Asianet Suvarna News Asianet Suvarna News

Har Ghar Tiranga: 1 ಕೋಟಿ ರಾಷ್ಟ್ರಧ್ವಜ ಹಾರಾಟ ಗುರಿ: ಸಿಎಂ ಬೊಮ್ಮಾಯಿ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ರೂಪಿಸಿರುವ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ (ಹರ್‌ ಘರ್‌ ತಿರಂಗಾ) ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ 1 ಕೋಟಿ ರಾಷ್ಟ್ರಧ್ವಜ ಹಾರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

har ghar tiranga 1 crore flags hosting will be done in karnataka says cm basavaraj bommai gvd
Author
Bangalore, First Published Jul 18, 2022, 5:01 AM IST

ಬೆಂಗಳೂರು (ಜು.18): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ರೂಪಿಸಿರುವ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ (ಹರ್‌ ಘರ್‌ ತಿರಂಗಾ) ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ 1 ಕೋಟಿ ರಾಷ್ಟ್ರಧ್ವಜ ಹಾರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಸಂಸ್ಕೃತಿ ಸಚಿವ ಕಿಶನ್‌ ರೆಡ್ಡಿ ಅವರು ‘ಆಜಾದಿ ಕಾ ಅಮೃತ ಮಹೋತ್ಸವ’ ಅಂಗವಾಗಿ ಆಯೋಜಿಸಿರುವ ‘ಹರ್‌ ಘರ್‌ ತಿರಂಗಾ’ ಕುರಿತ ಭಾನುವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಆ.13ರಿಂದ 15ರ ವರೆಗೆ 1 ಕೋಟಿ ರಾಷ್ಟ್ರಧ್ವಜ ಹಾರಿಸಲು ಕ್ರಮ ವಹಿಸಲಾಗಿದೆ. ಈ ಪೈಕಿ ಶೇ.60ರಷ್ಟುಗ್ರಾಮೀಣ ಪ್ರದೇಶದ ಸರ್ಕಾರಿ, ಖಾಸಗಿ ಕಚೇರಿಗಳು, ಶಾಲೆ, ಕಾಲೇಜುಗಳು, ಅತಿ ಹೆಚ್ಚು ಜನಸಂಖ್ಯೆ ಇರುವ ಹಳ್ಳಿಗಳಲ್ಲಿ ಹಾರಿಸಲಾಗುವುದು. ಉಳಿದ ಶೇ.40ರಷ್ಟುರಾಷ್ಟ್ರದ್ವಜಗಳನ್ನು ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ನಗರ ಪ್ರದೇಶಗಳಲ್ಲಿ ಹಾರಿಸಲು ಕ್ರಮ ವಹಿಸಲಾಗಿದೆ ಎಂದರು.

ನೆರೆ ನಿರ್ವಹಣೆಗೆ ರಾಜ್ಯದಲ್ಲಿ ಹೊಸ ವ್ಯವಸ್ಥೆ: ಸಿಎಂ ಬೊಮ್ಮಾಯಿ

ಹಲವು ಸಮಿತಿ ರಚನೆ: ರಾಜ್ಯದಲ್ಲಿ ಹರ್‌ ಘರ್‌ ತಿರಂಗಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಪೊಲೀಸ್‌ ಇಲಾಖೆ ನೇತೃತ್ವದಲ್ಲಿ ಈಗಾಗಲೇ ಈ ಕಾರ್ಯಕ್ರಮ ಅನುಷ್ಠಾನಕ್ಕೆ ಸಭೆಗಳು ನಡೆಯುತ್ತಿವೆ. ಎಲ್ಲಾ ಸರ್ಕಾರಿ ಅಧಿಕಾರಿಗಳಿಗೆ ಈಗಾಗಲೇ ಸುತ್ತೋಲೆಗಳನ್ನು ನೀಡಲಾಗಿದ್ದು, ಎಲ್ಲಾ ಶಾಲಾ, ಕಾಲೇಜು, ಅಂಗನವಾಡಿಗಳಲ್ಲೂ ರಾಷ್ಟ್ರಧ್ವಜ ಹಾರಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಜತೆಗೆ ಎನ್‌ಸಿಸಿ, ಎನ್‌ಎಸ್‌ಎಸ್‌, ಸ್ವಯಂ ಸೇವಕರು, ಮಾಜಿ ಸೈನಿಕರು, ಸಾರ್ವಜನಿಕ ಸಂಘ ಸಂಸ್ಥೆಗಳು ಕಾರ್ಯಕ್ರಮದ ಯಶಸ್ವಿಗೆ ಸರ್ಕಾರದೊಂದಿಗೆ ಕೈಜೋಡಿಸಿವೆ ಎಂದು ಹೇಳಿದರು.

