ರಾಜ್ಯ ಸರ್ಕಾರದ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ನೋಂದಣಿಯಾಗದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕ್ರಮಗಳನ್ನು ನಿಯಂತ್ರಿಸುವುದು ಇದರ ಉದ್ದೇಶ. ಸುಗ್ರೀವಾಜ್ಞೆಯ ಕಾನೂನು ಮತ್ತು ಸಾಮಾಜಿಕ ಪರಿಣಾಮಗಳನ್ನು ಸದನಗಳಲ್ಲಿ ಚರ್ಚಿಸಬೇಕು.

ಬೆಂಗಳೂರು (ಫೆ.12): ರಾಜ್ಯ ಸರ್ಕಾರದಿಂದ ಮೈಕ್ರೋ ಫೈನಾನ್ಸ್ ಹಾವಳಿಯನ್ನು ತಗ್ಗಿಸಿ ಜನರ ಜೀವ ಉಳಿಸುವುದಕ್ಕಾಗಿ ಹೊರಡಿಸಲಾದ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ಇದರ ಬೆನ್ನಲ್ಲಿಯೇ ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯಪತ್ರದ ಮೂಲಕ ಆದೇಶವನ್ನು ಹೊರಡಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದೊಂದು ವಾರದ ಹಿಂದೆಯೇ ರಾಜ್ಯ ಸರ್ಕಾರದಿಂದ ಸಚಿವ ಸಂಪುಟದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಸುಗ್ರೀವಾಜ್ಞೆ ಜಾರಿಗೊಳಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಇದೀಗ ಕೆಲ ಸಲಹೆಗಳೊಂದಿಗೆ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಇದರ ಬೆನ್ನಲ್ಲಿಯೇ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ-2025ವನ್ನು ಕರ್ನಾಟಕ ರಾಜ್ಯಪತ್ರದ ಮೂಲಕ ಜಾರಿಗೊಳಿಸಲಾಗಿದೆ.

ಈ ಅಧ್ಯಾದೇಶದ ಪ್ರಕಾರ ನೋಂದಣಿ ಆಗದ ಮೈಕ್ರೋ ಫೈ‌ನಾನ್ಸ್ ಸಂಸ್ಥೆಗಳು ಮನಿ ಲೆಂಡಿಂಗ್ ಏಜೆನ್ಸಿಗಳ ಸಂಸ್ಥೆಗಳ ಕ್ರಮಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಉತ್ತಮ ಹೆಜ್ಜೆಯಾಗಿದೆ. ಸುಗ್ರೀವಾಜ್ಞೆಯು ಉತ್ತಮ ಉದ್ದೇಶಗಳನ್ನು ಹೊಂದಿದ್ದರೂ ಸಹ ಕಾನೂನು ಮತ್ತು ಸಾಮಾಜಿಕ ಪರಿಣಾಮವನ್ನು ಎರಡೂ ಸದನಗಳಲ್ಲಿ ವಿವರವಾಗಿ ಚರ್ಚಿಸಬೇಕಾಗಿದೆ. ಸದನವು ಈ ವಿಚಾರದ ಬಗ್ಗೆ ಚರ್ಚೆ ಮಾಡಲು ಸೂಕ್ತ ವೇದಿಕೆಯಾಗಿದೆ. ಸುಗ್ರೀವಾಜ್ಞೆಯನ್ನು ಜಾರಿಗೊಳಿಸುವ ಸಮಯದಲ್ಲಿ ಈ ಸಲಹೆಗಳನ್ನ ಪಾಲಿಸುವುದು ಅಗತ್ಯ.

ಇದನ್ನೂ ಓದಿ: ಇನ್ಮುಂದೆ ಕಿರುಕುಳ ಕೊಟ್ಟರೆ ಮೈಕ್ರೋ ಫೈನಾನ್ಸ್‌ ಪರವಾನಗಿಯೇ ರದ್ದು ಮಾಡುತ್ತಾ ಸುಗ್ರೀವಾಜ್ಞೆ? ಶಿಕ್ಷೆ, ದಂಡ ಎಷ್ಟು?

* RBI ಅಡಿ ನೋಂದಣಿಯಾದ ಎಲ್ಲಾ ಸಹಕಾರಿ ಬ್ಯಾಂಕ್‌ಗಳು, ಹಣಕಾಸು ಕಂಪನಿಗಳು, ಹೌಸಿಂಗ್ ಫೈನಾನ್ಸ್ ಕಾರ್ಪೊರೇಶನ್‌ನಿಂದ ನಿಯಂತ್ರಿಸಲ್ಪಡುವ ಸಣ್ಣ ಹಣಕಾಸು ಬ್ಯಾಂಕ್‌ಗಳು, ಸ್ಥಳೀಯ ಬ್ಯಾಂಕ್‌ಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಇದರ ವ್ಯಾಪ್ತಿಗೆ ತರಕೂಡದು.
* ಈ ಸುಗ್ರೀವಾಜ್ಞೆಯು ಕಾನೂನು ರೀತಿ ನೋಂದಣಿಯಾಗಿರುವ ಸಂಸ್ಥೆಗಳಿಗೆ ತೊಂದರೆ ಆಗಕೂಡದು.
* ಪ್ರಾಮಾಣಿಕವಾಗಿ ಸಾಲ‌ಕೊಟ್ಟವರಿಗೆ ಬಡ್ಡಿ ಸಹಿತ ವಸೂಲಿ ಮಾಡುವ ಪ್ರಕ್ರಿಯೆಯ ಬಗ್ಗೆ ಮುಂಜಾಗ್ರತೆ ವಹಿಸಿ.
* ಇಲ್ಲದಿದ್ದರೆ ಬಾಕಿ ಸಾಲದ ಮೊತ್ತವನ್ನು ಮರುಪಡೆಯಲು ತೊಂದರೆ ಆಗಬಹುದು, ಜೊತೆಗೆ ಇದು ಕಾನೂನು ಹೋರಾಟಕ್ಕೆ ಕಾರಣವೂ ಆಗಬಹುದು.
* ಸಹಜ ನ್ಯಾಯದ ಅಡಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಹಕ್ಕುಗಳು ಮತ್ತು ಕಾನೂನು ಪರಿಹಾರಗಳಿಗಾಗಿ ಹೋರಾಡುವ ಹಕ್ಕನ್ನು ಹೊಂದಿರುತ್ತಾನೆ.
* ಯಾವುದೇ ವ್ಯಕ್ತಿಗಳು ತಮ್ಮ ಹಕ್ಕುಗಳು ಮತ್ತು ಕಾನೂನು ಪರಿಹಾರಗಳಿಗಾಗಿ ಹೋರಾಡುವುದನ್ನು ತಡೆಯುವುದು ಭಾರತದ ಸಂವಿಧಾನದ 19 ಮತ್ತು 32 ನೇ ವಿಧಿಯ ಅಡಿಯಲ್ಲಿ ಇರುವ ಮೂಲಭೂತ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗಬಹುದು.
* ಆದ್ದರಿಂದ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಮರುಚಿಂತನೆ ಮಾಡಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.
* ಅಧಿವೇಶನದಲ್ಲಿ ಈ ಅಂಶಗಳನ್ನು ವಿಧೇಯಕದಲ್ಲಿ ಸೇರಿಸಲು ಸೂಕ್ತ ಕ್ರಮ ಕೈಗೊಳ್ಳಿ, ರಾಜ್ಯ ವಿಧಾನಮಂಡಲದಲ್ಲಿ ವಿವರವಾಗಿ ಚರ್ಚಿಸಿ.