ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬೀದಿ ನಾಯಿ ಹಾವಳಿ ನಿಯಂತ್ರಿಸಲು, ನಗರದ ಹೊರವಲಯದಲ್ಲಿ ಶೆಲ್ಟರ್‌ ನಿರ್ಮಿಸಲು ಸರ್ಕಾರಿ ಭೂಮಿ ಗುರುತಿಸಲಾಗುತ್ತಿದೆ. ಜೊತೆಗೆ, ಸುಮ್ಮನಹಳ್ಳಿಯ ಪ್ರಾಣಿ ಚಿತಾಗಾರ ದುರಸ್ತಿ ಮತ್ತು ಸಂತಾನಹರಣ ಕಾರ್ಯಕ್ರಮ ಬಗ್ಗೆ ಗಮನಿಸಲಾಗುವುದು ಬೃಹತ್ ಬೆಂಗಳೂರು ಪ್ರಾಧಿಕಾರ ತಿಳಿಸಿದೆ.

ಬೆಂಗಳೂರು (ನ.8): ರಾಜಧಾನಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಹೊರ ವಲಯದಲ್ಲಿ ಶೆಲ್ಟರ್‌ ನಿರ್ಮಾಣಕ್ಕೆ ಸರ್ಕಾರಿ ಭೂಮಿ ಗುರುತಿಸಲಾಗುತ್ತಿದ್ದು, ಖಾಸಗಿ ವ್ಯಕ್ತಿಗಳು ಜಮೀನು ಕೊಟ್ಟರೆ ಬಳಕೆ ಮಾಡಿಕೊಳ್ಳಲಾಗುವುದು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್‌ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಸಾಕಷ್ಟು ಕ್ರಮ

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಸುಪ್ರೀಂ ಕೋರ್ಟ್‌, ಪ್ರಾಣಿ ಕಲ್ಯಾಣ ಮಂಡಳಿಯ ಆದೇಶಗಳನ್ನು ಪಾಲನೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ನಗರದ ಹೊರ ವಲಯದಲ್ಲಿ ಶೆಲ್ಟರ್‌ ನಿರ್ಮಾಣಕ್ಕೆ ಅಗತ್ಯವಿರುವ ಸರ್ಕಾರಿ ಭೂಮಿ ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಸುಮ್ಮನಹಳ್ಳಿಯ ಬಳಿ ಇರುವ ಪ್ರಾಣಿ ಚಿತಾಗಾರ ದುರಸ್ತಿ

ಸುಮ್ಮನಹಳ್ಳಿಯ ಬಳಿ ಇರುವ ಪ್ರಾಣಿ ಚಿತಾಗಾರ ದುರಸ್ತಿ ಕಾರ್ಯ ನಡೆಯುತ್ತಿದ್ದು, ಒಂದೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಜತೆಗೆ, ನಗರದ ಎಲ್ಲ ಪಾಲಿಕೆ ವ್ಯಾಪ್ತಿಯಲ್ಲಿ ತಲಾ 1 ಎಕರೆ ಜಾಗ ಗುರುತಿಸಲು ಸೂಚಿಸಲಾಗಿದೆ. ಈ ಜಾಗದಲ್ಲಿ ಬೀದಿ ನಾಯಿ, ದನ, ಕರುಗಳು ಸೇರಿದಂತೆ ಪಶುಪಾಲನೆ ವಿಭಾಗಕ್ಕೆ ಅಗತ್ಯವಿರುವ ಚಟುವಟಿಕೆ ನಡೆಸಲು ಕ್ರಮ ವಹಿಸಲಾಗುವುದು. ಬೀದಿ ನಾಯಿಗಳ ಸಂತಾನಹರಣ ಸೇರಿದಂತೆ ಮೊದಲಾದ ಕಾರ್ಯಗಳ ಬಗ್ಗೆ ನಿಗಾ ವಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.