ಅವರೇ ವರದಿ ನೀಡಿದ್ದು, ಮೂರು ಬಾರಿ ಬೆಳೆ ಬರಲಿದೆ ಎಂದು ಹೇಳಿದರೂ ಕ್ಯಾತೆ ತೆಗೆಯುತ್ತಿದೆ ಎಂದು ದೂರಿದ ಜಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ 

ಬೆಂಗಳೂರು(ಜ.13):  ಮೇಕೆದಾಟು ಯೋಜನೆ ವಿಚಾರದಲ್ಲಿ ಪ್ರತಿಯೊಂದಕ್ಕೂ ನೆರೆ ರಾಜ್ಯ ತಮಿಳುನಾಡು ಕ್ಯಾತೆ ತೆಗೆಯುತ್ತಿದೆ ಎಂದು ಜಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಆರೋಪಿಸಿದ್ದಾರೆ.

Add Asianetnews Kannada as a Preferred SourcegooglePreferred

ಶುಕ್ರವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವಾಲಯದ ಸ್ಥಾಯಿ ಸಮಿತಿಯ ಸಭೆಯ ಬಳಿಕ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಒಪ್ಪಿಗೆ ನೀಡುವಂತೆ ಸಭೆಯಲ್ಲಿ ತಿಳಿಸಲಾಗಿದೆ. ತಮಿಳುನಾಡು ಎಲ್ಲದಕ್ಕೂ ತಕರಾರು ತೆಗೆಯುತ್ತಿದೆ. ನಮ್ಮ ಹಣದಲ್ಲಿ ನಾವು ಅಣೆಕಟ್ಟು ನಿರ್ಮಾಣ ಮಾಡುತ್ತೇವೆ. ಸ್ವಾಮಿನಾಥನ್‌ ಅವರೇ ವರದಿ ನೀಡಿದ್ದು, ಮೂರು ಬಾರಿ ಬೆಳೆ ಬರಲಿದೆ ಎಂದು ಹೇಳಿದರೂ ಕ್ಯಾತೆ ತೆಗೆಯುತ್ತಿದೆ ಎಂದು ದೂರಿದರು.

ಮೇಕೆದಾಟು ಯೋಜನೆ: ಮರ ಎಣಿಕೆ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ಕೊಡದ ಅರಣ್ಯ ಇಲಾಖೆ

ವಿವಿಧ ನೀರಾವರಿ ವಿಚಾರಗಳ ಕುರಿತು ಸಮಗ್ರವಾಗಿ ಚರ್ಚೆ ನಡೆಸಲಾಗಿದೆ. ಬೆಳೆ ಮತ್ತು ಕುಡಿಯುವ ನೀರಿನ ಸಮಸ್ಯೆ ಚರ್ಚೆಯಾಗಿದೆ. ಹೊಗೇನಕಲ್‌ನಿಂದ ಎಲ್ಲಾ ಕಡೆ ನೀರು ನೀಡಲಾಗಿದೆ. ಆದರೂ ನಮ್ಮ ಕುಡಿಯುವ ನೀರಿಗೆ ಅಡ್ಡಿ ಮಾಡಲಾಗುತ್ತಿದೆ. ಅಲ್ಲದೇ, ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆಯೂ ತಿಳಿಸಲಾಗಿದೆ. ರಾಜ್ಯದ ಬಳಿ ಹಣ ಇಲ್ಲ ಎಂದೂ ತಿಳಿಸಲಾಗಿದೆ. ರಾಜ್ಯಕ್ಕೆ ನೀರಾವರಿ ಯೋಜನೆಗಳಿಂದ ಅನ್ಯಾಯವಾಗುತ್ತಿರುವ ಬಗ್ಗೆ ಗಮನಕ್ಕೆ ತಂದು ಸರಿಪಡಿಸುವಂತೆ ತಿಳಿಸಲಾಗಿದೆ ಎಂದರು.

ಕಾವೇರಿ ಕೊಳ್ಳದ ಭಾಗದಲ್ಲಿ ಏತ ನೀರಾವರಿ ಮೂಲಕ ನೀರು ಬಳಸಿಕೊಳ್ಳುವ ವಿಚಾರವಾಗಿ ಚರ್ಚಿಸಲಾಗಿದೆ. ಸಂಸದ ಡಿ.ಕೆ.ಸುರೇಶ್‌ ಅವರು ಸಹ ಕಳೆದ ಬಾರಿ ನಡೆದ ಸಭೆಯಲ್ಲಿ ನೀರಾವರಿ ಬಗ್ಗೆ ಮಾತನಾಡಿದ್ದಾರೆ. ಅವರ ಬಗ್ಗೆಯೂ ನನಗೆ ಗೌರವ ಇದೆ. ಸದ್ಯಕ್ಕೆ ಲೋಕಸಭೆ ಚುನಾವಣೆಯಲ್ಲಿ ತೊಡಗಿಸಿಕೊಂಡಿರಬೇಕು. ನಾವಂತೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಹೀಗಾಗಿ ಸಭೆಗೆ ಬಂದಿದ್ದೇವೆ. ನೀರಿನ ವಿಚಾರದಲ್ಲಿ ನಮ್ಮೆಲ್ಲರ ಅಭಿಪ್ರಾಯ ಒಂದೇ ಆಗಿದೆ ಎಂದು ಹೇಳಿದರು.