ನಮಗೆ ಇದೇನು ಸವಾಲು ಅನಿಸಲಿಲ್ಲ. ಗ್ಯಾರಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇದೆ. ಹೀಗಾಗಿ ಅವುಗಳ ಜಾರಿ ಕಠಿಣ ಅನಿಸಲಿಲ್ಲ. ಮಾತು ಕೊಟ್ಟಂತೆ ಗ್ಯಾರಂಟಿಗಳ ಜಾರಿ ಮಾಡುತ್ತಿದ್ದೇವೆ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ 

ಮೈಸೂರು(ಆ.30): ಖುದ್ದು ಪ್ರಧಾನಿ ಮೋದಿ ಕೂಡ ಗ್ಯಾರಂಟಿ ಯೋಜನೆಗಳ ಕುರಿತು ಆರೋಪ ಮಾಡುತ್ತಿದ್ದರು. ಆದರೆ, ಅವರು ಹೇಳಿದಂತೆ ರಾಜ್ಯ ಸರ್ಕಾರವೇನು ದಿವಾಳಿ ಆಗಿಲ್ಲ. ಎಲ್ಲಾ ಯೋಜನೆಗಳನ್ನು ನಾವು ವ್ಯವಸ್ಥಿತವಾಗಿ ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Add Asianetnews Kannada as a Preferred SourcegooglePreferred

ಸರ್ಕಾರ 100 ದಿನ ಪೂರೈಸಿದ ವಿಚಾರಕ್ಕೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ ಅವರು, ನಮಗೆ ಇದೇನು ಸವಾಲು ಅನಿಸಲಿಲ್ಲ. ಗ್ಯಾರಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇದೆ. ಹೀಗಾಗಿ ಅವುಗಳ ಜಾರಿ ಕಠಿಣ ಅನಿಸಲಿಲ್ಲ. ಮಾತು ಕೊಟ್ಟಂತೆ ಗ್ಯಾರಂಟಿಗಳ ಜಾರಿ ಮಾಡುತ್ತಿದ್ದೇವೆ ಎಂದು ಹೇಳಿದರು. ಗೃಹಲಕ್ಷ್ಮಿಗೆ ವಾರ್ಷಿಕ .32 ಸಾವಿರ ಕೋಟಿ ಖರ್ಚಾಗುತ್ತದೆ. ದೇಶದ ಇತಿಹಾಸದಲ್ಲೇ ಒಂದು ಯೋಜನೆಗೆ ಇಷ್ಟುದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದರು.

ಭಾಗ್ಯಲಕ್ಷ್ಮಿ ಯೋಜನೆಗೆ ಇಂದು ಚಾಲನೆ: ಮೈಸೂರಲ್ಲಿ ರಾರಾಜಿಸುತ್ತಿರುವ ಕಾಂಗ್ರೆಸ್ ನಾಯಕರ ಫ್ಲೆಕ್ಸ್‌..!

ಬಿಜೆಪಿಗೆ ನೈತಿಕತೆ ಇಲ್ಲ: ಬಿಜೆಪಿಯಿಂದ ಸರ್ಕಾರದ ನೂರು ದಿನಗಳ ಆಡಳಿತಕ್ಕೆ ಸಂಬಂಧಿಸಿ ಚಾಜ್‌ರ್‍ಶೀಟ್‌ ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರು. ಭ್ರಷ್ಟಾಚಾರದಲ್ಲೇ ಇವರು ಅಧಿಕಾರ ನಡೆಸಿದ್ದರು. ಹೀಗಾಗಿ, ನಮ್ಮ ಮೇಲೆ ಆರೋಪ ಮಾಡುವ ನೈತಿಕತೆ ಅವರಿಗೆ ಇಲ್ಲ. ಅವರು ಅಧಿಕಾರದಲ್ಲಿದ್ದಾಗ ಹಲವು ಹಗರಣ ಆಗಿದ್ದವು. ಅದರ ಮರು ತನಿಖೆ ಮಾಡಲು ನಮ್ಮ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ಬಿಜೆಪಿ ಸರ್ಕಾರದ ಎಲ್ಲಾ ಹಗರಣಗಳ ಬಗ್ಗೆಯೂ ತನಿಖೆ ಮಾಡುತ್ತೇವೆ. ಇದರಲ್ಲಿ ಟಾರ್ಗೆಟ್‌ ಎಂಬ ಪ್ರಶ್ನೆಯೇ ಇಲ್ಲ. ಪಿಎಸ್‌ಐ ಹಗರಣ, ಶೇ.40 ಹಗರಣ, ಕೋವಿಡ್‌ ಹಗರಣ ಎಲ್ಲವನ್ನೂ ತನಿಖೆಗೆ ಒಳಪಡಿಸಲಿದ್ದೇವೆ. ಹಗರಣದ ಬಗ್ಗೆ ತನಿಖೆ ಮಾಡಿಸದೆ, ಇವರು ತಿಂದುಕೊಂಡು ಹಾಗೇ ಹೋಗಲಿ ಎಂದು ಬಿಡಬೇಕಾ? ಅವರ ಕಾಲದಲ್ಲೇ ಹಗರಣ ತನಿಖೆಗೆ ಆಗ್ರಹಿಸಿದ್ದೇವೆ. ಅವರು ತನಿಖೆ ಮಾಡಿಸಲಿಲ್ಲ. ಹೀಗಾಗಿ ನಾವು ತನಿಖೆ ಮಾಡಿಸುತ್ತಿದ್ದೇವೆ ಎಂದು ಹೇಳಿದರು.

ನಾವಿಬ್ಬರು ಹತ್ತಿರವಾಗುತ್ತಿದ್ದೇವೆ: ಸಿಎಂ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜತೆಗಿನ ಸಂಬಂಧದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ವಿರೋಧ ಪಕ್ಷಗಳು ನಮ್ಮನ್ನು ಎಷ್ಟುದೂರ ಮಾಡಲು ಯತ್ನ ಮಾಡುತ್ತಿದ್ದಾರೋ ನಾವಿಬ್ಬರು ಅಷ್ಟು ಹತ್ತಿರವಾಗುತ್ತಿದ್ದೇವೆ ಎಂದು ತಿರುಗೇಟು ನೀಡಿದರು.

ಈ ವೇಳೆ ಮಧ್ಯಪ್ರವೇಶಿಸಿದ ಡಿ.ಕೆ. ಶಿವಕುಮಾರ್‌, ವಿರೋಧ ಪಕ್ಷಗಳು ನಮ್ಮಿಬ್ಬರ ಸಂಬಂಧದ ವಿಚಾರದ ಬಗ್ಗೆ ಮಾತನಾಡುತ್ತಲೇ ಇರಲಿ. ನಾವು ಮಾತ್ರ ಸದಾ ಒಟ್ಟಾಗಿರುವುದನ್ನು ನೀವು ನೋಡುತ್ತಾ ಇರುತ್ತೀರಿ ಎಂದು ತಿಳಿಸಿದರು.