ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿಯ ಪ್ರಥಮ ಚುನಾವಣೆಯಲ್ಲಿ ಕಾಂಗ್ರೆಸ್ ಎಲ್ಲ 15 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಸಲೀಂ ಅಹ್ಮದ್ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಗೆಲುವಿಗೆ ಶ್ರೀರಕ್ಷೆಯಾಗಿವೆ ಎಂದು ಅವರು ಹೇಳಿದರು.

ರಟ್ಟೀಹಳ್ಳಿ (ಜುಲೈ.29): ಆ. 17ರಂದು ಇಲ್ಲಿನ ಪಟ್ಟಣ ಪಂಚಾಯಿತಿಯ ಪ್ರಥಮ ಚುನಾವಣೆ ನಡೆಯಲಿದ್ದು, ರಾಜ್ಯದ ಕುತೂಹಲ ಕೆರಳಿಸಿದೆ. ಪಪಂನ 15 ಸ್ಥಾನಗಳನ್ನೂ ಗೆಲ್ಲುವ ಮೂಲಕ ಕಾಂಗ್ರೆಸ್ ಇತಿಹಾಸ ಬರೆಯಲಿದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ವಿಶ್ವಾಸ ವ್ಯಕ್ತಪಡಿಸಿದರು.

Add Asianetnews Kannada as a Preferred SourcegooglePreferred

ಸೋಮವಾರ ಪಟ್ಟಣದ ವೀರಭದ್ರೇಶ್ವರ ಕಲ್ಯಾಣಮಂಟಪದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸರ್ಕಾರವು ಎಲ್ಲ ಸಮಾಜದ ಅಭಿವೃದ್ಧಿಗಾಗಿ ಯೋಜನೆಗಳನ್ನು ನೀಡುತ್ತಿದೆ. ತಾಲೂಕಿನ ಅಭಿವೃದ್ಧಿಗಾಗಿ ಶಾಸಕ ಯು.ಬಿ. ಬಣಕಾರ ಅವರೂ ಶ್ರಮಿಸುತ್ತಿದ್ದಾರೆ ಎಂದರು.

ರಾಜ್ಯದ ಕಾಂಗ್ರೆಸ್‌ ಸರ್ಕಾರವು ನುಡಿದಂತೆ ನಡೆದಿದೆ. ಚುನಾವಣೆ ಸಂದರ್ಭದಲ್ಲಿ ಘೋಷಿಸಿದ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಗ್ಯಾರಂಟಿ ಯೋಜನೆಗಳಿಗೆ ಪ್ರತಿವರ್ಷ ₹52 ಸಾವಿರ ಕೋಟಿ ನೀಡುತ್ತಿದೆ. ಸ್ಥಳೀಯ ಚುನಾವಣೆಗಳಲ್ಲಿ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆಯಾಗಿವೆ ಎಂದರು.

ಬಿಜೆಪಿಯವರಿಗೆ ಚುನಾವಣೆ ಸಂದರ್ಭದಲ್ಲಿ ಮತ ಕೇಳುವ ನೈತಿಕತೆ ಇಲ್ಲ. ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ಅಪಹಾಸ್ಯ ಮಾಡುವ ಮೂಲಕ ಬಡವರ, ದೀನ ದಲಿತರ, ಹಿಂದುಳಿದ ವರ್ಗ ಹೀಗೆ ಎಲ್ಲ ವರ್ಗಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಪ್ರತಿ ಮನೆಗಳಲ್ಲೂ ಗ್ಯಾರಂಟಿ ಫಲಾನುಭವಿಗಳಿದ್ದಾರೆ ಎಂದರು.

ಚುನಾವಣಾ ವೀಕ್ಷಕ, ಮಾಜಿ ಸಚಿವ ಎಚ್. ಆಂಜನೇಯ ಮಾತನಾಡಿ, ಪಟ್ಟಣಕ್ಕೆ ಪ್ರಮುಖವಾಗಿ ಸ್ವಚ್ಛತೆ, ಒಳಚರಂಡಿ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್, ಗುಣಮಟ್ಟದ ರಸ್ತೆ ಬೇಕು. ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ಆ. 5ರ ಒಳಗಾಗಿ ಎಲ್ಲ ವಾರ್ಡ್‌ಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಬಿ ಫಾರಂ ನೀಡಲಾಗುವುದು ಎಂದರು.ಶಾಸಕ ಯು.ಬಿ. ಬಣಕಾರ ಮಾತನಾಡಿ, ನಮ್ಮ ಗುರಿ ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ 15 ವಾರ್ಡ್‌ಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸುವುದು ನಮ್ಮ ಗುರಿಯಾಗಿದೆ. ಕಾರ್ಯಕರ್ತರು ಒಳಜಗಳವನ್ನು ಬಿಟ್ಟು ಪಕ್ಷದ ಹಿರಿಯರು ಯಾರಿಗೆ ಬಿ ಫಾರಂ ನೀಡುತ್ತಾರೆಯೋ ಅವರ ಗೆಲುವಿಗೆ ಶ್ರಮಿಸಬೇಕು ಎಂದರು.

ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಡಿ. ಬಸನಗೌಡ್ರ ಮಾತನಾಡಿದರು. ವಸಂತ ದ್ಯಾವಕ್ಕಳವರ, ಎಸ್.ಬಿ. ತಿಪ್ಪಣ್ಣನವರ, ಎಸ್.ಬಿ. ತಿಪ್ಪಣ್ಣನವರ, ಪ್ರಕಾಶ ಬನ್ನಿಕೋಡ, ಹನುಮಂತಗೌಡ ಭರಮಣ್ಣನವರ, ಮಹೇಶ ಗುಬ್ಬಿ, ರಮೇಶ ಮಡಿವಾಳರ, ಮಂಜುನಾಥ ತಂಬಾಕದ, ಮಕಬುಲ್‍ಸಾಬ್ ಹಳಿಯಾಳ, ಪ್ರೀತಂ ಪಾಟೀಲ್, ಸುರೇಶ ಮಡಿವಾಳರ, ಮಹೇಂದ್ರ ಬಡಳ್ಳಿ, ಬಸವರಾಜ ಹೆಡಿಗೊಂಡರ, ನಿಂಗಪ್ಪ ಕಡೂರ, ಬಾಬುಸಾಬ್ ಜಡದಿ, ವಿನಯ ಪಾಟೀಲ್, ಜಾಕೀರ ಮುಲ್ಲಾ, ರಮೇಶ ಭೀಮಪ್ಪನವರ, ವಿಜಯ ಅಂಗಡಿ, ಮಂಜು ಅಸ್ವಾಲಿ, ಮಂಜು ಮಾಸೂರ, ವೀರೇಶ ಕೋರಿಶೆಟ್ಟರ್, ಹಾಗೂ ಟಿಕೆಟ್ ಆಕಾಂಕ್ಷಿಗಳು, ಕಾರ್ಯಕರ್ತರು ಇದ್ದರು.