ಕೋವಿಡ್ ಸಂದರ್ಭದಲ್ಲಿ ಜನರು ಹೊರಗೆ ಬರಲು ಭಯ ಪಡುವ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಜೊತೆ ಕೈಜೋಡಿಸಿ ನೀವು ಮಾಡಿರುವ ಕೆಲಸಗಳು ಗಮನಾರ್ಹವಾಗಿವೆ. ನಿಮ್ಮ ಶ್ರಮಕ್ಕೆ ತಕ್ಕ ಫಲವನ್ನು ನೀವು ಪಡೆದಿಲ್ಲ. ಆದರೆ, ನ್ಯಾಯಯುತ ಬೇಡಿಕೆಗಳನ್ನು ಪರಿಗಣಿಸಲಾಗುತ್ತದೆ ಎಂದ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ 

ಬೆಂಗಳೂರು(ಅ.08): ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗವನ್ನು ಕರೆದೊಯ್ಯುತ್ತೇನೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅಂಗವಾಡಿ ಕಾರ್ಯಕರ್ತೆಯರಿಗೆ ಭರವಸೆ ನೀಡಿದರು.

Add Asianetnews Kannada as a Preferred SourcegooglePreferred

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ನಗರದ ಶಿಕ್ಷಕರ ಸದನದಲ್ಲಿ ಸೋಮವಾರ ನಡೆದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತರ ಬಗ್ಗೆ ನನಗೆ ಅಪಾರ ಹೆಮ್ಮೆ, ಗೌರವ ಇದೆ. ಎಲ್ಲಾ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರದ ಜೊತೆ ಚರ್ಚಿಸಲು 3 ತಿಂಗಳಲ್ಲಿ ನಿಯೋಗವನ್ನು ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದರು.

ದಸರಾ, ದೀಪಾವಳಿ ಹಬ್ಬ ಬಂದ್ರೂ ಬಾರದ ಸಂಬಳ‌: ಸಿದ್ದು ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು

ಕೋವಿಡ್ ಸಂದರ್ಭದಲ್ಲಿ ಜನರು ಹೊರಗೆ ಬರಲು ಭಯ ಪಡುವ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಜೊತೆ ಕೈಜೋಡಿಸಿ ನೀವು ಮಾಡಿರುವ ಕೆಲಸಗಳು ಗಮನಾರ್ಹವಾಗಿವೆ. ನಿಮ್ಮ ಶ್ರಮಕ್ಕೆ ತಕ್ಕ ಫಲವನ್ನು ನೀವು ಪಡೆದಿಲ್ಲ. ಆದರೆ, ನ್ಯಾಯಯುತ ಬೇಡಿಕೆಗಳನ್ನು ಪರಿಗಣಿಸಲಾಗುತ್ತದೆ ಎಂದರು.

ಬೇಡಿಕೆಗಳು:

ಕನಿಷ್ಠ ವೇತನ 26,000 ರು. ನಿಗದಿ, ಸುಪ್ರೀಂಕೋರ್ಟ್ ತೀರ್ಪಿನಂತೆ ಗ್ರ್ಯಾಚುಯಿಟಿ ನೀಡುವುದು, ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು (ಐಸಿಡಿಎಸ್) ‘ಕಾಯ್ದೆ’ಯಾಗಿ ರೂಪಿಸಬೇಕು. ಪೌಷ್ಠಿಕ ಆಹಾರ ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣ ‘ಹಕ್ಕು’ ಆಗಬೇಕು. ಐಸಿಡಿಎಸ್ ಯೋಜನೆಯ ಬಜೆಟ್ ಹೆಚ್ಚಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಕೊಡುವ ಪೂರಕ ಪೌಷ್ಠಿಕ ಆಹಾರಕ್ಕೆ ಜಿಎಸ್‌ಟಿ ವಿಧಿಸುವುದನ್ನು ನಿಲ್ಲಿಸಬೇಕು. ವಿವಿಧ ಚುನಾವಣಾ ಕೆಲಸಗಳಿಂದ ಮುಕ್ತಿ ಸೇರಿದಂತೆ ಇನ್ನಿತರ ಬೇಡಿಕೆಗಳ ಪಟ್ಟಿಯನ್ನು ಕೇಂದ್ರ ಸಚಿವ ಸೋಮಣ್ಣ ಅವರಿಗೆ ಅಂಗನವಾಡಿ ನೌಕರರ ಸಂಘದಿಂದ ಹಸ್ತಾಂತರಿಸಲಾಯಿತು.

ವಿಚಾರ ಸಂಕಿರಣದಲ್ಲಿ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮೀ ಸೇರಿದಂತೆ ವಿವಿಧ ರಾಜ್ಯಗಳ ಅಂಗನವಾಡಿ ಸಂಘಗಳ ಮುಖಂಡರು ಭಾಗವಹಿಸಿದ್ದರು.