ಬೇಲೂರಿನಲ್ಲಿ ಗಣಪತಿ ಮೂರ್ತಿಯ ಮೇಲೆ ಚಪ್ಪಲಿ ಇಟ್ಟ ಘಟನೆ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಸಿಸಿ ಕ್ಯಾಮೆರಾ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಮಾನಸಿಕ ಅಸ್ವಸ್ಥ ಮಹಿಳೆಯನ್ನು ಶಂಕಿಸಿದ್ದು, ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿ ಹಿಂದೂ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸುತ್ತಿವೆ.

ಹಾಸನ (ಸೆ.21): ಬೇಲೂರಿನ ಪುರಸಭೆ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಯ ಮೇಲೆ ಚಪ್ಪಲಿ ಇಟ್ಟಿದ್ದ ಘಟನೆ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಪೊಲೀಸರು ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಆಧರಿಸಿ ನಡೆಸಿದ ತನಿಖೆಯಲ್ಲಿ, ಈ ಕೃತ್ಯವನ್ನು ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಮಾಡಿದ್ದಾರೆ ಎಂಬುದು ಮೇಲ್ನೋಟಕ್ಕೆ ದೃಢಪಟ್ಟಿದೆ. ಆದರೂ, ಹಿಂದೂ ಸಂಘಟನೆಗಳ ಆಕ್ರೋಶ ತೀವ್ರಗೊಂಡಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿಸಿ ಕ್ಯಾಮರಾದಲ್ಲಿ ಘಟನೆಯ ದೃಶ್ಯ ಸೆರೆ:

ಪೊಲೀಸರ ತನಿಖೆಯ ವೇಳೆ, ದೇವಸ್ಥಾನಕ್ಕೆ ಪ್ರವೇಶಿಸುವ ಮತ್ತು ಹೊರ ಹೋಗುವ ಮಹಿಳೆಯ ಚಲನವಲನಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ವಿಡಿಯೋದಲ್ಲಿ, ಆ ಮಹಿಳೆ ಚಪ್ಪಲಿಗಳನ್ನು ಹಾಕಿ ದೇವಾಲಯದ ಒಳಗೆ ಪ್ರವೇಶಿಸುವುದು ಕಂಡುಬಂದಿದೆ. ಮೂರ್ತಿಯ ಮೇಲಿದ್ದ ಚಪ್ಪಲಿ ಮತ್ತು ಮಹಿಳೆ ಧರಿಸಿದ್ದ ಚಪ್ಪಲಿಗಳ ನಡುವೆ ಹೊಂದಾಣಿಕೆ ಕಂಡುಬಂದಿದ್ದು, ಪೊಲೀಸರು ಆಕೆ ಈ ಕೃತ್ಯವನ್ನು ಎಸಗಿರಬಹುದೆಂದು ಅಂದಾಜಿಸಿದ್ದಾರೆ. ಪ್ರಸ್ತುತ, ಪೊಲೀಸರು ಮಹಿಳೆಯ ಮಾನಸಿಕ ಸ್ಥಿತಿಯನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಆದರೆ, ಈ ಘಟನೆಯು ಸ್ಥಳೀಯರಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಬಿಜೆಪಿ ನಾಯಕ ಸಿ.ಟಿ. ರವಿ ಆಗಮನ, ಪ್ರತಿಭಟನೆ ತೀವ್ರ:

ಈ ಘಟನೆ ಕುರಿತು ಮಾಹಿತಿ ಪಡೆದ ಬಿಜೆಪಿ ನಾಯಕ ಸಿ.ಟಿ. ರವಿ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು. ಅವರ ಆಗಮನದ ನಂತರ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದ್ದು, ನೂರಾರು ಹಿಂದು ಕಾರ್ಯಕರ್ತರು ಪುರಸಭೆ ಆವರಣದಲ್ಲಿ ಸೇರಿ ತಪ್ಪಿತಸ್ಥರನ್ನು ಬಂಧಿಸುವಂತೆ ಘೋಷಣೆ ಕೂಗಿದರು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದವೂ ನಡೆದಿದ್ದು, ಪೊಲೀಸರು ಶಾಲು ಹಿಡಿದು ತಳ್ಳಿದರು ಎಂದು ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಮಧ್ಯಾಹ್ನ 12.30ರೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ತೀವ್ರಗೊಳಿಸುವುದಾಗಿ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ಈ ಬೆಳವಣಿಗೆಗಳ ಬೆನ್ನಲ್ಲೇ, ಶಾಸಕ ಹೆಚ್.ಕೆ. ಸುರೇಶ್ ಅವರ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಎಸ್‌ಪಿ ಮೊಹಮ್ಮದ್ ಸುಜೀತಾ ಅವರು ಶಾಸಕ ಸುರೇಶ್ ಮತ್ತು ಬಿಜೆಪಿ ನಾಯಕ ಸಿ.ಟಿ. ರವಿ ಅವರೊಂದಿಗೆ ಸಭೆ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಪೊಲೀಸರು ನಿಷ್ಪಕ್ಷಪಾತ ತನಿಖೆಗೆ ಭರವಸೆ ನೀಡಿದ್ದು, ಮುಂದಿನ ದಿನಗಳಲ್ಲಿ ಘಟನೆಯ ಸತ್ಯಾಸತ್ಯತೆ ಬಯಲಾಗಲಿದೆ.