ಧಾರವಾಡದಿಂದ 50 ಲಕ್ಷ ರಾಷ್ಟ್ರಧ್ವಜ: ಈ ಕಾರ್ಯಕ್ರಮಕ್ಕೆ ಅಗತ್ಯ ಪ್ರಮಾಣದಷ್ಟುಧ್ವಜ ತಯಾರಿಸಿ, ದೇಶಾದ್ಯಂತ ಪೂರೈಸುತ್ತಿರುವ ಧಾರವಾಡದ ಬಳಿಯಿರುವ ರಾಷ್ಟ್ರ ಧ್ವಜ ಉತ್ಪಾದಕ ಸಂಸ್ಥೆ, ಸ್ವಸಹಾಯ ಸಂಘಗಳ ಮೂಲಕ 50 ಲಕ್ಷದಷ್ಟುಧ್ವಜಗಳನ್ನು ರಾಜ್ಯಕ್ಕಾಗಿಯೇ ಉತ್ಪಾದಿಸಲಿದ್ದೇವೆ. 5 ಲಕ್ಷ ತ್ರಿವರ್ಣ ಧ್ವಜಗಳನ್ನು ಪೂರೈಸಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಇಂಡೆಂಟ್‌ ನೀಡಲಾಗಿದ್ದು, ಉಳಿದ 45 ಲಕ್ಷ ತ್ರಿವರ್ಣ ಧ್ವಜಗಳನ್ನು ಪೂರೈಸಲು ಕೇಂದ್ರ ಸರ್ಕಾರಕ್ಕೆ ಇಂಡೆಂಟ್‌ ನೀಡಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದ್ದಾರೆ.

ಕಾರ್ಯಕ್ರಮ ಏಕೆ?: ಕಾರ್ಯಕ್ರಮದ ಎರಡು ದಿನಗಳ ಮೊದಲೇ ರಾಷ್ಟ್ರಧ್ವಜಗಳನ್ನು ನಿಗದಿತ ಸ್ಥಳಗಳಿಗೆ ತಲುಪಿಸಲಾಗುವುದು. ದೇಶದ ಜನರಲ್ಲಿ ರಾಷ್ಟ್ರೀಯತೆ ಹಾಗೂ ದೇಶಭಕ್ತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ ಈ ಕಾರ್ಯಕ್ರಮ ಅತ್ಯಂತ ಮಹತ್ವದ್ದಾಗಿದೆ. ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಪಾತ್ರ ಮೆಚ್ಚುವಂತದ್ದು. ರಾಷ್ಟ್ರಧ್ವಜ ಎಂಬುದು ನಮ್ಮ ಭಾವನಾತ್ಮಕ ಸೆಲೆಯಾಗಿರುವುದರಿಂದ ಕಾರ್ಯಕ್ರಮದ ಮೂಲಕ ದೇಶದಲ್ಲಿ ಏಕತೆಯನ್ನು ಸಾರುತ್ತಿರುವುದಕ್ಕೆ ಸಂತಸವಾಗುತ್ತಿದೆ ಎಂದರು.

ವಾರದಲ್ಲಿ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಸಮಸ್ಯೆ ಪರಿಹಾರ: ಸಿಎಂ ಬೊಮ್ಮಾಯಿ

ವಿಡಿಯೋ ಸಂವಾದದದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್‌ ಕುಮಾರ್‌, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ ಪ್ರಸಾದ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುಳಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಡಾ. ಪಿ.ಎಸ್‌.ಹರ್ಷ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Follow Us:
Download App:
  • android
  • ios